ಬೆಂಗಳೂರು: ಜನಸಂಖ್ಯೆಯ ಅಧಾರದಲ್ಲಿ ಹೊಸ ಲೋಕಸಭಾ ಕ್ಷೇತ್ರಗಳನ್ನು ರಚಿಸಲು ಮುಂದಾಗುವ ಮೂಲಕ ಕೇಂದ್ರ ಸರ್ಕಾರ ದಕ್ಷಿಣ ರಾಜ್ಯಗಳ ದ್ವನಿಯನ್ನು ಅಡಗಿಸುವ ಕೆಲಸಕ್ಕೆ ಕೈಹಾಕಿದೆ ಎಂದು ಕೃಷ್ಣ ಬೈರೇಗೌಡ ಆತಂಕ ವ್ಯಕ್ತಪಡಿಸಿದರು.
ತಾಜ್ ವೆಸ್ಟ್ಎಂಡ್ ಹೋಟೆಲ್ನಲ್ಲಿ ಎಂಎಸ್ ರಾಮಯ್ಯ ವಿಶ್ವವಿದ್ಯಾಲಯ ಆಯೋಜಿಸಿದ್ದ “ಹಣಕಾಸಿನ ಫೆಡರಲಿಸಂ: ಹದಿನಾರನೇ ಹಣಕಾಸು ಆಯೋಗದ ಮುಂದಿರುವ ಸವಾಲುಗಳು”ಎಂಬ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ ಸರ್ಕಾರ 70-80ರ ದಶಕದಲ್ಲಿ ಜನಸಂಖ್ಯೆ ನಿಯಂತ್ರಣದ ಬಗ್ಗೆ ಅಭಿಯಾನಕ್ಕೆ ಕರೆ ನೀಡಿತ್ತು ಎಂದರು.
ಕೇಂದ್ರದ ಈ ಅಭಿಯಾನವನ್ನು ದಕ್ಷಿಣದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಹಾಗೂ ತೆಲಂಗಾಣ ಯಶಸ್ವಿಯಾಗಿ ಜಾರಿಗೊಳಿಸಿತ್ತು. ಹೀಗಾಗಿ ದಕ್ಷಿಣದ ರಾಜ್ಯಗಳಲ್ಲಿ ಜನಸಂಖ್ಯೆ ಗಣನೀಯವಾಗಿ ನಿಯಂತ್ರಣವಾಗಿದೆ. ಆದರೆ, ಬಿಹಾರ ಉತ್ತರಪ್ರದೇಶದಂತಹ ಉತ್ತರದ ರಾಜ್ಯಗಳು ಈ ಅಭಿಯಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿರಲಿಲ್ಲ ಎಂದು ಅಭಿಪ್ರಾಯಪಟ್ಟರು.
ಕೇಂದ್ರ ಸರ್ಕಾರ ಇದೀಗ ಜನಸಂಖ್ಯೆ ಆಧಾರದಲ್ಲಿ ಹೊಸ ಲೋಕಸಭಾ ಕ್ಷೇತ್ರಗಳನ್ನು ರಚಿಸುವ ಸೂಚನೆ ನೀಡಿದೆ. ಇದು ನಿಜವಾದರೆ, ಜನಸಂಖ್ಯೆ ನಿಯಂತ್ರಿಸಿದ್ದಕ್ಕಾಗಿ ದಕ್ಷಿಣ ರಾಜ್ಯಗಳಿಗೆ ಶಿಕ್ಷೆ ನೀಡಿದಂತಾಗುತ್ತದೆ. ಉತ್ತರದ ರಾಜ್ಯಗಳಲ್ಲಿ ಹೆಚ್ಚಿನ ಲೋಕಸಭಾ ಕ್ಷೇತ್ರಗಳು ರಚನೆಯಾಗಲಿದ್ದು, ಸಂಸತ್ನಲ್ಲಿ ದಕ್ಷಿಣದ ರಾಜ್ಯಗಳಿಗೆ ದ್ವನಿಯೇ ಇಲ್ಲದೆ ಕತ್ತು ಹಿಸುಕುವ ಕೆಲಸವಾಗಲಿದೆ ಎಂದು ಎಚ್ಚರಿಸಿದರು.




