ಯುವ ನಿಧಿ ಫಲಾನುಭವಿಗಳಿಗೆ ಉದ್ಯೋಗಾಧಾರಿತ ತರಬೇತಿ ನೀಡಿ

9 months ago

ಡಾ.ದಿಲೀಷ್ ಶಶಿ ಸಲಹೆ

ಕಾರವಾರ: ಜಿಲ್ಲೆಯಲ್ಲಿ ಯುವನಿಧಿ ಫಲಾನುಭವಿಗಳಾಗಿರುವ ಯುವ ಜನತೆಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿಗಳನ್ನು ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡಬೇಕು ಎಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯತ್ ನ ತಮ್ಮ ಕಚೇರಿಯಲ್ಲಿ 2025ನೇ ಸಾಲಿನ ಯುವನಿಧಿ ನೋಂದಣಿ ಪ್ರಕ್ರಿಯೆ ಕುರಿತ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಜಿಲ್ಲೆಯಲ್ಲಿರುವ ಯುವನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿಗಳನ್ನು ನೀಡುವ ಮೂಲಕ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಯುವಜನತೆ ಯಾವ ರೀತಿಯ ಸ್ವ ಉದ್ಯೋಗ ಕೈಗೊಳ್ಳಲು ಬಯಸುತ್ತಾರೆ, ಅವರಿಗೆ ಯಾವ ರೀತಿಯ ತರಬೇತಿ ಅಗತ್ಯವಿದೆ, ತರಬೇತಿಯ ಸ್ಥಳ, ಸಂಪನ್ಮೂಲ ವ್ಯಕ್ತಿಗಳು ಸೇರಿದಂತೆೆ ಸಮಗ್ರ ಮಾಹಿತಿಯನ್ನು ಒಳಗೊಂಡ ವರದಿಯನ್ನು ನೀಡುವಂತೆ ಸೂಚಿಸಿದರು.

ಯುವನಿಧಿ ಫಲಾನುಭವಿಗಳು ತಮಗೆ ಅಗತ್ಯವಿರುವ ಕೌಶಲ್ಯ ತರಬೇತಿಯನ್ನು, ಯುವನಿಧಿ ಪ್ಲಸ್ ಕೌಶಲ್ಯ ತರಬೇತಿ ಕಾರ್ಯಕ್ರಮದಡಿಯಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ವೆಬ್ ಸೈಟ್ www.kaushalkar.com/app/registration_verify ನಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಉಚಿತ ತರಬೇತಿಯನ್ನು ಪಡೆಯಬಹುದಾಗಿದ್ದು ಈ ಕುರಿತಂತೆ ಫಲಾನುಭವಿಗಳಿಗೆ ಹೆಚ್ಚಿನ ಅರಿವು ಮೂಡಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ ನಾಗರಾಜ್ ಮುರುಡೇಶ್ವರ , ಜಿ.ಪಂ. ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ , ಜಿಲ್ಲಾ ಉದ್ಯೋಗಾಧಿಕಾರಿ (ಪ್ರ) ವಿನೋದ್ ನಾಯ್ಕ್, ಕೌಶಲ್ಯಾಭಿವೃದ್ದಿ ಇಲಾಖೆಯ ಸಹಾಯಕ ನಿರ್ದೇಶಕ ರಜತ್ ಹಬ್ಬು, ಐಟಿಐ ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಕುಡಾಳಕರ್, ಸೀಡಾಕ್ ಸಿಬ್ಬಂದಿ ಶಿವರಾಜ್ ಕುಮಾರ್ ಹೆಳವಿ ಹಾಜರಿದ್ದರು.

Leave a Reply