ದೆಹಲಿ: ರಾಜ್ಯದಲ್ಲಿ ಈಗಾಗಲೇ ಬರ ಘೋಷಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಮನವಿಯನ್ನೂ ಸಲ್ಲಿಸಲಾಗಿದೆ. ಈ ಸಂಬಂಧ ಶೀಘ್ರ ನಿರ್ಧಾರ ತೆಗೆದುಕೊಂಡು ಬರ ಪರಿಹಾರ ಹಣ ಬಿಡುಗಡೆಗೊಳಿಸಿ ಎಂದು ಕೇಂದ್ರ ಹಣಕಾಸು ಸಚಿವರ ಬಳಿ ಮನವಿ ಸಲ್ಲಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಅವರ ಜೊತೆಗೂಡಿ ಗುರುವಾರ ದೆಹಲಿಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯ ನಂತರ ಪತ್ರಕರ್ತರ ಜೊತೆಗೆ ಮಾತನಾಡಿದ ಅವರು, “ರಾಜ್ಯದ 223 ತಾಲೂಕುಗಳನ್ನು ಈಗಾಗಲೇ ಬರ ಪೀಡಿತ ಎಂದು ಘೋಷಿಸಲಾಗಿದೆ. ಅಂದರೆ ಇಡೀ ರಾಜ್ಯ ಬರಪೀಡಿತ ಪರಿಸ್ಥಿತಿ ಎದುರಿಸುತ್ತಿದೆ. ಪರಿಣಾಮ ರೈತರು ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರದ ಮನವಿ ಬಗ್ಗೆ ಶೀಘ್ರ ನಿರ್ಧಾರ ತೆಗೆದುಕೊಳ್ಳಿ, ಬರ ಪರಿಹಾರವನ್ನು ಆದಷ್ಟು ಶೀಘ್ರದಲ್ಲಿ ಬಿಡುಗಡೆಗೊಳಿಸಿ ಎಂದು ನಿರ್ಮಲಾ ಸೀತಾರಾಮನ್ ಅವರ ಬಳಿ ಮನವಿ ಸಲ್ಲಿಸಿರುವುದಾಗಿ” ತಿಳಿಸಿದರು.
ಪರಿಹಾರದ ಹಣವನ್ನು ವಿಳಂಭವಿಲ್ಲದೆ ಪಾರದರ್ಶಕವಾಗಿ ಮತ್ತು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ತಲುಪಿಸುವ ಸಂಬಂಧ ಅಗತ್ಯ ಎಲ್ಲಾ ಕ್ರಮಗಳನ್ನೂ ರಾಜ್ಯ ಸರ್ಕಾರ ಈಗಾಗಲೇ ಕೈಗೊಂಡಿದೆ. ಹೀಗಾಗಿ ಕೇಂದ್ರ ಸರ್ಕಾರ ಪರಿಹಾರದ ಹಣ ಬಿಡುಗಡೆ ಮಾಡುತ್ತಿದ್ದಂತೆ ಆ ಹಣವನ್ನು ವಿಳಂಭವಿಲ್ಲದೆ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು ಎಂಬುದನ್ನೂ ನಿರ್ಮಲಾ ಸೀತಾರಾಮನ್ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದರು.
ರಾಜ್ಯದಲ್ಲಿರುವ ಸಣ್ಣ ಮತ್ತು ಅತಿಸಣ್ಣ ರೈತರ ನಿಖರ ಅಂಕಿಸಂಖ್ಯೆಯ ಮಾಹಿತಿಯ ಬಗ್ಗೆಯೂ ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದರು.
ಪಿಎಂ ಕಿಸಾನ್ ಮತ್ತು ಆಧಾರ್ ಲಿಂಕ್ “ಫ್ರೂಟ್ಸ್” ಡೇಟಾಬೇಸ್ ಪ್ರಕಾರ ರಾಜ್ಯದಲ್ಲಿ ಕನಿಷ್ಟ ಶೇ.70ಕ್ಕೂ ಅಧಿಕ ಸಂಖ್ಯೆಯಲ್ಲಿ ಸಣ್ಣ- ಅತಿಸಣ್ಣ ರೈತರಿದ್ದಾರೆ. ಆದರೆ, ಕೇಂದ್ರ ಸರ್ಕಾರದ 2015ರ ಕೃಷಿ ಗಣತಿಯ ಪ್ರಕಾರ ರಾಜ್ಯದಲ್ಲಿ ಸಣ್ಣ-ಅತಿಸಣ್ಣ ರೈತರ ಸಂಖ್ಯೆ ಶೇ.44 ಎನ್ನುತ್ತಿವೆ. ಇದರಿಂದಾಗಿ ರಾಜ್ಯದ ರೈತರಿಗೆ ಪರಿಹಾರದಲ್ಲೂ ಅನ್ಯಾಯವಾಗಲಿದೆ. ಹೀಗಾಗಿ ಕೇಂದ್ರ ಸರ್ಕಾರ ರಾಜ್ಯದ ನವೀಕೃತ ಡೇಟಾಬೇಸ್ ಮಾಹಿತಿಯನ್ನು ಆಧರಿಸಿ ಪರಿಹಾರ ಬಿಡುಗಡೆಗೊಳಿಸಬೇಕು. ಅಲ್ಲದೆ, ಪರಿಹಾರ ಹಣ ಬಿಡುಗಡೆ ಮಾಡುವ ಸಂದರ್ಭದಲ್ಲಿ ಕೇಂದ್ರದ ಮಾನದಂಡದಂತೆ ಸಾಧಾರಣ ಬರ ಎಂದು ಘೋಷಿಸಿರುವ ತಾಲೂಕುಗಳನ್ನೂ ಸಹ ಪರಿಹಾರಕ್ಕೆ ಪರಿಗಣಿಸಿ ಎಂದು ಸಚಿವರಾದ ನಿರ್ಮಲಾ ಸೀತಾರಾಮನ್ ಅವರ ಬಳಿ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದರು.
ರಾಜ್ಯದಲ್ಲಿ ವಿಮಾ ಕಂಪೆನಿಗಳು ಸಮಯಕ್ಕೆ ಸರಿಯಾಗಿ ರೈತರಿಗೆ ಬೆಳೆ ವಿಮೆ ಹಣ ಪಾವತಿಸದೆ ವಿಳಂಭ ಧೋರಣೆ ಅನುಸರಿಸುತ್ತಿವೆ, ಇದರಿಂದಲೂ ರೈತರು ಸಾಕಷ್ಟು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ ಎಂದು ನಿರ್ಮಾಲಾ ಸೀತಾರಾಮನ್ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಚಿವರು ವಿಮಾ ಕಂಪೆನಿಗಳಿಗೆ ಶೀಘ್ರವೇ ಬೆಳೆ ವಿಮೆ ಹಣ ಬಿಡುಗಡೆ ಮಾಡುವಂತೆ ಸೂಚಿಸುವುದಾಗಿ ತಿಳಿಸಿದ್ದಾರೆ ಎಂದು ತಿಳಿಸಿದರು.
ರಾಗಿ ಸಜ್ಜೆ ಜೋಳ ಸೇರಿದಂತೆ ರೈತರು ಬೆಳೆಯುವ ಎಲ್ಲಾ ಸಿರಿಧಾನ್ಯಗಳನ್ನೂ ಯಾವುದೇ ನಿಬಂಧನೆ ಇಲ್ಲದೆ ಕನಿಷ್ಠ ಬೆಂಬಲ ಬೆಲೆ ನೀಡಿ ಸರ್ಕಾರವೇ ಖರೀದಿ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಸಚಿವರಾದ ನಿರ್ಮಲಾ ಸೀತಾರಾಮನ್ ಅವರ ಬಳಿ ಮನವಿ ಮಾಡಿರುವುದಾಗಿ ತಿಳಿಸಿದರು.
ಸಭೆಯಲ್ಲಿ ರಾಜ್ಯದ ಸಿರಿಧಾನ್ಯದ ಇತಿಹಾಸವನ್ನು ನಿರ್ಮಲಾ ಸೀತಾರಾಮನ್ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ. ಸರ್ಕಾರವೇ ಎಲ್ಲಾ ಸಿರಿಧಾನ್ಯಗಳನ್ನೂ ಖರೀದಿಸಿದರೆ ಸಿರಿಧಾನ್ಯಗಳನ್ನು ಬೆಳೆಯುವ ವ್ಯಾಪ್ತಿಯೂ ಹೆಚ್ಚಲಿದೆ, ಇದರಿಂದ ರೈತರಿಗೂ ಅನುಕೂಲವಾಗಲಿದೆ ಎಂದು ಅವರಿಗೆ ತಿಳಿಸಿಕೊಡಲಾಗಿದೆ. ಈ ಬೇಡಿಕೆಗೂ ನಿರ್ಮಲಾ ಸೀತಾರಾಮನ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.




