ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕವಿದೆ: ಆರ್‌.ಅಶೋಕ

12 months ago

ಬೆಂಗಳೂರು: ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎ ಗೆ ವಹಿಸಲು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದರು.

ಬಿಜೆಪಿ ಪ್ರಮುಖರೊಂದಿಗೆ ರಾಜ್ಯಪಾಲರಾದ ಥಾವರ್‌ ಚಂದ್‌‌ ಗೆಹ್ಲೋಟ್‌ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿ, ಹಿಂದೂ ಸಂಘಟನೆಯ ( ವಾಸ್ತವವಾಗಿ ಅವರು ರೌಡಿ ಶೀಟರ್) ಕಾರ್ಯಕರ್ತ ಸುಹಾಸ್‌ ಶೆಟ್ಟಿಯ ಕೊಲೆಯ ಬಗ್ಗೆ ವಿವರಿಸಲಾಗಿದೆ. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುಪಾರಿ ನೀಡಿರುವ ಪ್ರಕರಣ. ಮುಸ್ಲಿಂ ಹುಡುಗನ ಕೊಲೆಯಾಗಿದ್ದಕ್ಕೆ ಆ ಕುಟುಂಬಕ್ಕೆ ಕಾಂಗ್ರೆಸ್‌ 25 ಲಕ್ಷ ರೂ. ಪರಿಹಾರ ನೀಡಿದ್ದು, ಆ ಹಣವನ್ನು ಬಳಸಿಯೇ ಸುಪಾರಿ ನೀಡಲಾಗಿದೆ. ಸ್ಪೀಕರ್‌ ಯು.ಟಿ.ಖಾದರ್‌ ಅವರು ಆ ಕುಟುಂಬದವರು ಒಳ್ಳೆಯವರು ಎಂದು ಹೇಳಿದ್ದಾರೆ. ಆ ಮನೆಯವರೇ ಸುಪಾರಿ ನೀಡಿದ್ದಾರೆ ಎಂದು ಪೊಲೀಸ್‌ ಆಯುಕ್ತರು ಹೇಳಿದ್ದಾರೆ. ಸ್ಪೀಕರ್‌ ಆಗಿ ಕೊಲೆ ಪ್ರಕರಣದ ಬಗ್ಗೆ ಮಾತನಾಡುವ ಅಗತ್ಯವೇನಿದೆ? ಯಾವುದೇ ಸ್ಪೀಕರ್‌ ಕೊಲೆ ಬಗ್ಗೆ ಮಾತನಾಡಿದ ಇತಿಹಾಸವೇ ಇಲ್ಲ ಎಂದರು.

ಕಾಂಗ್ರೆಸ್‌ ಸರ್ಕಾರ ಇಂತಹವರ ವಿಚಾರದಲ್ಲಿ ಮೃದು ಧೋರಣೆ ತಾಳಿದೆ. ಈ ಪ್ರಕರಣದ ತನಿಖೆಯಲ್ಲಿ ನಮಗೆ ವಿಶ್ವಾಸವಿಲ್ಲ. ಪಾಕಿಸ್ತಾನ ಜಿಂದಾಬಾದ್‌ ಘೋಷಣೆಗೆ, ಭಯೋತ್ಪಾದನೆ ಚಟುವಟಿಕೆಗೆ ಪ್ರೇರಣೆ ಕೊಡುವವರ ಸಂಪರ್ಕ ಇವರಿಗಿದೆ. ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕವಿದೆ. ಪಾಕಿಸ್ತಾನ ಜಿಂದಾಬಾದ್‌ ಎಂದು ಹೇಳುವವರಿಗೆ ಆಪರೇಶನ್‌ ಸಿಂಧೂರದಂತೆಯೇ ಶಾಸ್ತಿ ಆಗಬೇಕಿದೆ. ಇದಕ್ಕೆ ಅಂತ್ಯ ಕಾಣಿಸಬೇಕಿದೆ. ಇದಕ್ಕಾಗಿ ಪ್ರಕರಣವನ್ನು ಎನ್‌ಐಎ ಗೆ ವಹಿಸಬೇಕು ಎಂದು ರಾಜ್ಯಪಾಲರಿಗೆ ಕೋರಲಾಗಿದೆ ಎಂದರು.

Leave a Reply