ಪ್ರಧಾನಿ ಮೋದಿ ರಾಜ್ಯಕ್ಕೆ ನೀಡಿರುವ ಕೊಡುಗೆಯ ಬಗ್ಗೆ ಹೇಳಬೇಕು: ಸಿದ್ದರಾಮಯ್ಯ

2 years ago

ಬೆಂಗಳೂರು: ಪ್ರಧಾನಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆಗೆ ಬರುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಅವರಿಗೆ ಹಲವು ಪ್ರಶ್ನೆಗಳನ್ನು ಹಾಕಿದೆ. ಪ್ರಧಾನಿ ಕರ್ನಾಟಕಕ್ಕೆ ಬರಲು ತಮ್ಮದೇನು ತಕಾರರು ಇಲ್ಲ. ಆದರೆ ಅವರು ರಾಜ್ಯಕ್ಕೆ ನೀಡಿರುವ ಕೊಡುಗೆಯ ಬಗ್ಗೆ ಹೇಳಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಅವರು ಮೈಸೂರಿನ ಸಾರ್ವಜನಿಕ ಸಭೆಯಲ್ಲಿ, ನಿರುದ್ಯೋಗ ನಿವಾರಣೆಗೆ ಏನು ಮಾಡಿದ್ದಾರೆ? ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗಿದೆ.‌ ಅದನ್ನು ಪರಿಹರಿಸಲು ಏನು ಮಾಡಿದ್ದಾರೆ? ಬರ ಪರಿಹಾರವನ್ನು ಈವರೆಗೂ ಕೊಟ್ಟಿಲ್ಲವೇಕೆ? ಎಂಬುದನ್ನೆಲ್ಲ ತಿಳಿಸಬೇಕು ಎಂದು ಒತ್ತಾಯಿಸಿದರು.

ಅಂಬೇಡ್ಕರ್ ಬಂದರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ. ಬಿಜೆಪಿ ಸಂವಿಧಾನದ ಪರವಾಗಿದೆ ಎಂಬುದು ಮೋದಿಯವರು ಮನಸಿನ ಮಾತಾಗಿದ್ದರೆ ಸಂವಿಧಾನ ಬದಲಿಸುತ್ತೇವೆ ಎಂದ ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ? ಅವರನ್ನು ಪಕ್ಷದಿಂದ ಅಥವಾ ಮಂತ್ರಿ ಸ್ಥಾನದಿಂದ ಕೈಬಿಟ್ಟರೇ? ಎಂದು ಪ್ರಶ್ನಿಸಿದರು.

ಉತ್ತರ ಕರ್ನಾಟಕದಲ್ಲಿ ಐದು ವರ್ಷಗಳಿಂದ ಏನೂ ಕೆಲಸ ಮಾಡದೇ ಮನೆಯಲ್ಲಿ ಕುಳಿತಿದ್ದರು. ಕೊನೆಯ 3-4 ತಿಂಗಳು ಬಂದು ಭಾಷಣ ಮಾಡಿದರು. ಟಿಕೆಟ್ ಕೊಟ್ಟರೆ ಸೋಲುತ್ತಾರೆ ಎಂಬ ವರದಿ ಬಂದಿದ್ದಕ್ಕೆ ಅನಂತಕುಮಾರ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಟೀಕಿಸಿದರು.

Leave a Reply