ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಎಡಿಸಿ ಮಹಮ್ಮದ್ ಝುಬೇರ್ ಸೂಚನೆ
ಬಳ್ಳಾರಿ: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಹೆಚ್ಚಿನ ಮಳೆಯಿಂದ ವಿವಿಧೆಡೆ ಹಾನಿಯಾಗಿದ್ದು, ತ್ವರಿತವಾಗಿ ಪರಿಹಾರ ಒದಗಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ತಿಳಿಸಿದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ನೂತನ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಮಳೆಹಾನಿ ಸಂಬಂಧಿಸಿದಂತೆ, ಎಲ್ಲಾ ತಾಲ್ಲೂಕು ತಹಶೀಲ್ದಾರರೊಂದಿಗೆ ಏರ್ಪಡಿಸಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಮಿತಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಅತಿವೃಷ್ಠಿಯಿಂದ ಸಂಭವಿಸುವ ಸಾರ್ವಜನಿಕ ಆಸ್ತಿ ಹಾನಿ, ಮಾನವ, ಜಾನುವಾರು ಜೀವಹಾನಿ, ಬೆಳೆ ಹಾನಿ, ಮನೆಗಳ ಹಾನಿ ಬಗ್ಗೆ ಗ್ರಾಮಲೆಕ್ಕಿಗರಿಂದ ವರದಿ ಪಡೆದು, ತಾಲ್ಲೂಕುವಾರು ಕ್ರೋಢೀಕರಿಸಿ ನಿಗದಿತ ನಮೂನೆಯಲ್ಲಿ ಈ ಕಚೇರಿಗೆ ತಪ್ಪದೇ ವರದಿ ಸಲ್ಲಿಸಬಹುದು ಎಂದು ಎಲ್ಲಾ ತಹಶೀಲ್ದಾರರಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಕಳೆದ 48 ಗಂಟೆಗಳಲ್ಲಿ 57 ಮನೆಗಳು ಭಾಗಶಃ ಮತ್ತು 4 ಗುಡಿಸಲು ಮನೆಗಳು ಹಾನಿಯಾಗಿವೆ. ಮಳೆಗಾಲದಲ್ಲಿ ಕಚ್ಛಾ ಮನೆಗಳು ಬೀಳುವುದು, ಜೀವ ಹಾನಿಯಾಗುತ್ತಿರುವುದು ಕಂಡುಬಂದಾಗ ಆಯಾ ತಹಸಿಲ್ದಾರ್ ಮತ್ತು ಗ್ರಾಮಸಹಾಯಕರು ಕೂಡಲೇ ಸ್ಥಳಕ್ಕೆ ಭೇಟಿ ನೀಡಬೇಕು. ಅವರಿಗೆ ನಿಯಮಾನುಸಾರ ನೀಡಲಾಗುವ ಪರಿಹಾರ ವಿತರಣೆಯಲ್ಲಿ ವಿಳಂಬವಾಗಬಾರದು ಎಂದರು.
ಮಳೆಗಾಲದಲ್ಲಿ ವಿದ್ಯುತ್ ಸರಬರಾಜಿನಲ್ಲಿ ಉಂಟಾಗಬಹುದಾದ ನ್ಯೂನತಾ ಅಂಶಗಳನ್ನು ಗಮನದಲ್ಲಿರಿಸಿ ವಿದ್ಯುತ್ ಮೂಲ ಸೌಕರ್ಯಗಳನ್ನು ಬಲಪಡಿಸಬೇಕು. ಯಾವುದೇ ವಿದ್ಯುತ್ನಿಂದ ಹಾನಿ ಅಥವಾ ವಿದ್ಯುತ್ ಸರಬರಾಜು ಕಡಿತ ಉಂಟಾದಲ್ಲಿ ತ್ವರಿತವಾಗಿ ಪುನಃ ಸ್ಥಾಪಿಸಲು ಕ್ರಮವಹಿಸಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ವಿವಿಧ ಗ್ರಾ.ಪಂ ವಾರು ಕುಡಿಯಲು ಯೋಗ್ಯವಾದ ನೀರನ್ನೇ ಸರಬರಾಜು ಮಾಡಬೇಕು. ಈ ಕುರಿತು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪಂಚಾಯತ್ ರಾಜ್ ತಾಂತ್ರಿಕ ಇಲಾಖೆ, ಮತ್ತು ಸಣ್ಣ ನೀರಾವರಿ ಇಲಾಖಾಧಿಕಾರಿಗಳಿಗೆ ತಿಳಿಸಿದರು.
ಕಂಪ್ಲಿ ಮತ್ತು ಸಿರುಗುಪ್ಪ ಭಾಗದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಜಾನುವಾರುಗಳ ಸುರಕ್ಷಿತ ಆಶ್ರಯ ತಾಣಗಳನ್ನು ಗುರುತಿಸಬೇಕು. ಜಾನುವಾರುಗಳಿಗೆ ಅವಶ್ಯ ಮೇವನ್ನು ದಾಸ್ತಾನು ಮಾಡಬೇಕು ಎಂದು ಪಶುಸಂಗೋಪನಾ ಇಲಾಖಾ ಅಧಿಕಾರಿಗೆ ತಿಳಿಸಿದರು.
ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಪಡೆ, ತರಬೇತಿ ಪಡೆದ ಸಮುದಾಯ ಮಟ್ಟದ ಸ್ವಯಂ ಸೇವಕರನ್ನು ಜಾಗೃತಿಗೊಳಿಸಿ ಸನ್ನದ್ಧ ಸ್ಥಿತಿಯಲ್ಲಿಡುವುದು ಮತ್ತು ಇಲಾಖೆಯಲ್ಲಿ ಲಭ್ಯವಿರುವ ರಕ್ಷಣಾ ಸಲಕರಣೆ ಮಾಹಿತಿ ಕ್ರೂಡೀಕರಿಸಿಟ್ಟುಕೊಳ್ಳಬೇಕು ಹಾಗೂ ಎಲ್ಲಾ ಸಲಕರಣೆಗಳನ್ನು ಸುಸ್ಥಿತಿಯಲ್ಲಿರುವಂತೆ ಕ್ರಮ ವಹಿಸಬೇಕು ಎಂದು ಅಗ್ನಿ ಶಾಮಕ ಮತ್ತು ಗೃಹ ರಕ್ಷಕದಳ ಇಲಾಖೆಗೆ ತಿಳಿಸಿದರು.
ತುರ್ತು ಸಂದರ್ಭಗಳಲ್ಲಿ ಇತರೆ ಎಲ್ಲಾ ಇಲಾಖೆಗಳನ್ನು ಒಳಗೊಂಡಂತೆ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಸನ್ನದ್ಧರಾಗಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಜಂಟಿ ಕೃಷಿ ನಿರ್ದೇಶಕ ಡಾ.ಕೆ.ಸೋಮಸುಂದರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಹಾಜರಿದ್ದರು.




