ಪ್ರಧಾನಿ ಸೋಲುತ್ತೇವೆಂದು ಹತಾಶರಾಗಿ ಸಮಾಧಿ ವಿಷಯ ಮಾತನಾಡುತ್ತಿದ್ದಾರೆ: ಸಿದ್ದರಾಮಯ್ಯ

2 years ago

ಮೈಸೂರು: ವಿರೋಧಪಕ್ಷಗಳು ನನ್ನನ್ನು ಸಮಾಧಿ ಮಾಡಲು ಹೊರಟಿವೆ. ನೀವು ನನ್ನನ್ನು ಕಾಪಾಡಬೇಕು ಎಂಬ ಪ್ರಧಾನಿ Narendra Modi ಅವರ ಹೇಳಿಕೆ ದುರಂತವೇ ಸರಿ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ವಿಪಕ್ಷಗಳು ನನ್ನನ್ನು ಸಮಾಧಿ ಮಾಡಲು ಹೊರಟಿವೆ ಎಂಬ ಆರೋಪದ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ವಿರೋಧ ಪಕ್ಷದವರು ಯಾರನ್ನೂ ಸಮಾಧಿ ಮಾಡುವುದಿಲ್ಲ, ಮೋದಿ ಅವರನ್ನು ರಾಜಕೀಯವಾಗಿ ವಿರೋಧ ಮಾಡುತ್ತಿದ್ದೇವೆ ಅಷ್ಟೆ ಎಂದರು.

ನರೇಂದ್ರ ಮೋದಿ ಹತ್ತು ವರ್ಷ ಪ್ರಧಾನಿಗಳಾಗಿ ಬಡವರ ಪರವಾಗಿ ಏನೂ ಮಾಡಿಲ್ಲ ಎನ್ನುವುದು ಹಾಗು ಸುಳ್ಳಿನ ಸರದಾರ ಎನ್ನುವುದು ನಮ್ಮ ಆರೋಪ. ಜನರಿಗೆ ನೀಡಿದ್ದ ಯಾವ ಭರವಸೆಗಳನ್ನು ಈಡೇರಿಸಿಲ್ಲ. ರಾಜಕೀಯವಾಗಿ ಅವರನ್ನು ಸೋಲಿಸಬೇಕೆನ್ನುವುದು ವಿರೋಧ ಪಕ್ಷಗಳ ಗುರಿ. ಏಕೆಂದರೆ ಈ ದೇಶದ ಆರ್ಥಿಕತೆ ಸುಧಾರಣೆಯಾಗಬೇಕು, ಬಡವರು ಉಳಿಯಬೇಕು ಎಂದರು.

ಪ್ರಧಾನಿಗಳು ತಾವು ಸೋಲುತ್ತೇವೆಂದು ಹತಾಶರಾಗಿ ಈ ರೀತಿ ಮಾತನಾಡುತ್ತಿದ್ದಾರೆ. ಅವರ ಭಾವನಾತ್ಮಕ ಆಟ ಜನರಿಗೆ ಗೊತ್ತಾಗಿದೆ. ಜನರಿಗೆ ಗೊತ್ತಾದ ಮೇಲೆ ಪುನ: ಅದೇ ತಪ್ಪನ್ನು ಜನತೆ ಮಾಡುವುದಿಲ್ಲ. ರಾಜಕೀಯದಲ್ಲಿ ಮೇಲಕ್ಕೇರಿದವರು ಕೆಳಕ್ಕೆ ಇಳಿಯಲೇಬೇಕು, ಕೆಳಗಿದ್ದವನು ಮೇಲೇರಬೇಕು ಎಂದು ಹೇಳಿದರು.

Leave a Reply