ಬಡವರ ಪರವಾಗಿ ಬಿಜೆಪಿಯವರ ಸಿದ್ಧಾಂತ ಏನಿದೆ ಎಂಬುದು ಅರ್ಥವಾಗುತ್ತದೆ: ಜಿ ಪರಮೇಶ್ವರ್

1 year ago

ಬೆಂಗಳೂರು: ರಾಜ್ಯದಲ್ಲಿ ಸ್ವಯಂಪ್ರೇರಿತವಾಗಿ ಅನೇಕ ಜನ ಗ್ಯಾರಂಟಿ ಯೋಜನೆಗಳನ್ನು ಬಿಡುತ್ತಿದ್ದಾರೆ. ಆದಾಯ ತೆರಿಗೆ ಪಾವತಿಸುವವರು, ಸರ್ಕಾರಿ ನೌಕರರು ಸೇರಿದಂತೆ ಬಹಳಷ್ಟು ಜನ ಬಿಟ್ಟಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಅಗತ್ಯತೆಯ ಬಗ್ಗೆ ಚರ್ಚೆ ಮಾಡಬೇಕು. ನಂತರ ಏನೆಂಬುದು ಗೊತ್ತಾಗಲಿದೆ. ಸಾಧಕ-ಬಾಧಕಗಳನ್ನು ಚರ್ಚಿಸಬೇಕು. ಚುನಾವಣೆ ಸಂದರ್ಭದಲ್ಲಿ ಬರೀ ಬಿಪಿಎಲ್ ಕಾರ್ಡ್‌ದಾರರಿಗೆ ಮಾತ್ರ ಎಂದು ಹೇಳಿರಲಿಲ್ಲ. ಚರ್ಚೆ ಮಾಡಿದ ಮೇಲೆ ಸರ್ಕಾರ ತೀರ್ಮಾನ ಮಾಡಬೇಕಾಗುತ್ತದೆ ಎಂದರು.

ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಬೊಕ್ಕಸದ ಮೇಲೆ ಹೊರೆಯಾಗಿದೆ ಎಂಬುದರಲ್ಲಿ ಎರಡು‌ ಮಾತಿಲ್ಲ. ಬಡವರಿಗಾಗಿ ಯೋಜನೆಗಳನ್ನು ನೀಡಿದ್ದರಿಂದ ಹೊರೆಯಾಗಿದೆ? ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತದೆ ಎಂಬುದು ಗೊತ್ತಿತ್ತು. ಬಡವರಿಗಾಗಿ ಕೊಡುವ ಕಾರ್ಯಕ್ರಮಗಳಿಂದ ಹೊರೆಯಾಗಲೇಬೇಕು. ಈ ವಿಚಾರ ಗೊತ್ತಿದ್ದೆ ಮಾಡಿದ್ದೇವೆ ಎಂದರು.

ಬಿಜೆಪಿಯವರಿಗೆ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗುವುದು ಬೇಕಿಲ್ಲ. ಹೇಗಾದರು ಮಾಡಿ ಗ್ಯಾರಂಟಿ ಯೋಜನೆಗಳನ್ನು ಹತ್ತಿಕ್ಕಬೇಕು ಎನ್ನುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ನಮ್ಮ‌ ಉದ್ದೇಶ ಬಡವರಿಗೋಸ್ಕರ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದೇವೆ. ಬಡವರಿಗೆ ಹಣ ಕೊಡುವುದು ಬಿಜೆಪಿಯವರಿಗೆ ಮನಸ್ಸಿಲ್ಲ ಎಂದರೆ ಬಿಜೆಪಿಯವರ ಸಿದ್ಧಾಂತ ಏನಿದೆ ಎಂಬುದು ಅರ್ಥವಾಗುತ್ತದೆ. ಬಿಜೆಪಿಯವರು ಬಡವರ ಪರ ಇಲ್ಲ‌. ಪ್ರತಿಭಟನೆ‌ ಮೂಲಕ ಸಾರ್ವಜನಿಕವಾಗಿ ಅದನ್ನು ಹೇಳಲು ಹೊರಟಿದ್ದಾರೆ. ಇದೆಲ್ಲವನ್ನು ಜನ ಗಮನಿಸುತ್ತಾರೆ ಎಂದರು.

Leave a Reply