ದೇವೇಗೌಡ ತವರಿನಲ್ಲಿ ಸಿದ್ದರಾಮಯ್ಯ ಶಕ್ತಿಪ್ರದರ್ಶನಕ್ಕೆ ಸಿದ್ಧತೆ

1 year ago

ಬೆಂಗಳೂರು: ವಿಧಾನಸಭೆ ಉಪಚುನಾವಣೆ ಸಮಯದಲ್ಲಿ ಈ ಸರ್ಕಾರವನ್ನು ಕಿತ್ತೊಗೆಯುವ ತನಕ ವಿರಮಿಸುವುದಿಲ್ಲ ಎಂದು ಗುಡುಗಿದ್ದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪರಮೋಚ್ಚನಾಯಕ ಎಚ್ ಡಿ ದೇವೇಗೌಡ ಅವರಿಗೆ ಸೆಡ್ಡು ಹೊಡೆಯಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ಉಪ ಚುನಾವಣೆ ಗೆಲುವಿನ ಆತ್ಮವಿಶ್ವಾಸದಿಂದ ಬೀಗುತ್ತಿರುವ ಅವರು ಇದೀಗ ದೇವೇಗೌಡ ತವರಿನಲ್ಲಿಯೇ ಅವರ ವಿರುದ್ಧವೇ ಸಮರ ಸಾರಲು ಮುಂದಾಗಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ವರ್ಗಾವಣೆ ಅಕ್ರಮ ಆರೋಪ ಸೇರಿದಂತೆ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಮಾಡುತ್ತಿರುವ ಸರಣಿ ಆರೋಪಗಳಿಗೆ ಸಮಾವೇಶದ ಮೂಲಕ ಉತ್ತರ ನೀಡಲು ಮುಂದಾಗಿದ್ದಾರೆ.

ಹಗರಣಗಳ ಆರೋಪವನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ ಸೇರಿದಂತೆ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಸರ್ಕಾರವನ್ನು ಪದಚ್ಯುತಗೊಳಿಸಲು ಸಂಚು ಮಾಡಲಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕರು ಇದೀಗ ಸಿದ್ದರಾಮಯ್ಯ ಅವರ ಹೆಸರಿನಲ್ಲೇ ಸಮಾವೇಶಗಳಿಗೆ ತೀರ್ಮಾನಿಸಿದ್ದಾರೆ.

ಡಿಸೆಂಬರ್ 5ರಂದು ಹಾಸನದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳ ಸ್ವಾಭಿಮಾನಿ ಸಮಾವೇಶ ಆಯೋಜಿಸಲಾಗಿದೆ. ಇದರ ಮೂಲಕ ದೇವೇಗೌಡ ಮತ್ತು ಜೆಡಿಎಸ್ ನಾಯಕರಿಗೆ ಉತ್ತರ ನೀಡಲು ವೇದಿಕೆ ಸಿದ್ಧವಾಗುತ್ತಿದೆ.

Leave a Reply