ಬೆಂಗಳೂರು: ವಿದ್ಯಾರ್ಥಿಗಳ ಭವಿಷ್ಯದ ಮುಖ್ಯ ಘಟ್ಟವಾದ ದ್ವಿತೀಯ ಪಿಯುಸಿ-2023 ವಾರ್ಷಿಕ ಪರೀಕ್ಷೆ ನಾಳೆಯಿಂದ ರಾಜ್ಯಾದ್ಯಂತ ಆರಂಭವಾಗಲಿದೆ. ಇದಕ್ಕಾಗಿ ಪಿ.ಯು.ಮಂಡಳಿ ಎಲ್ಲಾ ಸಿದ್ಧತೆಗಳನ್ನು ಮಾಡಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ ಪ್ರತಿಭಂದಕಾಜ್ಞೆ ಜಾರಿಗೊಳಿಸಲಾಗಿದೆ.
ಪರೀಕ್ಷೆ ನಡೆಯಲಿರುವ ರಾಜ್ಯದ 1109 ಪರೀಕ್ಷಾ ಕ್ಷೆಂದ್ರಗಳಲ್ಲಿ ಸಿದ್ಧತೆ ಮಾಡಿಕೊಂಡಿದ್ದು, 7,26,224 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ ಹೊಸದಾಗಿ 6,29,791 ಲಕ್ಷ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, 3,25,053 ವಿದ್ಯಾರ್ಥಿನಿಯರು, 3,47,038 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷೆಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ಜತೆಗೆ ಪೊಲೀಸ್ ಬಂದೋಬಸ್ತ್ಗೂ ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಕೇಂದ್ರಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ. ಸೈಬರ್ ಸೆಂಟರ್, ಟ್ಯೂಷನ್ ಕೇಂದ್ರಗಳು, ಗೇಮ್ಸ್ ಕೇಂದ್ರಗಳ ಮೇಲೂ ವಿಶೇಷ ನಿಗಾ ಇಡಲಾಗಿದೆ.
ಮೊಬೈಲ್ ಫೋನ್, ಸ್ಮಾರ್ಟ್ ವಾರ್ಚ್, ಹಿಯರ್ ಫೋನ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ ಸಾಧನಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ನಿಷೇಧಿಸಲಾಗಿದೆ. ವಿದ್ಯಾರ್ಥಿಗಳು ಸಮಯ ನೋಡಿಕೊಳ್ಳಲು ಪ್ರತಿ ಕೊಠಡಿಯಲ್ಲಿ ಗೋಡೆ ಗಡಿಯಾರದ ವ್ಯವಸ್ಥೆ ಮಾಡಲಾಗಿದೆ.
ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳ ಸಾಗಣೆ ಮತ್ತು ಸಂಗ್ರಹಣೆ, ಮೌಲ್ಯಮಾಪನ ಕೇಂದ್ರಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಮೌಲ್ಯಮಾಪನ ಕೇಂದ್ರಗಳಿಗೆ ಸಿಸಿ ಕ್ಯಾಮೆರಾ ನಿಗಾ ವಹಿಸಲಾಗುತ್ತದೆ. ಪರೀಕ್ಷಾ ಕರ್ತವ್ಯದಲ್ಲಿ ನಿರತರಾಗುವ ಅಧಿಕಾರಿ ಮತ್ತು ಸಿಬ್ಬಂದಿಗೆ ಮೊಬೈಲ್ ಫೋನ್ ಬಳಕೆ ನಿಷೇಧಿಸಲಾಗಿದೆ.
ನಾಳೆಯಿಂದ ಮಾ.29ರ ವರೆಗೂ ವಿವಿಧ ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ 65 ಕೇಂದ್ರಗಳನ್ನು ತೆರೆಯಲಾಗುತ್ತದೆ.



