ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಸಿದ್ದರಾಮಯ್ಯ ವಿರುದ್ಧದ ನಿವೇಶನ ಅಕ್ರಮ ಆರೋಪ ಕುರಿತ ಪ್ರಕರಣ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಮತ್ತೊಂದೆಡೆ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸಕ್ಕೆ ತೆರಳಿರುವುದು ಸಾಕಷ್ಟು ಚರ್ಚೆಗೆ ಗ್ರಾಸ ಒದಗಿಸಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಸಿದ್ದರಾಮಯ್ಯ ವಿರುದ್ಧದ ಪ್ರಕರಣದ ಬಗ್ಗೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಬಗ್ಗೆ ಈ ತಿಂಗಳ 12ರೊಳಗೆ ತೀರ್ಮಾನ ಪ್ರಕಟಿಸುವುದಾಗಿ ಹೈಕೋರ್ಟ್ ಹೇಳಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಹುದ್ದೆ ಕುರಿತಾದ ಚರ್ಚೆ ತೀವ್ರವಾಗಿದೆ.
ಮುಖ್ಯಮಂತ್ರಿಯಾಗಬೇಕು ಎಂದು ತಮಗೂ ಆಸೆ ಇದೆ ಎಂದು ಸಚಿವರಾದ ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಹೇಳಿಕೆ ನೀಡಿದ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸ ಹಲವಾರು ರೀತಿಯ ವದಂತಿಗಳಿಗೆ ವೇದಿಕೆ ಒದಗಿಸಿದೆ.
ಅಮೆರಿಕ ಅಧ್ಯಕ್ಷ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಮಲ ಹ್ಯಾರೀಸ್ ಪರವಾಗಿ ಆಯೋಜಿಸಿರುವ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಶಿವಕುಮಾರ್ ಅಮೆರಿಕಾಕ್ಕೆ ತೆರಳಿದ್ದಾರೆ ಎಂದು ಊಹಾಪೋಹಗಳು ಕೇಳಿಬರುತ್ತಿವೆ. ಆದರೆ ಇದು ನಾಯಕತ್ವ ಬದಲಾವಣೆಗೆ ತೆರೆಮರೆಯಲ್ಲಿ ನಡೆದಿರುವ ರಹಸ್ಯ ಕಾರ್ಯಾಚರಣೆ ಎಂದು ಬಿಂಬಿಸಲಾಗುತ್ತಿದೆ.
ತಮ್ಮ ವಿದೇಶ ಪ್ರವಾಸ ಈ ರೀತಿಯ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಒಂದನ್ನು ಬರೆದಿದ್ದು ಖಾಸಗಿ ಕಾರ್ಯಕ್ರಮ ನಿಮಿತ್ತ ತಾವು ಕುಟುಂಬ ಸದಸ್ಯರೊಂದಿಗೆ ಅಮೆರಿಕಾ ಪ್ರವಾಸ ಕೈಗೊಂಡಿದ್ದು ಸೆಪ್ಟೆಂಬರ್ 16ರಂದು ವಾಪಸ್ ಬರುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದಲ್ಲದೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲೂ ಸ್ಪಷ್ಟನೆ ನೀಡಿದ್ದು, ತಮ್ಮ ಉದ್ದೇಶಿತ ಅಮೆರಿಕಾ ಪ್ರವಾಸ ಈ ಹಿಂದೆಯೇ ನಿಗದಿಯಾಗಿತ್ತು. ಇದೆ ವೇಳೆ ಅಧ್ಯಕ್ಷ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಮಲ ಹ್ಯಾರಿಸ್ ಪರವಾಗಿ ಆಯೋಜಿಸಿರುವ ಸಮ್ಮೇಳನದಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಹಾಗೆಯೇ ಕೆಲವು ಉದ್ಯಮಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸುತ್ತಿದ್ದೇನೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಹೇಳಿದ್ದಾರೆ.
ಈ ಬೆಳವಣಿಗೆಗಳ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಂಸದ ಡಿ.ಕೆ. ಸುರೇಶ್, ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿ ಆಗಿದ್ದು ತಮ್ಮ ಐದು ವರ್ಷಗಳ ಅಧಿಕಾರ ಅವಧಿಯನ್ನು ಪೂರ್ಣಗೊಳಿಸಲಿದ್ದಾರೆ ಈ ಬಗ್ಗೆ ಚರ್ಚೆ ಅನಗತ್ಯ ಎಂದರು.
ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಯಾವುದೇ ಕಾರಣಕ್ಕೂ ಚ್ಯುತಿ ಬರುವುದಿಲ್ಲ. ಅವರೇ ಐದು ವರ್ಷ ಸಿಎಂ ಆಗಿರುತ್ತಾರೆ. ಹೈಕಮಾಂಡ್ ಕೂಡ ಇದನ್ನು ಸ್ಪಷ್ಟವಾಗಿ ಹೇಳಿದೆ ಎಂದರು.
ಕೆಲವರಿಗೆ ಮುಖ್ಯಮಂತ್ರಿ ಆಗುವ ಆಸೆ ಇರಬಹುದು ಅವರೆಲ್ಲರೂ ಹಿರಿಯ ನಾಯಕರೇ. ಆದರೆ, ಖಾಲಿ ಇಲ್ಲದ ಹುದ್ದೆಗೆ ಪೈಪೋಟಿ ನಡೆಸುವುದು ಸೂಕ್ತವಲ್ಲ. ಎಲ್ಲ ಶಾಸಕರ ಅಭಿಪ್ರಾಯ ಆಧರಿಸಿ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಹೈಕಮಾಂಡ್ ಕೂಡ ಸಿದ್ದರಾಮಯ್ಯ ಅವರ ಬೆನ್ನಿಗಿದೆ ಎಂದರು.
ಬಿಜೆಪಿಯವರು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಹುನ್ನಾರ ನಡೆಸುತ್ತಿದ್ದಾರೆ. ಆ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳಬೇಕಿಲ್ಲ. ರಾಜ್ಯ ಸರ್ಕಾರ ಭದ್ರವಾಗಿದೆ. ಯಾವ ಅನುಮಾನವೂ ಬೇಡ ಎಂದರು.
ರಾಜಕಾರಣದಲ್ಲಿ ಗೊಂದಲ ಸೃಷ್ಟಿಸಬೇಕು ಎಂದೇ ಕೆಲವರು ಇರುತ್ತಾರೆ. ಗೊಂದಲಗಳಿಂದಲೇ ನಾಯಕರಾಗಬೇಕು ಎಂಬುದು ಅವರ ಆಸೆ. ಕೆಲಸ ಮಾಡಿ ನಾಯಕರಾಗಬೇಕು ಎಂದರು.



