ಅಧಿಕೃತ ವಕ್ತಾರರು ಮಾತ್ರ ಹೇಳಿಕೆ ನೀಡಬೇಕು: ಕಾಂಗ್ರೆಸ್ ಹೈಕಮಾಂಡ್ ಸೂಚನೆ

3 years ago

ಬೆಂಗಳೂರು: ರಾಜ್ಯದಲ್ಲಿ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ಇದೀಗ ತನ್ನ ಶಾಸಕರು ಹಾಗೂ ಮುಖಂಡರನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಮುಂದಾಗಿದೆ. ಪಕ್ಷ ಮತ್ತು ಸರ್ಕಾರದ ಅಧಿಕೃತ ವಕ್ತಾರರನ್ನು ಹೊರತುಪಡಿಸಿ ಬೇರೆ ಯಾರೂ ಕೂಡ ಪಕ್ಷದ ವಿದ್ಯಮಾನಗಳು, ಅಧಿಕಾರ ಹಂಚಿಕೆ ವಿಷಯದ ಕುರಿತಂತೆ ಮಾತನಾಡಬಾರದು ಎಂದು ತಾಕೀತು ಮಾಡಿದೆ.

ಸಚಿವ ಎಂಬಿ ಪಾಟೀಲ್ ಅವರು ಮುಖ್ಯಮಂತ್ರಿ ಹುದ್ದೆ ಕುರಿತಾಗಿ ನೀಡಿದ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ಬಾರಿ ಸಂಚಲನಕ್ಕೆ ಕಾರಣವಾಗಿತ್ತು. ಸಿದ್ದರಾಮಯ್ಯ ಅವರೇ 5 ವರ್ಷಗಳ ಕಾಲ ಮುಖ್ಯಮಂತ್ರಿ ಆಗಲಿದ್ದಾರೆ ಇದನ್ನು ಹೈಕಮಾಂಡ್ ಸ್ಪಷ್ಟಪಡಿಸಿದೆ ಯಾವುದೇ ಅಧಿಕಾರ ಹಂಚಿಕೆ ಸೂತ್ರ ರೂಪಿಸಿಲ್ಲ ಎಂದು ಪಾಟೀಲ್ ಹೇಳಿದ್ದರು.

ಹೈಕಮಾಂಡ್ ಗೆ ಗೊತ್ತು: ಈ ಬಗ್ಗೆ ತೀಕ್ಷ್ಣ ಪ್ರಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಚಿವ ಎಂಬಿ ಪಾಟೀಲ್ ಅವರು ನೀಡಿರುವ ಹೇಳಿಕೆಯ ಬಗ್ಗೆ ತಾವು ತಲೆ ಕೆಡಿಸಿಕೊಂಡಿಲ್ಲ. ಎಲ್ಲವನ್ನು ಹೈಕಮಾಂಡ್ ನೋಡಿಕೊಳ್ಳಲಿದೆ. ನನ್ನ ಕೆಲಸ ರಾಜ್ಯದ ಅಭಿವೃದ್ಧಿಯಾಗಿದೆ ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆಯ ಬಗ್ಗೆ ಯಾರು ಏನೇ ಹೇಳಿದರೂ ನಾನು ಆ‌ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಈ ಎಲ್ಲಾ ವಿಷಯಗಳನ್ನು ನೋಡಿಕೊಳ್ಳಲು ಹೈಕಮಾಂಡ್ ಇದೆ. ಎಐಸಿಸಿ ಅಧ್ಯಕ್ಷರು ಇದ್ದಾರೆ. ನಾನು ಆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.

ಸಂಸದ ಡಿ. ಕೆ. ಸುರೇಶ್ ಅವರು ಪ್ರತಿಕ್ರಿಯಿಸಿ, ನಾನು ಈ ಕುರಿತಂತೆ ಸಚಿವ ಎಂಬಿ ಪಾಟೀಲ್ ಅವರಿಗೆ ತೀಕ್ಷ್ಣವಾಗಿ ಉತ್ತರ ನೀಡಬಹುದು. ಆದರೆ ಆ ಕೆಲಸವನ್ನು ನಾನು ಮಾಡುವುದಿಲ್ಲ. ಅದನ್ನು ಮಾಡಲು ಹೈಕಮಾಂಡ್ ಇದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ‌ ಇದ್ದಾರೆ ಎಂದು ಹೇಳಿದರು.

ಸಚಿವ ಎಂಬಿ ಪಾಟೀಲ್ ಅವರು ನೀಡಿರುವ ಹೇಳಿಕೆಗೆ ಸುರ್ಜೇವಾಲಾ‌ ಅವರು ಉತ್ತರ ನೀಡಲಿದ್ದಾರೆ. ನಾನು ಆ ಕೆಲಸ ಮಾಡುವುದಿಲ್ಲ ಎಂದು ತಿಳಿಸಿದರು.

ಪುನರುಚ್ಚಾರ: ತೀವ್ರ ಸಂಚಲನ ಮೂಡಿಸಿರುವ ತಮ್ಮಹೇಳಿಕೆಗೆ ಸ್ಪಷ್ಟನೆ ನೀಡಿರುವ ಸಚಿವ ಎಂ.ಬಿ. ಪಾಟೀಲ ‘ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ’ ಎಂದಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಾನು ಪದೇ ಪದೇ ಮಾತನಾಡಲ್ಲ. ನಿನ್ನೆ ಮಾಧ್ಯಮದವರು ಸಿದ್ದರಾಮಯ್ಯ ಬದಲಾಗುತ್ತಾರಾ ಅಂತ ಕೇಳಿದ್ರು. ಅದಕ್ಕೆ ಉತ್ತರ‌ನೀಡಿದ್ದೆ’ ಎಂದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅಂತ ನಮ್ಮ ನಾಯಕರು ಹೇಳಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ಏನು ಹೇಳಿದ್ದರೋ ಅದನ್ನೆ ನಾನು ಹೇಳಿದ್ದೇನೆ. ಪವರ್ ಶೇರಿಂಗ್ ಇಲ್ಲ. ಇದ್ದರೆ ಅದು ಜನರ ಜೊತೆ ಮಾತ್ರ ಎಂದೂ ವೇಣುಗೋಪಾಲ್ ಹೇಳಿದ್ದರು. ಅಧಿಕಾರ ಹಂಚಿಕೆಯ ಸಂಧಾನ ಸೂತ್ರ ನನಗೆ ಗೊತ್ತಿಲ್ಲ. ನನ್ನದು ಯಾವುದೇ ಹೇಳಿಕೆ ಇಲ್ಲ.‌ ನಾನು ವೈಯಕ್ತಿಕವಾಗಿ ಮಾತನಾಡಿಲ್ಲ’ ಎಂದೂ ಸಮರ್ಥಿಸಿದರು.

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಮುಂದುವರೆಯುತ್ತಾರೆ. ಅಂತ ಹೇಳಿದ್ದರು‌.‌ ನಾನು ಅದನ್ನೆ ಹೇಳಿದ್ದೇನೆ’ ಎಂದೂ ಹೇಳಿದರು.

ಬಾಯಿಗೆ ಬೀಗ: ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಯಾರೂ ಚರ್ಚಿಸದಂತೆ ಖಡಕ್‌ ಎಚ್ಚರಿಕೆ ನೀಡಿದೆ.

ಯಾರೂ ಕೂಡ ಅನಗತ್ಯ ಹೇಳಿಕೆಗಳನ್ನು ನೀಡಬಾರದು. ಒಳ್ಳೆಯ ಆಡಳಿತ ನೀಡುವುದಷ್ಟೇ ಈಗ ನಮ್ಮ ಆದ್ಯತೆ. ಇದರ ಕಡೆ ಗಮನ ಕೊಡಬೇಕಿದೆ. ಇದರ ಹೊರತಾಗಿ ಯಾವುದೇ ಅನಗತ್ಯ ಗೊಂದಲದ ಹೇಳಿಕೆ ನೀಡಬಾರದು’ ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣದ ಶಾಸಕರು, ಸಚಿವರಿಗೆ ಸೂಚನೆ ನೀಡಿದ್ದಾರೆ.

‘ಗೊಂದಲ ಮೂಡಿಸುವ ಹೇಳಿಕೆಗಳೂ ಸೇರಿದಂತೆ ಎಲ್ಲವನ್ನೂ ಎಐಸಿಸಿ ಗಮನಿಸುತ್ತದೆ. ಯಾವುದೇ ತೀರ್ಮಾನಗಳಿದ್ದರೂ ಎಐಸಿಸಿ ನಾಯಕರೇ ತೀರ್ಮಾನಿಸುತ್ತಾರೆ’ ಎಂದೂ ಸುರ್ಜೇವಾಲಾ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದೂ ಗೊತ್ತಾಗಿದೆ.

Leave a Reply