ಕಾಲ್ತುಳಿತ ಪ್ರಕರಣ ಕುರಿತು 10 ದಿನಗಳಲ್ಲಿ ಇದರ  ವರದಿ ಬರುವ ಸಾಧ್ಯತೆ

10 months ago

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣ ಸಂಬಂಧಿಸಿದಂತೆ  ನ್ಯಾಯಾಂಗ ತನಿಖೆ ಮುಕ್ತಾಯ ಹಂತದಲ್ಲಿದೆ. ಮುಂದಿನ 10 ದಿನಗಳಲ್ಲಿ ಇದರ  ವರದಿ ಬರುವ ಸಾಧ್ಯತೆಯಿದೆ.

ಇದು ಕಾಲ್ತುಳಿತ ಪ್ರಕರಣ ಸಂಬಂಧ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿರುವ ಹೇಳಿಕೆ.

ಪ್ರಕರಣದ ವಿಚಾರಣೆ ವೇಳೆ, ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೋಕೇಟ್‌ ಜನರಲ್ ಶಶಿಕಿರಣ್ ಶೆಟ್ಟಿ, ಮುಂದಿನ ಸುಮಾರು 10 ದಿನಗಳಲ್ಲಿ ನ್ಯಾಯಾಂಗ ತನಿಖೆಯ ವರದಿ ಬರುವ ಸಾಧ್ಯತೆಯಿದೆ. ಅದನ್ನು ನ್ಯಾಯಾಲಯಕ್ಕೆ ಒದಗಿಸಲಾಗುವುದು. ಹಾಗಾಗಿ, ಅರ್ಜಿ ವಿಚಾರಣೆಯನ್ನು 10 ದಿನಗಳ ನಂತರಕ್ಕೆ ಮಂದೂಡಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿರುವ ವಸ್ತುಸ್ಥಿತಿ ವರದಿ/ದಾಖಲೆಗಳನ್ನು ಏಕೆ ಮುಚ್ಚಿದ ಲಕೋಟೆಯಲ್ಲಿಯೇ ಇರಿಸಬೇಕು? ಎಂದು ಎಜಿಯವರನ್ನು ಪ್ರಶ್ನಿಸಿತು.

ಪ್ರಕರಣದ ಅಮಿಕಸ್ ಕ್ಯೂರಿ ಹಿರಿಯ ವಕೀಲೆ ಸುಶೀಲಾ, ‘ಈಗಾಗಲೇ ಹಲವು ಬಾರಿ ವಿಚಾರಣೆ ಮುಂದೂಡಿಕೆಯಾಗಿದೆ. ಸರ್ಕಾರ ಸಲ್ಲಿಸಿರುವ ದಾಖಲೆಗಳನ್ನು ಏಕೆ ಬಹಿರಂಗಪಡಿಸಬಾರದು ಎಂಬುದಕ್ಕೆ ಸರ್ಕಾರ ನ್ಯಾಯ ಸಮ್ಮತವಾದ ಕಾರಣ ನೀಡುತ್ತಿಲ್ಲ. 10-15 ದಿನಗಳ ನಂತರ ದಾಖಲೆಗಳನ್ನು ಬಹಿರಂಗಪಡಿಸುವ ರಾಜ್ಯದ ನಿಲುವನ್ನು ನಮ್ಮ ನ್ಯಾಯ ವಿತರಣಾ ವ್ಯವಸ್ಥೆ ಅನುಮೋದಿಸುವುದಿಲ್ಲ. ವರದಿ ಪಾರದರ್ಶಕವಾಗಿರಬೇಕಿದೆ. ಅದನ್ನು ಸಾರ್ವಜನಿಕರು ನೋಡಬೇಕಾಗುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇದಕ್ಕೆ ಎಜಿ ಉತ್ತರಿಸಿ, ಮ್ಯಾಜಿಸ್ಟೀರಿಯಲ್ ವಿಚಾರಣೆ ಅಥವಾ ನ್ಯಾಯಾಂಗ ಆಯೋಗದ ಸ್ಥಿತಿಗತಿ ವರದಿಯನ್ನು ಬಳಸಿಕೊಳ್ಳಬಾರದು. ಸ್ವತಂತ್ರ ಹಾಗೂ ನಿಷ್ಪಕ್ಷಪಾತ ವಿಚಾರಣೆ ನಡೆಯಬೇಕಿದೆ. ಆ ಉದ್ದೇಶದಿಂದ ವರದಿ ಬಹಿರಂಗವಾಗಬಾರದು. ಅದನ್ನು ಮುಚ್ಚಿದ ಲಕೋಟೆಯಲ್ಲಿ ಇಡುವಂತೆ ಕೋರಲಾಗುತ್ತಿದೆ ಎಂದು ಸಮರ್ಥಿಸಿಕೊಂಡರು. ವಾದ, ಪ್ರತಿವಾದ ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿತು.

Leave a Reply