ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮುನ್ನ ಚುನಾವಣಾ ಆಯೋಗದ ಅನುಮತಿ ಕಡ್ಡಾಯ

2 years ago

ಬೆಂಗಳೂರು: ಸಾಮಾಜಿಕ ಜಾಲತಾಣಗಳ ಪೋಸ್ಟ್ ಗಳು ಇತ್ತೀಚಿನ ದಿನಗಳಲ್ಲಿ ಜನರ ಗಮನ ಸೆಳೆಯುತ್ತಿವೆ. ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ಪೋಸ್ಟ್ ಮಾಡುತ್ತಿವೆ. ಇನ್ನು ಮುಂದೆ ಇಂತಹ ಪೋಸ್ಟ್ ಮಾಡುವ ಮೊದಲು ಆಯೋಗದ ಅನುಮತಿ ಪಡೆಯಬೇಕು ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಕಟ್ಟುನಿಟ್ಟಾಗಿ ನೀತಿ ಸಂಹಿತೆ ಪಾಲನೆಗೆ ಮುಂದಾಗಿರುವ ಚುನಾವಣೆ ಆಯೋಗ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ರಾಜಕೀಯ ಜಾಹೀರಾತುಗಳ ಮೇಲೆ ನಿಗಾವಹಿಸಲು ಮುಂದಾಗಿದೆ.

ಮುದ್ರಣ ದೃಶ್ಯ ಸೇರಿದಂತೆ ಎಲ್ಲ ರೀತಿಯ ಮಾಧ್ಯಮಗಳು ಚುನಾವಣಾ ಜಾಹೀರಾತು ಪ್ರಕಟಿಸುವ ಮುನ್ನ ಆಯೋಗದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಮತದಾನ ಪ್ರಾರಂಭವಾಗುವ 48 ಗಂಟೆ ಮುನ್ನ ಮಾಧ್ಯಮಗಳಲ್ಲಿ ಚುನಾವಣೆ ಕುರಿತ ಯಾವುದೇ ರಾಜಕೀಯ ವರದಿ ಮಾಡಬಾರದು ಎಂದರು.

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದಿಂದ ಕೊನೆಯ ಹಂತದ ಮತದಾನ ಮುಗಿಯುವವರೆಗೂ ಮತಗಟ್ಟೆ ಸಮೀಕ್ಷೆ ಅಥವಾ ಮತದಾರರ ಅಭಿಪ್ರಾಯ ಸಂಗ್ರಹ ವರದಿ ಪ್ರಕಟಿಸುವಂತಿಲ್ಲ. ಒಂದು ವೇಳೆ ಯಾರಾದರೂ ಇದನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ರಾಜ್ಯದಲ್ಲಿ ಕಟ್ಟು ನಿಟ್ಟಾಗಿ ನೀತಿ ಸಂಹಿತೆ ಪಾಲನೆ ಮಾಡಲಾಗುತ್ತದೆ. ಯಾವುದೇ ಹೊಸ ಅಭಿವೃದ್ಧಿ ಕಾಮಗಾರಿ ಆರಂಭಿಸಲು ಅವಕಾಶವಿಲ್ಲ. ಆದರೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಕಡೆ, ಹೊಸದಾಗಿ ಬೋರ್ವೆಲ್ ಕೊರೆಯಲು ನೀತಿ ಸಂಹಿತೆ ಅಡ್ಡಿ ಬರುವುದಿಲ್ಲ ಎಂದರು.

ಜಿಲ್ಲಾಧಿಕಾರಿಗಳು ಮತ್ತು ಸಂಬಂಧಪಟ್ಟ ಸಚಿವರು ಬರ ಪರಿಹಾರ ಕಾಮಗಾರಿ ಕುರಿತು ಸಭೆಗಳನ್ನು ನಡೆಸಲು ನೀತಿ ಸಂಹಿತೆ ಹಾಡಿ ಬರುವುದಿಲ್ಲ ಎಂದರು.

Leave a Reply