ಹೋಟೆಲ್ ಗಳಲ್ಲಿ ತಯಾರಾಗುವ ತಿನಿಸುಗಳ ಗುಣಮಟ್ಟ ಪರೀಕ್ಷೆಗೆ ರಾಜ್ಯ ಸರ್ಕಾರದ ಸಿದ್ಧತೆ

2 years ago

ಬೆಂಗಳೂರು: ಖಾದ್ಯ ವಸ್ತುಗಳ ತಯಾರಿಕೆಯಲ್ಲಿ ಮನುಷ್ಯನ ದೇಹದ ಮೇಲೆ ಗಂಭೀರ ಪರಿಣಾಮ ಬೀರುವ ರಾಸಾಯನಿಕ ಬಳಕೆ ಮಾಡುತ್ತಿರುವ ಕ್ರಮದ ವಿರುದ್ಧ ಸಮರ ಸಾರಿರುವ ರಾಜ್ಯ ಸರ್ಕಾರ ಇದೀಗ ಹೋಟೆಲ್ ಗಳಲ್ಲಿ ತಯಾರಾಗುವ ತಿನಿಸುಗಳ ಗುಣಮಟ್ಟ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ. 

ಕಾಟನ್ ಕ್ಯಾಂಡಿ, ಕಬಾಬ್, ಗೋಬಿಮಂಚೂರಿ ಮೊದಲಾದ ತಿನಿಸುಗಳಲ್ಲಿ ಕೃತಕ ಬಣ್ಣ ಬಳಸುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಅಜಿನೋ ಮೋಟೋ ಸೇರಿದಂತೆ ಕೆಲವು ರಾಸಾಯನಿಕಗಳನ್ನು ಬಳಸದಂತೆ ನಿಷೇಧಿಸಿದೆ. 

ಹಳದಿ ಮತ್ತು ಕೇಸರಿ ಮಿಶ್ರಿತ ಬಣ್ಣಗಳನ್ನು ಕೆಲವು ಖಾದ್ಯಗಳ ತಯಾರಿಕೆಯಲ್ಲಿ ಬಳಸುತ್ತಿದ್ದು ಅವುಗಳ ಸೇವನೆಯಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬ ಪ್ರಯೋಗಾಲಯದ ವರದಿ ಆಧರಿಸಿ ಇವುಗಳ ಮೇಲೆ ಆರೋಗ್ಯ ಇಲಾಖೆ ನಿಷೇಧ ಹೇರಿದೆ. 

ಇದೀಗ ಮಾರುಕಟ್ಟೆಯಲ್ಲಿ ಲಭ್ಯವಿರುವ ಕೆಲವು ಪನೀರ್, ಚೀಸ್ ಮತ್ತು ಕೋವಾದ ಕೆಲವು ಮಾದರಿಗಳನ್ನು ಸಂಗ್ರಹಿಸಿ ಅವುಗಳ ಗುಣಮಟ್ಟದ ಬಗ್ಗೆ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇವುಗಳ ವರದಿ ಬಂದ ನಂತರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಆರೋಗ್ಯ ಇಲಾಖೆ ಸಿದ್ಧವಾಗಿದೆ. 

ಆಹಾರ ವಸ್ತುಗಳ ಗುಣಮಟ್ಟ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಆಹಾರ ತಜ್ಞರೊಂದಿಗೆ ಸಮಾಲೋಚನೆ ನಡೆಸಿದರು.

ನಂತರ ಸುದ್ದಿಗಾರರಿಗೆ ಮಾತನಾಡಿದ ಅವರು, ಸೇವಿಸಲು ಯೋಗ್ಯವಾದ ಆಹಾರದ ಗುಣಮಟ್ಟದ ಕುರಿತು ಕೆಲವು ಮಾನದಂಡಗಳನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗಿದೆ. ಅವುಗಳನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಇನ್ನು ಕೆಲವು ಹೋಟೆಲ್ ಗಳಲ್ಲಿ ಅಸುರಕ್ಷಿತ ರಾಸಾಯನಿಕಗಳನ್ನು ಆಹಾರ ವಸ್ತುಗಳ ತಯಾರಿಕೆಯಲ್ಲಿ ಬಳಸಲಾಗುತ್ತಿದೆ ಎಂಬ ವರದಿಗಳಿವೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಆಗಸ್ಟ್ 30 ಮತ್ತು 31 ರಂದು ಹೋಟೆಲ್ ಗಳಿಗೆ ಭೇಟಿ ನೀಡಿ ಅಲ್ಲಿ ತಯಾರಿಸಲಾಗುವ ಆಹಾರದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನಿಸಲಾಗುವುದು. ಅದೇ ರೀತಿ ಮಾಂಸ ಮತ್ತು ಮೀನು ಮಾರುಕಟ್ಟೆಗೂ ಭೇಟಿ ನೀಡಿ ಅವುಗಳ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದರು.

Leave a Reply