ಬೆಂಗಳೂರು: ಸಿಎಂ ಸಿದ್ದರಾಮಯ್ಯ, ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶ ನಡೆಸಿ ಕಠಿಣ ಸೂಚನೆಗಳನ್ನು ನೀಡಿದ ಬೆನ್ನಲ್ಲೇ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಆಲೋಕ್ ಮೋಹನ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ 20 ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದ್ದಾರೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಎಸ್ ಪಿಗಳು, ಮಹಾ ನಗರಗಳ ಪೊಲೀಸ್ ಕಮಿಷನರೇಟ್ಗಳ ವ್ಯಾಪ್ತಿಗೆ ಬರುವ ಡೆಪ್ಯುಟಿ ಪೊಲೀಸ್ ಕಮೀಷನರ್(ಡಿಸಿಪಿ)ಗಳು ಪ್ರತಿದಿನ ಕನಿಷ್ಠ ಒಂದು ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಸೂಚಿಸಿದ್ದಾರೆ.
ಭೇಟಿ ಸಮಯದಲ್ಲಿ, ಅವರು ಪೊಲೀಸ್ ಠಾಣೆಗಳಲ್ಲಿರುವ ಸಾರ್ವಜನಿಕರು ಮತ್ತು ಪೊಲೀಸ್ ಸಿಬ್ಬಂದಿಯೊಂದಿಗೆ ನಿರಂತರವಾಗಿ ಸಂವಹನ ನಡೆಸಬೇಕು ಮತ್ತು ಅವರ ಕುಂದುಕೊರತೆಗಳನ್ನು ಸಹ ಪರಿಶೀಲಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಎಲ್ಲ ವಲಯ ಐಜಿಪಿ, ಡಿಐಜಿಪಿಗಳು, ನಗರದ ಹೆಚ್ಚುವರಿ ಪೊಲೀಸ್ ಆಯುಕ್ತರು, ಪ್ರತಿನಿತ್ಯ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ, ಠಾಣೆಯ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿ ಮತ್ತು ಪೊಲೀಸರು ‘ನಾಗರಿಕ ಕೇಂದ್ರಿತ’ ವಿಧಾನದಲ್ಲಿ ಕೆಲಸ ನಿರ್ವಹಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು ಡೆಪ್ಯುಟಿ ಪೊಲೀಸ್ ಕಮೀಷನರ್ಗಳು ಘೋರ ಮತ್ತು ಪ್ರಮುಖ ಅಪರಾಧಗಳ ಬಗ್ಗೆ ಮಾಹಿತಿ ಬಂದ ತಕ್ಷಣ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಬೇಕು ಎಂದಿದ್ದಾರೆ.
ಕ್ಲಬ್ಗಳು, ಜೂಜು, ಮಟ್ಕಾ ಸೇರಿದಂತೆ ಎಲ್ಲ ಸಂಘಟಿತ ಅಪರಾಧಗಳನ್ನು ತಕ್ಷಣವೇ ನಿಲ್ಲಿಸಬೇಕು ಮತ್ತು ಅಂತಹ ಚಟುವಟಿಕೆಗಳಲ್ಲಿ ತೊಡಗಿರುವವರ ಬಗ್ಗೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದಾರೆ.
ಪ್ರತಿ ತಿಂಗಳು, ಎಸ್ಪಿಗಳು, ಡಿಸಿಪಿಗಳು ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ರಾಜ್ಯದ ಎಲ್ಲ ಘಟಕಗಳಲ್ಲಿನ ಎಲ್ಲ ಶ್ರೇಣಿಯ ಅಧಿಕಾರಿಗಳು ಡ್ರಗ್ಸ್ ಮತ್ತು ಮಾದಕ ದ್ರವ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಶಾಲೆಗಳು ಮತ್ತು ಕಾಲೇಜುಗಳಿಗೆ ಭೇಟಿ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.
ಕರ್ನಾಟಕವನ್ನು ಮಾದಕ ದ್ರವ್ಯ ಮುಕ್ತ ರಾಜ್ಯವನ್ನಾಗಿ ಮಾಡಲು ರಾಜ್ಯದ ಪ್ರತಿಯೊಂದು ಪೊಲೀಸ್ ಘಟಕದಲ್ಲಿ ಪ್ರತಿದಿನವೂ ಮಾದಕ ದ್ರವ್ಯ ಮತ್ತು ಮಾದಕ ವಸ್ತುಗಳ ಮೇಲೆ ತೀವ್ರ ಕಾರ್ಯಾಚರಣೆ ನಡೆಸಬೇಕು ಎಂದು ಹೇಳಿದ್ದಾರೆ.
ಇ-ಬೀಟ್’ ಸೇವೆ: ಎಲ್ಲ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ‘ಇ-ಬೀಟ್ ಅಪ್ಲಿಕೇಶನ್ ಸಂಪೂರ್ಣ ನಿರ್ವಹಣೆಯನ್ನು ಅರಿತಿರಬೇಕು ಮತ್ತು ‘ಇ-ಬೀಟ್’ ಸೇವೆಯನ್ನು ಅರ್ಥಪೂರ್ಣವಾಗಿ ಅನುಷ್ಠಾನ ಮಾಡಬೇಕು.
ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸರ ಗೋಚರತೆ ತೀರಾ ಕಡಿಮೆಯಾಗಿರುವುದು ಗಮನಕ್ಕೆ ಬಂದಿದೆ. ಆದ್ದರಿಂದ ಎಲ್ಲ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬೆಳಿಗ್ಗೆ 9 ರಿಂದ 11 ರವರೆಗೆ ಮತ್ತು ಸಂಜೆ 6 ರಿಂದ ರಾತ್ರಿ 9 ರವರೆಗೆ ಪೊಲೀಸ್ ಸಮವಸ್ತ್ರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಗಸ್ತು ಮಾಡಬೇಕು ಎಂದು ಸೂಚಿಸಿದ್ದಾರೆ.
ಶಾಲಾ-ಕಾಲೇಜುಗಳು ಪ್ರಾರಂಭವಾಗುವ ಮತ್ತು ಮುಚ್ಚುವ ಸಮಯದಲ್ಲಿ ಯಾವುದೇ ಈವ್-ಟೀಸಿಂಗ್ ನಡೆಯದಂತೆ ನೋಡಿಕೊಳ್ಳಬೇಕು ಮತ್ತು ಶಾಲೆಗಳು ಮತ್ತು ಕಾಲೇಜು ಕ್ಯಾಂಪಸ್ನ ಸುತ್ತಲೂ ಮಾದಕ ದ್ರವ್ಯಗಳು ಮತ್ತು ಮಾದಕ ವಸ್ತುಗಳ ಮಾರಾಟ ತಡೆಯುವ ರೀತಿಯಲ್ಲಿ ಪೊಲೀಸ್ ಬೀಟ್ಗಳನ್ನು ನಿರ್ವಹಿಸಬೇಕು.
ಪೊಲೀಸ್ ಠಾಣೆಯಲ್ಲಿ ಸ್ವೀಕರಿಸಿದ ಎಲ್ಲ ದೂರುಗಳನ್ನು ಕಾನೂನು ಪ್ರಕಾರ ಸರಿಯಾದ ನಿಬಂಧನೆಗಳ ಅಡಿಯಲ್ಲಿ ದಾಖಲಿಸುವುದು ಮತ್ತು ಅಂತಹ ಎಲ್ಲ ದೂರುಗಳ ಮೇಲೆ ಪೊಲೀಸರು ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.




