ಪದ್ಮನಾಭನಗರ: ಏಷ್ಯಾದಲ್ಲಿಯೇ ಅತ್ಯಂತ ದೊಡ್ಡ ವಿಧಾನಸಭಾ ಕ್ಷೇತ್ರ ಎಂಬ ಹೆಗ್ಗಳಿಕೆ ಪಡೆದಿದ್ದ ಉತ್ತರಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗುತ್ತಿದ್ದ ಆರ್.ಅಶೋಕ್ ಕ್ಷೇತ್ರ ಪುನರ್ ವಿಂಗಡಣೆ ನಂತರ ಪದ್ಮನಾಭನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ನಾಲ್ಕನೇ ಬಾರಿ ಇಲ್ಲಿಂದ ಆಯ್ಕೆ ಬಯಸಿರುವ ಅವರಿಗೆ ಇದೆ ಮೊದಲ ಬಾರಿಗೆ ಕಾಂಗ್ರೆಸ್ ನಿಂದ ಪ್ರಬಲ ಪೈಪೋಟಿ ಎದುರಾಗಿದೆ.
ಹೊಂದಾಣಿಕೆ ರಾಜಕಾರಣದ ವಿಷಯದಲ್ಲಿ ಸದಾ ಮುಂಚೂಣಿಯಲ್ಲಿ ಇರುತ್ತಿದ್ದ ಈ ಕ್ಷೇತ್ರದಲ್ಲಿ ಮೊದಲ ಬಾರಿಗೆ ರಾಜಕೀಯ ಚಿತ್ರಣ ಬದಲಾಗಿದೆ ಎನಿಸಿದರೂ ಕೂಡಾ ಜೆಡಿಎಸ್ ಅಭ್ಯರ್ಥಿಯ ನಡೆ ರಾಜಕೀಯ ಒಳ ಒಪ್ಪಂದದ ಬಗ್ಗೆ ಮತ್ತೆ ಅನುಮಾನ ಬರುವಂತೆ ಮಾಡಿದೆ. ವಿಶೇಷವೆಂದರೆ ನಾಲ್ಕು ಬಾರಿ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಜೆಡಿಎಸ್ ಮತ್ತು ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಬದಲಾಯಿಸುತ್ತಲೇ ಬಂದಿದೆ.
ಹೈಕಮಾಂಡ್ ಸೂಚನೆಯಂತೆ ಆರ್ ಅಶೋಕ್ ಕನಕಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಿವಕುಮಾರ್ ವಿರುದ್ಧ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಪದ್ಮನಾಭನಗರ ಕ್ಷೇತ್ರದ ಸ್ಪರ್ಧೆ ಕುತೂಹಲ ಮೂಡಿಸಿದೆ. ಜೆಡಿಎಸ್ ನಿಂದ ಬಿ ಮಂಜುನಾಥ್ ಸ್ಪರ್ಧೆ ಮಾಡಿದ್ದರೂ ಕಾಂಗ್ರೆಸ್ ನ ರಘುನಾಥ ನಾಯ್ಡು ಮತ್ತು ಆರ್ ಅಶೋಕ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.



