ಹೊಸವರ್ಷಾಚರಣೆ ವೇಳೆ ಅಹಿತಕರ ಘಟನೆ ನಡೆಯದಂತೆ ಕ್ರಮಕ್ಕೆ ಸೂಚನೆ: ಜಿ.ಪರಮೇಶ್ವರ್

2 years ago

ಬೆಂಗಳೂರು: ಹೊಸ ವರ್ಷಾಚರಣೆ ಸಮಯದಲ್ಲಿ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ತೀವ್ರ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ ನಿರ್ದೇಶನ ನೀಡಿದ್ದಾರೆ.

ಹೊಸ ವರ್ಷದ ಸಂಭ್ರಮಕ್ಕೆ ಕಿಚ್ಚು ಹಚ್ಚುವ ರೀತಿಯಲ್ಲಿ ಕೆಲ ದುಷ್ಕರ್ಮಿಗಳು ಶಾಂತಿ ಭಂಗಕ್ಕೆ ಸಂಚು ಮಾಡಿದ್ದಾರೆ ಎಂಬ ಗುಪ್ತಚರ ಸಂಸ್ಥೆಗಳ ವರದಿ ಹಿನ್ನೆಲೆಯಲ್ಲಿ ಅವರು  ಪೊಲೀಸ್ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.

ಕೋವಿಡ್ ಸಾಂಕ್ರಾಮಿಕ ರೋಗ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳು ಮತ್ತು ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಅನುಸರಿಸಬೇಕಾದ ಕ್ರಮಗಳ ಕುರಿತು ಪೊಲೀಸ್ ಇಲಾಖೆ, ಆರೋಗ್ಯ, ಅಬಕಾರಿ ಇಲಾಖೆ, ಬಿಬಿಎಂಪಿ, ಬಿಎಂಆರ್ಸಿಎಲ್, ಬಿಎಂಟಿಸಿಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಪ್ರಮುಖ ನಗರಗಳು, ಪ್ರವಾಸಿ ತಾಣಗಳು ಹಾಗೂ ಹೋಟೆಲ್ ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನರು ಸೇರುವ ಸಾಧ್ಯತೆ ಇದೆ. ಈ ವೇಳೆ ಕಾನೂನು ಸುವ್ಯವಸ್ಥೆಗೆ ಭಂಗ ಬರದಂತೆ ನೋಡಿಕೊಳ್ಳಬೇಕು. ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಎಲೆಕ್ಟ್ರಾನಿಕ್ ಸಿಟಿ, ಇಂದಿರಾನಗರ ಹಾಗೂ ಶಾಪಿಂಗ್ ಮಾಲ್, ಸ್ಟಾರ್ ಹೋಟೆಲ್ಗಳಲ್ಲಿ ಹೊಸ ವರ್ಷ ಆಚರಿಸಲು ಹೆಚ್ಚಿನ ಜನಸಂಖ್ಯೆ ಸೇರುವ ಸಾಧ್ಯತೆ ಇದೆ. ಎಲ್ಲ ರೀತಿಯ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಎನ್ಐಎ ಅಧಿಕಾರಿಗಳು ಕಳೆದೊಂದು ತಿಂಗಳಿನಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ದಾಳಿ ನಡೆಸಿ, ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಕ್ರಿಸ್ಮಸ್ ಹಬ್ಬ, ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಹೊರಗಡೆಯಿಂದ ಬರುವರ ಚಲನವಲನಗಳ ಬಗ್ಗೆ ಸೂಕ್ತ ನಿಗಾವಹಿಸಬೇಕು ಎಂದರು.

ಹೊಸ ವರ್ಷ ಆಚರಿಸಲು ಜನ ಸೇರುವ ಪ್ರಮುಖ ಸ್ಥಳಗಳನ್ನು ಗುರುತಿಸಿ, ಪೊಲೀಸ್ ಅಧಿಕಾರಿಗಳು ಪರಿಶೀಲಿಸಬೇಕು. ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ಬಂದೋಬಸ್ತ್ಗೆ ನಿಯೋಜಿಸಬೇಕು. ಎಸ್ಡಿಆರ್ಎಫ್ ತಂಡಗಳು ಇರಬೇಕು. ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರೋಡ್ಗಳಲ್ಲಿ ಬಿಬಿಎಂಪಿಯವರು ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ತೆರೆಯಬೇಕು. ರಾಜ್ಯದ ಇತರ ನಗರದಲ್ಲೂ ಚಿಕಿತ್ಸಾ ಕೇಂದ್ರ ಸ್ಥಾಪಿಸಬೇಕು. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳೀಯ ಆಸ್ಪತ್ರೆಗಳಿಗೆ ಭೇಟಿ ನೀಡಿ, ಡಿಸೆಂಬರ್ 31ರ ತಡರಾತ್ರಿ ತುರ್ತು ಚಿಕಿತ್ಸೆಗಾಗಿ ಅಲರ್ಟ್ ಇರುವಂತೆ ತಿಳಿಸಬೇಕು ಎಂದು ನಿರ್ದೇಶನ ನೀಡಿದರು.

ಎಂಜಿ.ರಸ್ತೆ, ಬ್ರಿಗೇಡ್ ರೋಡ್, ಇಂದಿರಾನಗರ, ಎಲೆಕ್ಟ್ರಾನಿಕ್ ಸಿಟಿಗಳಲ್ಲಿನ ರಸ್ತೆಗಳಲ್ಲಿ ಪಬ್ ಮತ್ತು ಬಾರ್, ಶಾಪಿಂಗ್ ಮಾಲ್, ಸ್ಟಾರ್ ಹೋಟೆಲ್ಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಿದ್ದಾರೆ. ಇದರಿಂದ ಅವಘಡಗಳಾಗುವ ಸಾಧ್ಯತೆ ಇರುತ್ತದೆ. ಅಗ್ನಿಶಾಮಕ ದಳ ಸಿಬ್ಬಂದಿ ಅಲರ್ಟ್ ಆಗಿರಬೇಕು. ಪಬ್ ಮತ್ತು ಬಾರ್ಗಳು ಸುರಕ್ಷತಾ ಕ್ರಮಕೈಗೊಂಡಿವೆಯೇ ಎಂಬುದನ್ನು ಪರಿಶೀಲಿಸಿ. ಮೇಲ್ಚಾವಣಿಗಳಲ್ಲಿ ಕಿಚನ್ ತೆರೆಯಲು ಅವಕಾಶ ನೀಡಬೇಡಿ. ಮದ್ಯದ ಅಂಗಡಿಗಳು ಎಂದಿನಂತೆಯೇ ತೆರೆದಿರಬೇಕು. ಹೆಚ್ಚಿನ ಸಮಯಾವಕಾಶ ನೀಡುವುದು ಬೇಡ ಎಂದರು.

ಹೊಸವರ್ಷಾರಣೆಗೆ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ತಾತ್ಕಲಿಕ “ಪೊಲೀಸ್ ಹೆಲ್ಪ್ ಡೆಸ್ಕ್” ತೆರೆಯಬೇಕು. ಈ ಬಗ್ಗೆ ಜನರಿಗೆ ಅನೌನ್ಸ್ಮೆಂಟ್ ಮಾಡಬೇಕು. ಮೆಟ್ರೋ ರೈಲುಗಳು ಹೆಚ್ಚಿನ ಅವಧಿಯವರೆಗೆ ಸಂಚರಿಸಲಿ. ಅಲ್ಲದೇ, ಬಿಎಂಟಿಸಿ ವತಿಯಿಂದ ಪ್ರತ್ಯೇಕ ಬಸ್ಗಳನ್ನು ಬಿಡಬೇಕು. ಖಾಸಗಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚುಸಿದರು.

ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ್, ಅಗ್ನಿಶಾಮಕ ವಿಭಾಗದ ಮುಖ್ಯಸ್ಥ ಕಮಾಲ್ ಪಂತ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸೇರಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply