ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಒಂದು ದಿನದ ತರಬೇತಿ ಕಾರ್ಯಾಗಾರ

2 years ago

ಕಾನೂನಿನ ಅರಿವು ಮೂಡಿಸಿ; ನ್ಯಾ.ಕೆ.ಜಿ ಶಾಂತಿ

ಬಳ್ಳಾರಿ ನ್ಯಾಯಾಲಯದಲ್ಲಿ ನಡೆದ ಕಾರ್ಯಕ್ರಮ

ಬಳ್ಳಾರಿ: ಸಮಾಜದಲ್ಲಿ ವಿವಿಧ ರೀತಿ ವಂಚಿತರಾದವರಿಗೆ ಕಾನೂನಿನ ಅರಿವು ಮೂಡಿಸುವುದರ ಜೊತೆಗೆ ನ್ಯಾಯ ಒದಗಿಸುವ ಸಮಾಜಮುಖಿ ಕೆಲಸದಲ್ಲಿ ಅರೆಕಾಲಿಕ ಸ್ವಯಂ ಸೇವಕರು ತೊಡಗಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಹೇಳಿದರು.

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚಿಲ್ಡ್ರನ್ ಆಫ್ ಇಂಡಿಯಾ ಫೌಂಡೇಶನ್ ಹಾಗೂ ಬಳ್ಳಾರಿ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ನಗರದ ತಾಳೂರು ರಸ್ತೆಯ ಹೊಸ ನ್ಯಾಯಾಲಯ ಸಂಕೀರ್ಣದಲ್ಲಿನ ಸಭಾಂಗಣದಲ್ಲಿ ಬಳ್ಳಾರಿ ಜಿಲ್ಲೆಯ ಅರೆಕಾಲಿಕ ಸ್ವಯಂ ಸೇವಕರಿಗೆ ಭಾನುವಾರ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎನ್ನುವ ಮಾತಿನಂತೆ ನಾಗರಿಕರು ಸುಗಮವಾಗಿ ಜೀವನ ನಡೆಸಲು ತಮ್ಮ ದೈನಂದಿನ ಜೀವನದಲ್ಲಿ ಕಾನೂನು ಅಗತ್ಯವಾಗಿದ್ದು, ಪ್ರತಿಯೊಬ್ಬರೂ ಸಹ ಕಾನೂನು-ಕಾಯ್ದೆಗಳ ಅರಿವು ಹೊಂದಬೇಕು ಎಂದರು.

ಬಾಲ್ಯ ವಿವಾಹ, ವರದಕ್ಷಿಣೆ ಕಿರುಕುಳ, ಬಾಲ ಕಾರ್ಮಿಕ ಪದ್ಧತಿ, ಪೋಕ್ಸೋ ಕಾಯ್ದೆ, ಮಾದಕ ವ್ಯಸನ ಸೇರಿದಂತೆ ಇನ್ನಿತರೆ ಕಾನೂನು ಬಾಹಿರ ಪ್ರಕರಣಗಳು ಕಂಡುಬಂದಲ್ಲಿ ಅರೆ ಕಾಲಿಕ ಸ್ವಯಂ ಸೇವಕರು ಮತ್ತು ಸಾರ್ವಜನಿಕರೂ ಸಹ ಸಂಬಂಧಪಟ್ಟಂತಹ ಅಧಿಕಾರಿಗಳಿಗೆ ಮಾಹಿತಿ ರವಾನಿಸಿ, ಅನ್ಯಾಯ ಹಾಗೂ ದೌರ್ಜನ್ಯ ತಡೆಗಟ್ಟುವ ಕಾರ್ಯ ನಿರ್ವಹಿಸಬೇಕು ಎಂದರು.

ಬಡತನ, ಜ್ಞಾನದ ಕೊರತೆ, ಹಾಗೂ ಅಸಹಾಯಕತೆಯಿಂದ ನ್ಯಾಯ ವಂಚಿತರಾದವರಿಗೆ ಕಾನೂನು ಕಾಯ್ದೆಗಳ ಸಲಹೆ ಒದಗಿಸಿ, ನೊಂದವರಿಗೆ ಸಕಾಲಕ್ಕೆ ನ್ಯಾಯ ಒದಗಿಸಬೇಕು ಹಾಗೂ ಬಡವರ, ನೊಂದವರ, ಮಹಿಳೆಯರ, ಕಾರ್ಮಿಕರ ಪರ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅರ್ಹ ಫಲಾನುಭವಿಗಳಿಗೆ ಕ್ರಮಬದ್ಧವಾಗಿ ತಲುಪಿಸುವ ಕಾರ್ಯವಾಗಬೇಕು ಎಂದರು.

ಸಂವಿಧಾನದಡಿ ಇರುವ ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ಸಾರ್ವಜನಿಕರು ಹಕ್ಕುಗಳ ಸದುಪಯೋಗ ಪಡೆದುಕೊಳ್ಳುವುದರೊಂದಿಗೆ ತಮಗಿರುವ ಕರ್ತವ್ಯಗಳ ಬಗ್ಗೆ ಮನದಟ್ಟು ಮಾಡಿಕೊಂಡು ನ್ಯಾಯಯುತ ಬಾಳ್ವೆ ನಡೆಸಬೇಕು ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್.ಎನ್ ಹೊಸಮನೆ ಮಾತನಾಡಿ, ಯಾವುದೇ ಅಪೇಕ್ಷೆ ಬಯಸದೇ ಸ್ವಯಂ ಪ್ರೇರಿತರಾಗಿ ಕಾರ್ಯನಿರ್ವಹಿಸುವ ಅರೆ ಕಾಲಿಕ ಕಾನೂನು ಸ್ವಯಂ ಸೇವಕರು ಸಮಾಜದ ಒಳಿತಿಗಾಗಿ ಶ್ರಮಿಸಿ, ಅರ್ಹರಿಗೆ ನ್ಯಾಯ ಒದಗಿಸುವ ಕೆಲಸ ನಿರ್ವಹಿಸಬೇಕು ಎಂದರು.

ಈ ಒಂದು ದಿನದ ಕಾರ್ಯಗಾರ ಆಯೋಜನೆಯಲ್ಲಿ ಅರೆ ಕಾಲಿಕ ಸ್ವಯಂ ಸೇವಕರು ಕಾನೂನು-ಕಾಯ್ದೆಗಳ ಅರಿವು ಪಡೆದುಕೊಂಡು, ನೊಂದವರಿಗೆ ಕಾನೂನು ನೆರವು ನೀಡಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಾಗಾರ ಆಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪಿ.ರಾಮಬ್ರಹ್ಮಂ ಮಾತನಾಡಿ, ಸಂವಿಧಾನದಡಿ ಇರುವ ಕಾನೂನುಗಳ ದುರ್ಬಳಕೆ ಆದಾಗ ಸಮಾಜಕ್ಕೆ ಮಾರಕ ಆಗುವ ಸಂಭವವಿದ್ದು, ಹಿತರಕ್ಷಣೆಗಾಗಿ ಹಾಗೂ ನ್ಯಾಯಕ್ಕಾಗಿ ಕಾನೂನು ವ್ಯವಸ್ಥೆಯನ್ನು ಬಳಸಿಕೊಳ್ಳಬೇಕು ಎಂದರು.

ಕಾರ್ಯಾಗಾರದಲ್ಲಿ ಗುಡ್ ಯೋಜನೆಯ ಯೋಜನಾ ಸಂಯೋಜಕ ಜನಿಫರ್.ವೈ, ಕೂಡ್ಲಿಗಿಯ ಸ್ನೇಹ ಸಂಸ್ಥೆಯ ನಿರ್ದೇಶಕ ಟಿ.ರಾಮಾಂಜನೇಯ, ಗುಡ್ ಯೋಜನೆಯ ಮಕ್ಕಳ ಭಾಗವಹಿಸುವಿಕೆ ಸುಗಮಗಾರರಾದ ಎನ್.ನಾಗಮಣಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಕೃಷ್ಣ ನಾಯಕ್, ಜಿಲ್ಲಾ ಬಾಲ ಕಾರ್ಮಿಕ ಯೋಜನಾಧಿಕಾರಿ ಮೌನೇಶ್, ವಕೀಲರಾದ ಶಿವಲೀಲಾ, ತ್ರಿವೇಣಿ ಪತ್ತಾರ್, ಸಿ.ಎಂ ಗುರುಬಸವರಾಜ್ ಅವರು ವಿವಿಧ ವಿಷಯ ಹಾಗೂ ಕಾನೂನು-ಕಾಯ್ದೆಗಳ ಕುರಿತು ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಬಳ್ಳಾರಿಯ ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಡಗಲಿ ರಾಮು, ವಕೀಲರ ಸಂಘದ ಅಧ್ಯಕ್ಷ ಪಿ.ರಾಮಬ್ರಹ್ಮಂ, ಕೂಡ್ಲಿಗಿಯ ಸ್ನೇಹ ಸಂಸ್ಥೆಯ ನಿರ್ದೇಶಕ ಟಿ.ರಾಮಾಂಜನೇಯ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಜಿಲ್ಲೆಯ ಅರೆಕಾಲಿಕ ಸ್ವಯಂ ಸೇವಕರು ಹಾಗೂ ಇತರರು ಹಾಜರಿದ್ದರು.

Leave a Reply