ಸಕ್ಕರೆ ಕಾರ್ಖಾನೆಗಳಿಂದ ಖರೀದಿಸುವ ಪ್ರತಿ ಕಿಲೋ ಸಕ್ಕರೆ ಬೆಲೆ 40 ರೂಪಾಯಿಗೆ ಹೆಚ್ಚಳ

5 months ago

ಬೆಂಗಳೂರು: ಸಕ್ಕರೆ ಕಾರ್ಖಾನೆಗಳ ಬಹುದಿನದ ಬೇಡಿಕೆಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಸಕ್ಕರೆ ಕಾರ್ಖಾನೆಗಳಿಂದ ಖರೀದಿಸುವ ಪ್ರತಿ ಕಿಲೋ ಸಕ್ಕರೆ ಬೆಲೆಯನ್ನು 40 ರೂಪಾಯಿಗೆ ಹೆಚ್ಚಳ ಮಾಡಲು ನಿರ್ಧರಿಸಿದೆ.

ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಿಎಂ ಸಿದ್ದರಾಮಯ್ಯ, ಇತ್ತೀಚೆಗೆ ತಾವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸಕ್ಕರೆ ಬೆಲೆ ಹೆಚ್ಚಳ ಮಾಡುವಂತೆ ಮನವಿ ಸಲ್ಲಿಸಿದ್ದೆ. ಅದೇ ರೀತಿ ಕೇಂದ್ರ ಗ್ರಾಹಕ ವ್ಯವಹಾರಗಳ ಮಂತ್ರಿ ಪ್ರಹ್ಲಾದ್ ಜೋಷಿ ಅವರಿಗೂ ಮನವಿ ಮಾಡಿದ್ದು ಅದಕ್ಕೆ ಅವರು ಸ್ಪಂದಿಸಿದ್ದಾರೆ ಎಂದರು.

ಈ ಮೊದಲು ಕೇಂದ್ರ ಸರ್ಕಾರ 31 ರೂಪಾಯಿಗೆ ಪ್ರತಿ ಕಿಲೋ ಸಕ್ಕರೆ ಖರೀದಿಸುತ್ತಿದ್ದು, ಇದನ್ನು 41 ರೂಪಾಯಿಗೆ ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಲಾಗಿತ್ತು. ಕಾರ್ಖಾನೆಗಳ ಮಾಲೀಕರು ತಮ್ಮ ಬಳಿ ಈ ಬೇಡಿಕೆಯನ್ನು ಮಂಡಿಸಿದ್ದರು. ಅದನ್ನು ತಾವು ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದು, ಇದೀಗ ಕೇಂದ್ರ ಸರ್ಕಾರ ನಲವತ್ತು ರೂಪಾಯಿ ನಿಗದಿ ಮಾಡಿದೆ ಅದಕ್ಕಾಗಿ ಪ್ರಧಾನಿ ಮತ್ತು ಪ್ರಹ್ಲಾದ್ ಜೋಷಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಸಕ್ಕರೆ ಕಾರ್ಖಾನೆಗಳ ಮಾಲೀಕರ ಬಹುದಿನದ ಈ ಬೇಡಿಕೆ ಈಡೇರಿರುವುದರಿಂದ ಕಬ್ಬು ಬೆಳೆಗಾರರಿಗೆ ಉತ್ತಮ ಲಾಭ ಸಿಗಲಿದೆ ಎಂಬ ವಿಶ್ವಾಸ ತಮಗಿದೆ ಎಂದರು.

ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಡಿಸಿಎಂ ಡಿ ಕೆ ಶಿವಕುಮಾರ್, ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಮತ್ತು ರೈತರಿಗೆ ಅನುಕೂಲವಾಗಿದೆ ಎಂದರು.

ಸಕ್ಕರೆ ಕಾರ್ಖಾನೆಗಳು ಉಳಿಯಬೇಕು, ಕಾರ್ಖಾನೆಗಳು ಉಳಿದರೆ ಕಬ್ಬು ಬೆಳೆಗಾರರಿಗೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಜ್ಯದ ಮನವಿಗೆ ಸ್ಪಂದಿಸಿದೆ. ಅದೇ ರೀತಿಯಲ್ಲಿ ಮೊಲಾಸಿಸ್ ದರ ಮತ್ತು ಇಥೆನಾಲ್ ಪ್ರಮಾಣ ಹೆಚ್ಚಳ ಮಾಡಿದರೆ ರಾಜ್ಯದ ಕಾರ್ಖಾನೆ ಮಾಲೀಕರಿಗೆ ಇನ್ನಷ್ಟು ನೆರವು ಕಲ್ಪಿಸಿದಂತಾಗಲಿದೆ ಎಂದರು.

Leave a Reply