ಬೀಡಿ ಹಾಗೂ ಸಿಗರೇಟ್ ಗಾಗಿ ಕೈದಿಗಳು ನಡೆಸುತ್ತಿದ್ದ ಪ್ರತಿಭಟನೆ ವಾಪಸ್

5 months ago

ಬೆಂಗಳೂರು: ಕಾನೂನು ಕ್ರಮಕ್ಕೆ ಹೆದರಿ‌ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬೀಡಿ ಹಾಗೂ ಸಿಗರೇಟ್ ಮಾರಾಟಕ್ಕೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿ ಕಳೆದ 4 ದಿನಗಳಿಂದ ಕೈದಿಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.

ಪ್ರತಿಭಟನೆ ನಿಲ್ಲಿಸದಿದ್ದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಜೈಲಾಧಿಕಾರಿಗಳು ನೀಡಿದ ಎಚ್ಚರಿಕೆ ಹಿನ್ನೆಲೆಯಲ್ಲಿ  ಕೈದಿಗಳ ಪ್ರತಿಭಟನೆ ತಣ್ಣಗಾಗುವಂತೆ ಮಾಡಿದೆ.

ಜೈಲಿನ ನೂತನ ಮುಖ್ಯ ಜೈಲು ಅಧೀಕ್ಷಕರಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ಅಂಶುಕುಮಾರ್ ನೇತೃತ್ವದ ತಂಡ ನಿರಂತರ ಪರಿಶೀಲನೆ ನಡೆಸಿ, ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮಗಳಿಗೆ ಕಡಿವಾಣ ಹಾಕಿತ್ತು.

ಅವ್ಯಾಹತವಾಗಿ ಬಳಕೆಯಾಗುತ್ತಿದ್ದ ಮೊಬೈಲ್​​ಗಳು, ಬೀಡಿ ಹಾಗೂ ಸಿಗರೇಟ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಈ ಕಾರ್ಯಾಚರಣೆಯು ಕೈದಿಗಳಿಗೆ ನುಂಗಲಾರದ ತುತ್ತಾಗಿತ್ತು. ಇದರಿಂದ ಅಸಮಾಧಾನಗೊಂಡು ಜೈಲಿನೊಳಗೆ ಬಂಧಿಗಳು ಪ್ರತಿಭಟನೆ ಕೈಗೊಂಡಿದ್ದರು. ಕನಿಷ್ಠ ಪಕ್ಷ ಬೀಡಿ ಹಾಗೂ ಸಿಗರೇಟ್ ಮಾರಾಟಕ್ಕೆ ಅವಕಾಶ ಕೊಡಬೇಕೆಂದು ಒತ್ತಾಯಿಸಿದ್ದರು.

ಜೈಲಿನ ನಿಯಾಮವಳಿಯಂತೆ, ಕಾರಾಗೃಹದಲ್ಲಿ ಬೀಡಿ, ಸಿಗರೇಟ್​​​ ಮಾರಾಟ ಮಾಡುವಂತಿಲ್ಲ ಎಂದು ತಿಳಿಹೇಳಿದರೂ ಪಟ್ಟುಬಿಡದೆ ಕೈದಿಗಳು ಪ್ರತಿಭಟನೆ ಮುಂದುವರೆಸಿದ್ದರು. ಮಂಗಳವಾರ ಅಂಶುಕುಮಾರ್ ತೆರಳಿ ಪ್ರತಿಭಟನಾ ಕೈದಿಗಳೊಂದಿಗೆ ಮಾತುಕತೆ ನಡೆಸಿದ್ದರು. ಆದರೆ ಅದು ವಿಫಲವಾದ ಹಿನ್ನೆಲೆಯಲ್ಲಿ, ಪ್ರತಿಭಟನೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದರು. ಇದರಿಂದ ಕಂಗೆಟ್ಟ ಕೈದಿಗಳು ಪ್ರತಿಭಟನೆ ಹಿಂಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply