ಪೋಷಕರ ಆರೈಕೆ ಮಾಡಿದರೆ ಮಾತ್ರ ಆಸ್ತಿ: ಶರಣ ಪ್ರಕಾಶ್ ಪಾಟೀಲ್

1 year ago

ಬೆಂಗಳೂರು: ತಂದೆ ತಾಯಿಯರನ್ನು ಕಣ್ಣಿಗೆ ಕಾಣುವ ದೇವರು ಎಂದು ಪರಿಗಣಿಸುವ ಜೊತೆಗೆ ಅವರ ಸಂಧ್ಯಾಕಾಲದಲ್ಲಿ ಅವರ ಮಕ್ಕಳು ಅವರನ್ನು ಅದೇ ರೀತಿ ಪೋಷಿಸಿ ಪೊರೆಯಬೇಕು ಎನ್ನುತ್ತದೆ ಸಮಾಜ. ತಂದೆ ತಾಯಿಯರನ್ನು ಪ್ರೀತಿಸಿ ಅವರನ್ನು ಸುಖ ಸಂತೋಷದಿಂದ ಇರುವಂತೆ ನೋಡಿಕೊಂಡು ಆರೈಕೆ ಮಾಡುವ ಮಕ್ಕಳಿಗೆ ಎಲ್ಲಿಲ್ಲದ ಗೌರವ ಇರುತ್ತದೆ.

ಆದರೆ ಇತ್ತೀಚೆಗೆ ಯಾಂತ್ರಿಕತೆಯ ಬದುಕು, ಸ್ಪರ್ಧೆಯ ಓಟಕ್ಕೆ ಬಿದ್ದ ಮಕ್ಕಳು ಇಳಿ ವಯಸ್ಸಿನಲ್ಲಿರುವ ತಮ್ಮ ತಂದೆ ತಾಯಂದಿರ ಜವಾಬ್ದಾರಿಯನ್ನು ಹೊತ್ತುಕೊಳ್ಳದೆ ನುಣುಚಿಕೊಳ್ಳುತ್ತಿರುವುದು ಸರ್ವೇ ಸಾಮಾನ್ಯವಾದ ಸಂಗತಿಯಾಗಿದೆ.

ಕೆಲವು ಮಕ್ಕಳಂತೂ ತಮ್ಮ ತಂದೆ ತಾಯಿಯಿಂದ ಆಸ್ತಿಪಾಸ್ತಿ ತಮ್ಮ ಹೆಸರಿಗೆ ಬರೆಸಿಕೊಂಡು ಅವರನ್ನು ವೃದ್ಧಾಶ್ರಮದಲ್ಲಿ ಬಿಡುವುದು ಒಂದು ಕಡೆಯಾದರೆ ಮತ್ತೆ ಕೆಲವು ಮಕ್ಕಳು ಅನಾರೋಗ್ಯದ ಕಾರಣ ನೀಡಿ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲು ಮಾಡಿ ನಾಪತ್ತೆಯಾಗುತ್ತಿದ್ದಾರೆ. 

ಕೆಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಇಂತಹ ತಂದೆ ತಾಯಂದಿರು ನೂರಾರು ಸಂಖ್ಯೆಯಲ್ಲಿ ಇರುವ ವಿಷಯ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರ ಗಮನಕ್ಕೆ ಬಂದಿದೆ. ತಕ್ಷಣವೇ ಕಾರ್ಯ ಪ್ರವೃತ್ತರಾದ ಅವರು, ಕಳೆದ ಒಂದು ವಾರದಿಂದ ವಿಕಾಸಸೌಧದಲ್ಲಿ ರಾಜ್ಯದ ವಿವಿಧ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಇತರ ಸದಸ್ಯರ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಒಂದರಲ್ಲೇ, 150 ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ತೊರೆದ ಪ್ರಕರಣಗಳು ವರದಿಯಾಗಿವೆ. ರಾಜ್ಯಾದ್ಯಂತ ಇತರ ವೈದ್ಯಕೀಯ ಸಂಸ್ಥೆಗಳಲ್ಲಿ ಇಂಥ 100 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಇಂತಹ ಪರಿತ್ಯಕ್ತ ಹಿರಿಯ ನಾಗರಿಕರನ್ನು  ಬಿಐಎಂಎಸ್ ಅಧಿಕಾರಿಗಳು ಬೆಳಗಾವಿ ಮತ್ತು ಸುತ್ತಮುತ್ತಲಿನ 70 ಹಿರಿಯ ನಾಗರಿಕರ  ನಿವೃತ್ತಿ ಗೃಹಗಳಲ್ಲಿ ಅಥವಾ ವೃದ್ಧಾಶ್ರಮಗಳಲ್ಲಿ ಆಶ್ರಯ ಕಲ್ಪಿಸಿಕೊಟ್ಟಿದ್ದಾರೆ. ಆದರೆ ಇನ್ನೂ ಅನೇಕರು ಆಸ್ಪತ್ರೆಗಳಲ್ಲಿಯೇ ಇದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಊಟ, ವಸತಿ, ಆಶಯ ಉಚಿತವಾಗಿ ಸಿಗುತ್ತದೆ ಎಂಬ ಉದ್ದೇಶದಿಂದ ನಮ್ಮನ್ನು ಇಲ್ಲಿ ಬಿಟ್ಟುಹೋಗಿದ್ದಾರೆ ಎಂದು ಪರಿತ್ಯಕ್ತ ಪೋಷಕರು ತಿಳಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಮಾಹಿತಿಯನ್ನು ಪಡೆದುಕೊಂಡಿರುವ ಶರಣ ಪ್ರಕಾಶ್ ಪಾಟೀಲ್, ಈ ಬೆಳವಣಿಗೆಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ. ಇಂತಹ ಕೃತ್ಯಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ವಿಲ್ಗಳು ಮತ್ತು ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸುವಂತೆ ಕ್ರಮಕೈಗೊಳ್ಳಲು ಆದೇಶಿಸಿದ್ದು, ಈ ಕುರಿತ ಪ್ರಕರಣಗಳು ಕಂಡುಬಂದ ಕೂಡಲೇ ವೈದ್ಯಕೀಯ ಶಿಕ್ಷಣ ನಿರ್ದೇಶಕರು ಕೂಡಲೇ ಸಹಾಯಕ ಆಯುಕ್ತರಿಗೆ ದೂರುಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ 

ತಮ್ಮ ಮಕ್ಕಳ ಪರವಾಗಿ ಮಾಡಿದ ವಿಲ್ಗಳು ಮತ್ತು ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸುವಂತೆ ಪರಿತ್ಯಕ್ತ ಪೋಷಕರಿಗೆ ಕರೆ ನೀಡಿದ್ದಾರೆ.

ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರು, ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ, 2007 ರ ಅಡಿಯಲ್ಲಿ ಸಹಾಯಕ ಆಯುಕ್ತರು ಕ್ರಮ ಕೈಗೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ದೂರುಗಳನ್ನು ಸಲ್ಲಿಸಬೇಕು ಎಂದು ಡಾ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರಿಗೆ ಆರ್ಥಿಕ ಮತ್ತು ವೈದ್ಯಕೀಯ ಬೆಂಬಲವನ್ನು ಒದಗಿಸಬೇಕು ಎಂಬ ನಿಯಮವಿದೆ. ಅವರು ಹಾಗೆ ಮಾಡಲು ವಿಫಲವಾದರೆ, ಪೋಷಕರು ತಮ್ಮ ಮಕ್ಕಳ ಪರವಾಗಿ ಮಾಡಿದ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸುವ ಕಾನೂನುಬದ್ಧ ಹಕ್ಕು ಹೊಂದಿರುತ್ತಾರೆ. ಕಾಯ್ದೆಯ ಸೆಕ್ಷನ್ 23 ರ ಪ್ರಕಾರ, ಮಕ್ಕಳು ಆಸ್ತಿಯನ್ನು ಆನುವಂಶಿಕವಾಗಿ ಪಡೆದ ನಂತರ ಹೆತ್ತವರನ್ನು ನಿರ್ಲಕ್ಷಿಸಿದರೆ ಅಥವಾ ತ್ಯಜಿಸಿದರೆ, ವಿಲ್ ಅಥವಾ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸಲು ಮತ್ತು ವಯಸ್ಸಾದ ಪೋಷಕರಿಗೆ ಮಾಲೀಕತ್ವವನ್ನು ಪುನಃ ಪಡೆಯಲು ಕಾಯ್ದೆಯಲ್ಲಿ ಅನುಮತಿ ಇದೆ ಈ ಕಾನೂನಿನ ಬಗ್ಗೆ ಅರಿವು ಮೂಡಿಸುವ ಮೂಲಕ ಇಂತಹ ಮಕ್ಕಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆದೇಶಿಸಿದ್ದಾರೆ.

Leave a Reply