ಲಕ್ಷ್ಮೀ ಹೆಬ್ಬಾಳ್ಕರ್ – ಸಿ.ಟಿ.ರವಿ ಪರ ವಿರುದ್ಧ ಪ್ರತಿಭಟನೆಗಳ ಸರಣಿ

1 year ago

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದರು ಎಂಬ ಆರೋಪದಲ್ಲಿ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಬಂಧನ ಖಂಡಿಸಿ ರಾಜ್ಯದ ಹಲವೆಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮತ್ತೊಂದೆಡೆ ಕಾಂಗ್ರೆಸ್ ಕಾರ್ಯಕರ್ತರು ಕೂಡ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆ ನಡೆಸಿ ಸಿ.ಟಿ.ರವಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು.

ಸಿ.ಟಿ.ರವಿ ತವರು ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ತೀವ್ರ ಗೊಳಿಸಿದ್ದು, ಅಲ್ಲಲ್ಲಿ ಟೈರ್ ಮತ್ತು ಬೈಕ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನೊಂದೆಡೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆಯಿತು. ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

ರವಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಮತ್ತೊಂದೆಡೆ ರವಿ ಬಂಧನ ಖಂಡಿಸಿ ಬಂದ್ ಕರೆ ನೀಡಿದ್ದ  ಬಿಜೆಪಿ ಕಾರ್ಯಕರ್ತರು, ಎಂ.ಜಿ.ರಸ್ತೆ ಕಡೆಯಿಂದ ಬಂದು ಅಂಗಡಿ ಬಾಗಿಲು ಮುಚ್ಚಿಸುತ್ತಿದ್ದರು. ಈ ವೇಳೆ ಎರಡು ಗುಂಪಿನ ಕಾರ್ಯಕರ್ತರ ನಡುವೆ ಜಟಾಪಟಿ ನಡೆಯಿತು. ಪರಸ್ಪರ ನೂಕಾಟ- ತಳ್ಳಾಟ ನಡೆಯಿತು. ಈ ವೇಳೆ ಪೊಲೀಸರು ಲಾಠಿ ಬೀಸಿ ಎಲ್ಲರನ್ನೂ ಚದುರಿಸಿದರು.

ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ರವಿ ಬಂಧನ ವಿರೋಧಿಸಿ ಮೆಟ್ರೋಪೋಲ್ ವೃತ್ತದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆ ಮುಂಭಾಗ ಜಮಾಯಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡರು ಪ್ರತಿಭಟನೆ ಮುಗಿಸಿ ಹೊರಡುತ್ತಿದ್ದಂತೆ, ಕೆಲ ಕಾರ್ಯಕರ್ತರು ಬ್ಯಾರಿಕೇಡ್ ತೆಗೆದು ಕಾಂಗ್ರೆಸ್ ಕಚೇರಿಯ ಕಡೆಗೆ ನುಗ್ಗಲು ಯತ್ನಿಸಿದರು. ಅವರನ್ನು ತಡೆದ ಪೊಲೀಸರು ಬಂಧಿಸಿ ಸಿಎಆರ್ ಮೈದಾನಕ್ಕೆ ಕರೆದೊಯ್ದರು.

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮುಖಮಂತ್ರಿ ಸಿದ್ದರಾಮಯ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷಿ ಹೆಬ್ಬಾಳ್ಕರ್  ಭಿತ್ತಿಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

Leave a Reply