ಶಾಸಕರು ಮತ್ತು ಕಾರ್ಯಕರ್ತರ ಅಭಿಪ್ರಾಯಗಳಿಗೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ

10 months ago

ಬೆಂಗಳೂರು: ಶಾಸಕರ ಕಾರ್ಯವೈಖರಿಯ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಶಾಸಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಅವರ ಬಳಿ ದೂರುಗಳ ಸುರಿಮಳೆಯನ್ನೇ ಸುರಿದಿದ್ದಾರೆ.

ಹಲವು ಇಲಾಖೆಗಳಲ್ಲಿ ವ್ಯಾಪಕ ಭ್ರಷ್ಟಾಚಾರ, ತಮ್ಮ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ನೀಡದಿರುವುದೂ ಸೇರಿದಂತೆ ಹಲವು ಅಂಶಗಳ ಬಗ್ಗೆ ಕೆಲವು ಸಚಿವರ ವಿರುದ್ಧ ನೇರ ಆರೋಪ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳೀಯ ಶಾಸಕರು ಮತ್ತು ಕಾರ್ಯಕರ್ತರ ಅಭಿಪ್ರಾಯಗಳಿಗೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ ಎಂದು ದೂರು ನೀಡಿದ್ದಾರೆ.

ಸಚಿವರ ಈ ಧೋರಣೆಯಿಂದಾಗಿ ಅಧಿಕಾರಿಗಳು ತಮ್ಮ ಮಾತು ಕೇಳುತ್ತಿಲ್ಲ ಎಂದು ಅಳಲು ತೋಡಿಕೊಂಡಿರುವ ಶಾಸಕರು, ಅನುದಾನದ ಕೊರತೆಯೂ ಕಾಡುತ್ತಿದೆ. ಎರಡು ವರ್ಷಗಳ ಹಿಂದೆಯೂ ಇದೇ ಸ್ಥಿತಿ ಇತ್ತು. ಈಗಲೂ ಅದು ಮುಂದುವರಿದಿದೆ ಎಂದು ಅಹವಾಲು ಸಲ್ಲಿಸಿದರು.

ಸಚಿವರು ಕೈಗೆ ಸಿಗುವುದಿಲ್ಲ. ಸಿಕ್ಕಿದವರೂ ಮುಖ ಕೊಟ್ಟು ಮಾತನಾಡದೆ ನಿರ್ಲಕ್ಷಿಸುತ್ತಾರೆ. ನಮ್ಮ ಪತ್ರಗಳಿಗೆ ಕಿಮ್ಮತ್ತೇ ಇಲ್ಲ. ಇಲಾಖೆಗಳ ಅಧಿಕಾರಿಗಳ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿರುವ ಕೆಲವರು‌ ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವುದಿಲ್ಲ. ಮುಖ್ಯಮಂತ್ರಿ ಒಬ್ಬರೇ ಎಲ್ಲವನ್ನೂ ಮಾಡಲು ಸಾಧ್ಯವಿಲ್ಲ. ಹೊಣೆಗಾರಿಕೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸುವುದನ್ನು ಬಿಟ್ಟು ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

Leave a Reply