ರಾಮೇಶ್ವರಂ ಸ್ಫೋಟ ಪ್ರಕರಣ: ಕರ್ನಾಟಕ, ತಮಿಳುನಾಡಿನಲ್ಲಿ ದಾಳಿ

2 years ago

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ವೈಟ್ ಫೀಲ್ಡ್  ಸಮೀಪದ ಬ್ರೂಕ್ ಫೀಲ್ಡ್ ನಲ್ಲಿರುವ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧಿಸಿದಂತೆ ನಗರದ ನಾಲ್ಕು ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೇ ವೇಳೆ ಕೊಯಮತ್ತೂರಿನಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೇಶಾದ್ಯಂತ ಒಟ್ಟು 11 ಕಡೆಗಳಲ್ಲಿ ಎಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಹಾಗೂ ಬನಶಂಕರಿಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಿರುವ  ಎನ್ಐಎ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಕೊಯಮತ್ತೂರಿನ ವೈದ್ಯ ಜಾಫರ್ ಇಕ್ಬಾಲ್ ಹಾಗೂ ನಯನ್ ಸಾದಿಕ್ ಮನೆಗಳ ಮೇಲೆ ದಾಳಿ ನಡೆಸಿ, ಇಂಚಿಂಚೂ ಶೋಧ ಕೈಗೊಂಡು ಇಬ್ಬರಿಂದಲೂ ಮಾಹಿತಿ ಸಂಗ್ರಹಿಸಿದ್ದಾರೆ.

ಎರಡು ತಂಡಗಳಲ್ಲಿ ಬಂದ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆ ವಶಪಡಿಸಿಕೊಂಡು, ಅಕ್ಕಪಕ್ಕದ ಮನೆಯವರಿಂದಲೂ ಮಾಹಿತಿ ಸಂಗ್ರಹಿಸಿದ್ದಾರೆ.

ದಾಳಿ ವೇಳೆ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಹಾಗೂ ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಪೋಟ ಸಂಬಂಧಿಸಿದಂತೆ ಮಹತ್ವದ ಮಾಹಿತಿಗಳು ಲಭ್ಯವಾಗಿವೆ ಎಂದು ಎನ್ ಐಎ ಮೂಲಗಳು ತಿಳಿಸಿವೆ.

ಕಳೆದ ಮಾರ್ಚ್ 1 ರಂದು ಮಧ್ಯಾಹ್ನ 12:55ರ ಸುಮಾರಿಗೆ ವೈಟ್ ಫೀಲ್ಡ್ ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟವಾಗಿತ್ತು. ಕೃತ್ಯ ಎಸಗಿದ ಆರೋಪಿಗಳಾದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್ ಅನ್ನು ಎನ್ಐಎ ಅಧಿಕಾರಿಗಳು, ಘಟನೆ ನಡೆದು 43 ದಿನಗಳ ನಂತರ ಪಶ್ಚಿಮ ಬಂಗಾಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಬಂಧಿತರ ವಿಚಾರಣೆ ನಡೆಸಿದ್ದು ಬೆಚ್ಚಿ ಬೀಳಿಸುವ ಸಂಗತಿ ಬಯಲಾಗಿದ್ದು ಅದನ್ನು ಆಧರಿಸಿ ಬೆಂಗಳೂರು ಹಾಗೂ ಕೊಯಮತ್ತೂರಿನ 11 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲಿಸಲಾಗಿದೆ.

Leave a Reply