ಕರ್ನಾಟಕ ಹೂಡಿಕೆಗೆ ಅತ್ಯುತ್ತಮ ತಾಣ ಎಂಬುದುನ್ನು ಮನದಟ್ಟು ಮಾಡಲು ಸಿದ್ದತೆ: ಎಂ ಬಿ ಪಾಟೀಲ್

1 year ago


ಬೆಂಗಳೂರು: ಫೆಬ್ರವರಿ 11ರಿಂದ 14ರವರೆಗೆ  ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಕರ್ನಾಟಕ ಹೂಡಿಕೆಗೆ ಅತ್ಯುತ್ತಮ ತಾಣ ಎನ್ನುವುದನ್ನು ಮನದಟ್ಟು ಮಾಡಿಕೊಡುವ ರೀತಿಯಲ್ಲಿ ಸಿದ್ದತೆ ನಡೆದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಇನ್ವೆಸ್ಟ್ ಕರ್ನಾಟಕ-2025ರ ಮೊಟ್ಟಮೊದಲ ಜಾಗತಿಕ ಹೂಡಿಕೆದರರ ಸಮಾವೇಶದ ಸಮನ್ವಯ ಸಭೆಯಲ್ಲಿ ನಾನಾ ಇಲಾಖೆಯ ಉನ್ನತಾಧಿಕಾರಿಗಳು, ಕೈಗಾರಿಕಾ ಸಂಘಟನೆಗಳ ಮುಖ್ಯಸ್ಥರು ಮತ್ತು ಪ್ರತಿನಿಧಿಗಳ ಜೊತೆ ಅವರು ವಿಚಾರ ವಿನಿಮಯ ನಡೆಸಿದರು.

ಸಭೆ ಬಳಿಕ ಮಾತನಾಡಿದ ಅವರು, ಜಾಗತಿಕ ಹೂಡಿಕೆದಾರರ ಸಮಾವೇಶ ಬಂಡವಾಳ ಹೂಡಿಕೆ, ಕೈಗಾರಿಕಾ ಮತ್ತು ಬೆಳವಣಿಗೆ, ಆರ್ಥಿಕ ಅಭಿವೃದ್ಧಿ ಹೀಗೆ ಹಲವು ದೃಷ್ಟಿಗಳಿಂದ ಮಹತ್ತ್ವದ್ದಾಗಿದೆ. ಈ ಸಮಾವೇಶದಲ್ಲಿ ದೇಶ-ವಿದೇಶಗಳ 5 ಸಾವಿರ ಪ್ರತಿನಿಧಿಗಳು ಮತ್ತು ತಾಂತ್ರಿಕ ಪರಿಣತರು ಭಾಗವಹಿಸಲಿದ್ದಾರೆ ಎಂದರು.

ಇದೇ ಮೊದಲ ಬಾರಿಗೆ ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ಆದ್ಯತೆ ನೀಡುತ್ತಿದ್ದು, ಮಹಿಳಾ ಉದ್ಯಮಿಗಳಿಗೂ ಸೂಕ್ತ ಪ್ರಾತಿನಿಧ್ಯ ಕಲ್ಪಿಸಲಾಗುತ್ತಿದೆ. 2025ರ ಫೆ.11ರ ಸಂಜೆಯೇ ಸಮಾವೇಶದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಫೆ.12 ಮತ್ತು 13ರಂದು ಸಂಪೂರ್ಣವಾಗಿ ಎರಡು ದಿನ ಗಂಭೀರ ಚರ್ಚೆಗಳು ನಡೆಯಲಿವೆ ಎಂದರು.

ಸಮಾವೇಶವನ್ನು ಯಶಸ್ವಿಗೊಳಿಸಲೆಂದು ಈಗಾಗಲೇ ಅಮೆರಿಕ ಮತ್ತು ಜಪಾನಿನಲ್ಲಿ ರೋಡ್ ಶೋ ನಡೆಸಲಾಗಿದೆ. ಸದ್ಯದಲ್ಲೇ ಯೂರೋಪಿನಲ್ಲೂ ರೋಡ್-ಶೋ ನಡೆಯಲಿದೆ. ಗಣ್ಯ ಸಾಧಕರೊಬ್ಬರನ್ನು ಸಮಾವೇಶದ ಉದ್ಘಾಟಕರನ್ನಾಗಿ ಆಹ್ವಾನಿಸಲಾಗುವುದು ಎಂದರು.

ಆಮಂತ್ರಿತ ಉದ್ಯಮಿಗಳು ಬಯಸಿದರೆ ರಾಜ್ಯದ ಪ್ರವಾಸಿ ತಾಣಗಳಿಗೆ ಅವರನ್ನು ಕರೆದೊಯ್ಯಲು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಪ್ರವಾಸೋದ್ಯಮ ಇಲಾಖೆಗೆ ಸೂಚಿಸಲಾಗಿದೆ. ಆಹ್ವಾನಿತರಿಗೆ ಸುಗಮ ಸಂಚಾರ, ವಸತಿ ಮತ್ತು ಆತಿಥ್ಯ, ಕಾನೂನು ಮತ್ತು ಸುವ್ಯವಸ್ಥೆ ಯಾವುದರಲ್ಲೂ ಕಿಂಚಿತ್ತೂ ಲೋಪವಾಗದಂತೆ ಆಯಾಯ ಇಲಾಖೆಗಳು ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು.

Leave a Reply