ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಒದಗಿಸಿ

11 months ago

ಕಾರವಾರ: ಜಿಲ್ಲೆಯಲ್ಲಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರ ವಾಸಿಸುತ್ತಿರುವ ಕಾಲೋನಿಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತಂತೆ ಆ ಕಾಲೋನಿಗಳಿಗೆ ಭೇಟಿ ನೀಡಿ, ಪರಿಶೀಲಿಸಿ, ಅಗತ್ಯವಿರುವ ಮೂಲ ಸೌಕರ್ಯಗಳ ಕುರಿತು ವರದಿ ನೀಡುವಂತೆ ತಿಳಿಸಿದ ಅವರು, ಈ ಜನಾಂಗದವರಿಗೆ ವಸತಿ ಸೌಲಭ್ಯದಡಿಯಲ್ಲಿ ಮನೆಗಳನ್ನು ಒದಗಿಸುವ ಕುರಿತು ಆದ್ಯತೆಯಲ್ಲಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಯೋಜನೆಯಡಿ ಪ್ರತಿಯೊಬ್ಬರಿಗೂ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು, ಆಧಾರ್ನ ತಾಂತ್ರಿಕ ಕಾರಣಗಳಿಂದ ವಿದ್ಯಾರ್ಥಿ ವೇತನ ಪಾವತಿಯಾಗದೇ ಇದ್ದಲ್ಲಿ ಈ ಬಗ್ಗೆ ಜಿಲ್ಲಾ ಆಧಾರ್ ಸಮಾಲೋಚಕರೊಂದಿಗೆ ಚರ್ಚಿಸಿ, ಈ ಸಮಸ್ಯೆಯನ್ನು ಬಗೆಹರಿಸಿ ಎಂದರು.

ಸ್ವಯಂ ಉದ್ಯೋಗ ನೇರ ಸಾಲ, ಸ್ವಾವಲಂಬಿ ಸಾರಥಿ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ಯೋಜನೆಗಳ ಸಂಪೂರ್ಣ ಪ್ರಯೋಜನಗಳನ್ನು ಈ ಜನಾಂಗವರಿಗೆ ದೊರೆಯುವಂತೆ ಮಾಡುವುದಲ್ಲದೇ ಆಸಕ್ತರಿಗೆ ಕೌಶಲ್ಯಾಭಿವೃದ್ದಿ ತರಬೇತಿಗಳನ್ನು ನೀಡಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಿ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಪ ನಿರ್ದೇಶಕ ವಿರೂಪಾಕ್ಷ ಗೌಡ ಪಾಟೀಲ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸತೀಶ್, ಜಿಲ್ಲಾ ಮಟ್ಟದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯ ಶಿವರಾಂ ರಘು ಬಳೆಗಾರ್ ಮತ್ತಿತರರು ಹಾಜರಿದ್ದರು.

Leave a Reply