ಕೋಲಾರ: ಕಂದಾಯ ಅಧಿಕಾರಿಗಳು ಸಂವೇದನಾಶೀಲತೆಯಿಂದ ಕಾರ್ಯ ನಿರ್ವಹಿಸಿದರೆ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ನೀಡಬಹುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅಭಿಪ್ರಾಯಪಟ್ಟರು.
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ತಕರಾರು, ಪೈಕಿ ಪಹಣಿ ಹಾಗೂ ನಮೂನೆ 53, 57 ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಅಧಿಕವಾಗುತ್ತಿದ್ದು, ಈ ಎಲ್ಲಾ ಪ್ರಕರಣಗಳಿಗೆ ಕಾಲಮಿತಿಯೊಳಗೆ ಪರಿಹಾರ ನೀಡಬೇಕು. ಡಿಸಿ-ಎಸಿ ಹಾಗೂ ತಹಶೀಲ್ದಾರ್ ನ್ಯಾಯಾಲಯಗಳು ತತ್ವರಿತಗತಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪೈಕಿ ಪಹಣಿ ಪ್ರಕರಣಗಳ ಸಂಖ್ಯೆ ಜಿಲ್ಲೆಯಲ್ಲಿ ಅಧಿಕವಾಗಿದ್ದು,. ಹಲವು ಪ್ರಕರಣಗಳಲ್ಲಿ ಒಂದು ಸರ್ವೇ ನಂಬರ್ ನಲ್ಲಿ 50-100 ಜನರ ಹೆಸರುಗಳು ಇದ್ದು, ಕನಿಷ್ಟ ಕಲಂ 3 ಮತ್ತು 9 ರ ನಡುವೆ ತಾಳೆ ಇರುವ ಪ್ರಕರಣಗಳಲ್ಲಿ ಸರ್ಕಾರವೇ ಕ್ಯಾಂಪೇನ್ ಮೂಲಕ ಪೋಡಿ ಮಾಡಿಕೊಡಲು ಸಿದ್ದವಿದೆ” ಈ ಪ್ರಕರಣಗಳ ಜೊತೆಗೆ ನಮೂನೆ 53, 57 ಪ್ರಕರಣಗಳನ್ನೂ ಕಾಲಮಿತಿಯೊಳಗೆ ಅಧಿಕಾರಿಗಳು ಪರಿಹರಿಸಬೇಕು” ಎಂದು ಸೂಚಿಸಿದರು.
ಉತ್ತಮ ಹಾಗೂ ಜನಪರ ಆಡಳಿತ ನೀಡಲಿದೆ ಎಂಬ ವಿಶ್ವಾಸದಿಂದ ಮತದಾರರು ನಮಗೆ ಇತಿಹಾಸ ಕಾಣದ ಬಹುಮತ ನೀಡಿದ್ದಾರೆ. ಹೀಗಾಗಿ ಜನಸ್ನೇಹಿ ಆಡಳಿತ ನೀಡಬೇಕು ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಶಯ. ಅಲ್ಲದೆ, ಕಂದಾಯ ಇಲಾಖೆ ಎಲ್ಲಾ ಇಲಾಖೆಗಳ ಮಾತೃ ಇಲಾಖೆ. ಹೀಗಾಗಿ ಈ ಇಲಾಖೆಯಲ್ಲೂ ಸಕಾರಾತ್ಮಕ ಬದಲಾವಣೆ ತರಬೇಕು ಎಂಬ ಕಾರಣದಿಂದಲೇ ನನಗೆ ಈ ಜವಾಬ್ದಾರಿಯನ್ನು ನೀಡಲಾಗಿದೆ. ಆದರೆ, ಅಧಿಕಾರಿಗಳ ಸಹಕಾರ ಇಲ್ಲದೆ ಯಾವ ಬದಲಾವಣೆಯೂ ಸಾಧ್ಯವಿಲ್ಲ. ಅಧಿಕಾರಿಗಳು ಉತ್ತಮ ಆಡಳಿತಕ್ಕೆ ಸಹಕರಿಸಿದರೆ, ಎಲ್ಲರೂ ಒಟ್ಟಾಗಿ ಭ್ರಷ್ಟಾಚಾರ ಮುಕ್ತ ಜನಪರ ಸೇವೆ ನೀಡಬಹುದು” ಎಂದರು.
ತಕರಾರು ಪ್ರಕರಣಗಳನ್ನು ಶೀಘ್ರ ಮತ್ತು ದಕ್ಷವಾಗಿ ಇತ್ಯರ್ಥಗೊಳಿಸಿ: ಜಿಲ್ಲೆಯಲ್ಲಿ ಸಾವಿರಾರು ತಕರಾರು ಪ್ರಕರಣಗಳು ಬಾಕಿ ಇವೆ. ಈ ಎಲ್ಲಾ ಪ್ರಕರಣಗಳನ್ನೂ ಶೀಘ್ರದಲ್ಲೇ ವಿಲೇವಾರಿ ಮಾಡಬೇಕು. ಕೆಲವು ಜಿಲ್ಲೆಗಳಲ್ಲಿ ಈ ಪ್ರಕರಣಗಳ ಶೀಘ್ರ ಇತ್ಯರ್ಥವಾಗುತ್ತಿದ್ದು, ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿ ನ್ಯಾಯಾಲಯಗಳು ವಾರದಲ್ಲಿ ಕನಿಷ್ಟ ನಾಲ್ಕು ದಿನ ಕಾರ್ಯ ನಿರ್ವಹಿಸಬೇಕು ಎಲ್ಲಾ ತಕರಾರು ಪ್ರಕರಣಗಳನ್ನೂ ಶೀಘ್ರ ವಿಲೇವಾರಿಗೊಳಿಸಬೇಕು. ಹಾಗೆಂದು ಗುಣಮಟ್ಟದಲ್ಲಿ ಯಾವುದೇ ಹೊಂದಾಣಿಕೆ ಸಲ್ಲ” ಎಂದರು.
ವಿಚಾರಣೆಯಾಗಿ ಆದೇಶಕ್ಕಾಗಿ ಕಾಯ್ದಿರಿಲ್ಪಟ್ಟ ಪ್ರಕರಣಗಳ ಬಗ್ಗೆಯೂ ಗಮನ ಸೆಳೆದ ಸಚಿವರು, “ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ನ್ಯಾಯಾಲಯದಲ್ಲಿ ವಿಚಾರಣೆಯಾಗಿ ಆದೇಶಕ್ಕೆ ಕಾಯ್ದಿರಿಸಲ್ಪಟ್ಟ ಪ್ರಕರಣಗಳ ವಿಲೇವಾರಿಗೂ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿರುವುದು ಸರಿಯಲ್ಲ. ಆದೇಶಕ್ಕೆ ಕಾಯ್ದಿರಿಸಲ್ಪಟ್ಟ ಪ್ರಕರಣಗಳಿಗೆ ಸಂಬಂಧಿಸಿದಂತೆ 15 ದಿನಗಳೊಳಗಾಗಿ ಆದೇಶ ಹೊರಡಿಸಬೇಕು ಎಂಬ ಕಾನೂನು ಇದೆ. ಕಾನೂನಿನನ್ವಯ ಅಧಿಕಾರಿಗಳು ತುರ್ತಾಗಿ ಆದೇಶ ಹೊರಡಿಸಬೇಕು” ಎಂದು ತಾಕೀತು ಮಾಡಿದರು.
ಎ.ಸಿ ನ್ಯಾಯಾಲಯಗಳಲ್ಲಿ 3170 ಪ್ರಕರಣಗಳು ಬಾಕಿ ಇವೆ. 806 ಪ್ರಕರಣ 5 ವರ್ಷಗಳಿಗೂ ಹೆಚ್ಚು ಬಾಕಿ ಇವೆ, 281 ಪ್ರಕರಣ 2 ರಿಂದ 5 ವರ್ಷಳಿಂದ ಬಾಕಿ ಇವೆ. ಡಿ.ಸಿ ನ್ಯಾಯಾಲಯದಲ್ಲಿ 53 ಪ್ರಕರಣಗಳು ಬಾಕಿ ಇವೆ, ಇವೆಲ್ಲವನ್ನು 3 ತಿಂಗಳ ಒಳಗೆ ವಿಲೇ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಈಗಾಗಲೇ ಪೈಲಟ್ ಯೋಜನೆಯ ರೂಪದಲ್ಲಿ 6 ತಾಲೂಕುಗಳಲ್ಲಿ ದಾಖಲೆ ಡಿಜಿಟಲೀಕರಣ ಮಾಡಲಾಗುತ್ತಿದೆ. ಎಲ್ಲಾ ದಾಖಲೆಗಳನ್ನೂ ಡಿಜಿಟಲೀಕರಣ ಮಾಡುವ ಮೂಲಕ ಜನರೂ ಸಹ ತಮ್ಮ ದಾಖಲೆಗಳನ್ನು ಆನ್ ಲೈನ್ ಮೂಲಕ ನೋಡಬಹುದು. ಇದರಿಂದ ಜನರ ವಸೂಲಿ ವಸೂಲಿ, ಶೋಷಣೆಯನ್ನು ತಪ್ಪಿಸಬಹುದು. ಪೈಲಟ್ ಯೋಜನೆ ಯಶಸ್ವಿಯಾದ ನಂತರ ಮುಂದಿನ ದಿನಗಳಲ್ಲಿ ಎಲ್ಲಾ ತಾಲೂಕುಗಳ ದಾಖಲೆಗಳನ್ನೂ ಡಿಜಿಟಲೀಕರಿಸಲಾಗುವುದು” ಎಂದು ಅವರು ಮಾಹಿತಿ ನೀಡಿದರು.
ಅಲ್ಲದೆ, ಪ್ರಕೃತಿ ವಿಕೋಪ ಸಂದರ್ಭದ ತುರ್ತು ಖರ್ಚುಗಳಿಗಾಗಿ ಜಿಲ್ಲಾಧಿಕಾರಿ ಖಾತೆಯಲ್ಲಿ 20 ಕೋಟಿ ರೂ. ಹಣ ಇದೆ. ಈ ಹಣವನ್ನೂ ಸಹ ಅಗತ್ಯ ಕಾಮಗಾರಿಗಳಿಗೆ ಬಳಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಅಧಿಕಾರಿಗಳು ಇ-ಆಫೀಸ್ ಬಳಕೆಗೆ ಸೂಚನೆ: ಹಳೇ ಕಾಲದ ಪತ್ರ ವ್ಯವಹಾರವನ್ನು ಕೈಬಿಟ್ಟು ತಂತ್ರಜ್ಞಾನಕ್ಕೆ ಒಗ್ಗಿಕೊಳ್ಳುವ ಹಾಗೂ ಕಡತಗಳ ಶೀಘ್ರ ವಿಲೇವಾರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಗಸ್ಟ್ 15ರಿಂದ ಇ-ಆಫೀಸ್ ಅನುಷ್ಠಾನಗೊಳಿಸಲಾಗಿದೆ. ಎಲ್ಲಾ ಜಿಲ್ಲಾಧಿಕಾರಿಗಳೂ ಈಗಾಗಲೇ ಇ-ಆಫೀಸ್ ಮೂಲಕವೇ ಕಡತ ವಿಲೇವಾರಿ ಮಾಡುತ್ತಿದ್ದು, ತಹಶೀಲ್ದಾರ್ ಹಾಗೂ ವಿಭಾಗಾಧಿಕಾರಿಗಳು ಸೆಪ್ಟೆಂಬರ್.1ರ ಒಳಗಾಗಿ ಇ-ಆಫೀಸ್ ಬಳಸಬೇಕು ಎಂದು ತಿಳಿಸಿದರು.
“ಕಡತಗಳು ಇ-ಆಫೀಸ್ ನಲ್ಲಿ ನನ್ನ ಲಾಗಿನ್ ಗೆ ಬಂದರೆ 2 ದಿನದಲ್ಲಿ ವಿಲೇವಾರಿ ಮಾಡಿದ್ದೇನೆ. ಇ-ಆಫೀಸ್ ಸಹಜವಾಗಿ ಕಾರ್ಯ ದಕ್ಷತೆ ಹೆಚ್ಚಿಸಲಿದೆ. ಯಾವುದೇ ಸ್ಥಳದಲ್ಲಿಂದಲು ನೀವು ಕಡತ ವಿಲೇವಾರಿ ಮಾಡಬಹುದಾಗಿದೆ. ಸ್ವತ ನಾನು ಇ-ಆಫೀಸ್ ಮೂಲಕ ಕಡತ ವಿಲೇವಾರಿ ಮಾಡುತ್ತಿದ್ದೇನೆ. ಶಾಲೆ, ಗ್ರಾಮ ಪಂಚಾಯತಿಗೆ ಜಮೀನು ನೀಡಲು ಆಗುತ್ತಿರುವ ವಿಳಂಬಕ್ಕೆ ಇ-ಆಫೀಸ್ ಮೂಲಕ ಪರಿಹಾರ ನೀಡಬಹುದು” ಎಂದು ತಿಳಿಸಿದರು.
ಸಭೆಯಲ್ಲಿ ಕೋಲಾರ ಶಾಸಕ ಕೊತ್ತೂರು. ಜಿ. ಮಂಜುನಾಥ್, ಮಾಲೂರು ಶಾಸಕ ಕೆ. ವೈ ನಂಜೇಗೌಡ, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ಕಂದಾಯ ಆಯುಕ್ತರಾದ ಸುನೀಲ್ ಕುಮಾರ್, ಜಿಲ್ಲಾಧಿಕಾರಿ ಅಕ್ರಂ ಪಾಷ ಜಿಲ್ಲೆಯ ಎಲ್ಲಾ ಕಂದಾಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.




