ಕಾರವಾರ: ಕುಡಿಯುವ ನೀರು ಯೋಜನೆಗಳಿಗೆ ಸಂಬಂಧಿಸಿದಂತೆ ಕ್ರಿಯಾ ಯೋಜನೆಗಳನ್ನು ರೂಪಿಸುವಾಗ, ಸದ್ರಿ ಯೋಜನೆಯ ಅಗತ್ಯತೆ, ಈ ಕುರಿತ ನಿಯಮಾವಳಿಗಳು ಮತ್ತು ಸಂಬಂಧಪಟ್ಟ ಅಗತ್ಯ ಅನುಮೋದಿತ ದಾಖಲೆಗಳೊಂದಿಗೆ ಸಮರ್ಪಕ ಕ್ರಿಯಾ ಯೋಜನೆ ರೂಪಿಸಿ ಮಂಜೂರಾತಿಗೆ ಸಲ್ಲಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ ನಿರ್ದೇಶನ ನೀಡಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಪವಾಗಿ ನಿರ್ವಹಿಸಲು ಅನುಕೂಲವಾಗುವಂತೆ ರೂ.2 ಕೋಟಿಗಳ ಅನುದಾನವನ್ನು ಮಂಜೂರು ಮಾಡಿದ್ದು, ಈ ಅನುದಾನದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು 118 ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಲಾಗಿದೆ. ಆದರೆ ಈ ಕ್ರಿಯಾ ಯೋಜನೆಯನ್ನು ಸಿದ್ದಪಡಿಸುವಾಗ ಕಾಮಗಾರಿಗಳ ಅಗತ್ಯತೆ ಮತ್ತು ಇವುಗಳನ್ನು ಕೈಗೊಳ್ಳಲು ಅನುಸರಿಸಬೇಕಾದ ನಿಯಮಾವಳಿಗಳು ಮತ್ತು ಸಂಬಂಧಪಟ್ಟ ಅಗತ್ಯ ಅನುಮೋದಿತ ದಾಖಲೆಗಳು ಸಮರ್ಪಕವಾಗಿಲ್ಲದ ಕಾರಣ ಒಂದು ವಾರದಲ್ಲಿ ಎಲ್ಲಾ ದಾಖಲೆಗಳನ್ನು ಒಳಗೊಂಡ ಸಮಗ್ರ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಿ, ಪುನಃ ಅನುಮೋದನೆಗೆ ಸಲ್ಲಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಗಳಿಗೆ ಸೂಚಿಸಿದರು.
ಜಲ ಜೀವನ್ ಮಿಷನ್ ಕಾಮಗಾರಿಗಳನ್ನು 4 ಹಂತದಲ್ಲಿ ಕೈಗೊಂಡಿದ್ದು ಒಟ್ಟು 965 ಕಾಮಗಾರಿಗಳ ಪೈಕಿ 956 ಕಾಮಗಾರಿಗಳು ಆರಂಭಗೊಂಡಿದ್ದು, 718 ಕಾಮಗಾರಿಗಳನ್ನು ಪೂರ್ಣಗೊಳಿಸಿ, 657 ಕಾಮಗಾರಿಗಳನ್ನು ಸಂಬಂಧಪಟ್ಟ ಗ್ರಾಮ ಪಂಚಾಯತಗಳಿಗೆ ಹಸ್ತಾಂತರಿಸಲಾಗಿದೆ. ಬಾಕಿ ಉಳಿದ ಕಾಮಗಾರಿಗಳನ್ನು ಆದ್ಯತೆಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ಸಂಪೂರ್ಣಗೊಂಡಿರುವ ಕಾಮಗಾರಿಗಳ ಕುರಿತ ವಿವರಗಳನ್ನು ಒಳಗೊಂಡ ಸಾರ್ವಜನಿಕ ಮಾಹಿತಿ ಫಲಕಗಳನ್ನು ಸಂಬಂಧಪಟ್ಟ ಗ್ರಾಮಗಳಲ್ಲಿ ಅಳವಡಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಜಲ ಜೀವನ್ ಮಿಷನ್ ಕಾಮಗಾರಿಗಳಲ್ಲಿ ಜಲಮೂಲದ ಸ್ಥಳ ಬದಲಾವಣೆ, ಹೆಚ್ಚಿನ ಮನೆಗಳಿಗೆ ಸಂಪರ್ಕ ನೀಡಬೇಕಾದ ಸಂದರ್ಭದಲ್ಲಿ ಕಾಮಗಾರಿಗಳ ಪರಿಮಾಣಗಳಲ್ಲಿ ಉಂಟಾಗುವ ವ್ಯತ್ಯಾಸಗಳ ಕುರಿತ ವೇರಿಯೇಷನ್ ಪ್ರಸ್ತಾವನೆಗಳು ಮತ್ತು ವಿವಿಧ ಕಾರಣಗಳಿಂದ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದೇ ಇರುವ ಕುರಿತು ಅವಧಿ ವಿಸ್ತರಣಾ ಪ್ರಸ್ತಾವನೆಗಳನ್ನು ಸೂಕ್ತ ಕಾರಣಗಳು, ತಾಂತ್ರಿಕ ದಾಖಲೆಗಳು ಹಾಗೂ ಪೂರಕವಾದ ಇತರೇ ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಅನುಮೋದನೆಗೆ ಸಲ್ಲಿಸುವಂತೆ ಸೂಚಿಸಿದರು.
ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿಯಲ್ಲಿ ಸಿದ್ದಾಪುರ ತಾಲೂಕಿನ ಹಳಗೇರಿ ಗ್ರಾಮ ಪಂಚಾಯತ್ ನಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ಮಲ ತ್ಯಾಜ್ಯ ನಿರ್ವಹಣಾ ಘಟಕದ ಕಾಮಗಾರಿಗೆ ಸಂಬಂಧಪಟ್ಟ ಗ್ರಾಮ ಪಂಚಾಯತ್ ನಿಂದ ಆಕ್ಷೇಪ ವ್ಯಕ್ತವಾಗಿರುವ ಕುರಿತಂತೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಿತು,ಈ ಕಾಮಗಾರಿಯ ಕುರಿತ ಈವರೆಗಿನ ಪ್ರಗತಿಯ ಸಂಪೂರ್ಣ ವಿವರಗಳನ್ನು ಸಲ್ಲಿಸುವಂತೆ ಸಿಇಓ ತಿಳಿಸಿದರು.
ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಧಾರವಾಡ ವಿಭಾಗದ ಮುಖ್ಯ ಇಂಜಿನಿಯರ್ ರೇಣುಕಾರಾಧ್ಯ ಸೊಪ್ಪಿನಮಠ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅಲ್ಲಾ ಭಕ್ಷ್, ಮುಖ್ಯ ಲೆಕ್ಕಾಧಿಕಾರಿ ಆನಂದ್ ಸಾ ಹಬೀಬ್ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಲ್ಲಾ ತಾಲೂಕುಗಳ ಇಂಜಿನಿಯರ್ ಗಳು ಹಾಜರಿದ್ದರು.




