ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಕೇಂದ್ರ ವಿದೇಶಾಂಗ ಇಲಾಖೆಗೆ ಪತ್ರ ಬರೆದಿದ್ದಾರೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಪೆನ್ ಡ್ರೈವ್ ಬಹಿರಂಗವಾಗುತ್ತಿದ್ದಂತೆ ಅವರು ತಮ್ಮ ರಾಜತಾಂತ್ರಿಕ ಪಾಸ್ ಪೋರ್ಟ್ ಬಳಸಿ ವಿದೇಶಕ್ಕೆ ತೆರಳಿದ್ದಾರೆ. ಅವರನ್ನು ಭಾರತಕ್ಕೆ ವಾಪಸ್ ಕರೆ ತರಲು ವಿಶೇಷ ತನಿಖಾ ತಂಡ ಮಾಡಿದ ಎಲ್ಲ ಪ್ರಯತ್ನಗಳು ವಿಫಲವಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಗೃಹ ಸಚಿವ ಜಿ ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರೆದಿರುವ ಪತ್ರ ಆಧರಿಸಿ, ವಿದೇಶಾಂಗ ಇಲಾಖೆ ಕ್ರಮ ಕೈಗೊಂಡರೆ ಪ್ರಜ್ವಲ್ ಅವರ ಪಾಸ್ ಪೋರ್ಟ್ ರದ್ದಾಗಲಿದೆ. ಹೀಗಾಗಿ ಅವರು ಸ್ವದೇಶಕ್ಕೆ ಮರಳುವುದು ಅನಿವಾರ್ಯವಾಗಲಿದೆ ಎಂದರು.
ಪ್ರಜ್ವಲ್ ರೇವಣ್ಣ ಎಲ್ಲಿದ್ದರೂ ಬಂದು ತನಿಖಾ ತಂಡದ ಮುಂದೆ ಶರಣಾಗುವಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾಡಿರುವ ಮನವಿ ಅವರ ಆಂತರಿಕ ವಿಚಾರವಾಗಿದೆ. ಈ ವಿಷಯದ ಬಗ್ಗೆ ತಾವು ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ. ಬದಲಿಗೆ ಕಾನೂನಿನ ಪ್ರಕ್ರಿಯೆಗಳನ್ನು ನಡೆಸುತ್ತಿದ್ದೇವೆ ಎಂದರು.
ಟೆಲಿಫೋನ್ ಕದ್ದಾಲಿಸಲಾಗುತ್ತಿದೆ ಎಂಬ ಎಚ್.ಡಿ.ಕುಮಾರಸ್ವಾಮಿಯವರ ಆರೋಪದ ಕುರಿತು ಪ್ರತಿಕ್ರಿಯೆ ನೀಡಿದ ಪರಮೇಶ್ವರ್, ರಾಜ್ಯ ಸರ್ಕಾರ ಯಾರ ಟೆಲಿಫೋನ್ ಗಳನ್ನು ಕದ್ದಾಲಿಕೆ ಮಾಡುತ್ತಿಲ್ಲ. ಟೆಲಿಫೋನ್ ಟ್ರಾಪ್ ಮಾಡುವುದು ಅಷ್ಟು ಸುಲಭದ ಕೆಲಸವಲ್ಲ. ಅದಕ್ಕೆ ತನ್ನದೇ ಆದ ಕಾನೂನಿನ ಪ್ರಕ್ರಿಯೆಗಳಿವೆ. ಇಷ್ಟಾಗಿಯೂ ತಮ್ಮ ಫೋನ್ ಟ್ರಾಪ್ ಮಾಡಲಾಗುತ್ತಿದೆ ಎಂಬ ದಾಖಲೆಗಳಿದ್ದರೆ ಅದನ್ನು ಕೊಟ್ಟು ದೂರು ನೀಡಿದರೆ ಅಗತ್ಯ ಕ್ರಮ ಜರುಗಿಸಲಾಗುವುದು ಎಂದರು.
ವಕೀಲ ದೇವರಾಜೇ ಗೌಡ ಅವರ ವಿರುದ್ಧದ ಪ್ರಕರಣದ ಬಗ್ಗೆ ಎಸ್ಐಟಿ ನೋಡಿಕೊಳ್ಳಲಿದೆ. ಇದರಲ್ಲಿ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ. ಪಾರದರ್ಶಕವಾಗಿ ತನಿಖೆ ನಡೆಯುತ್ತಿದೆ ಎಂದರು.
ಈ ನಡುವೆ ಪ್ರತಿಕ್ರಿಯೆ ನೀಡಿರುವ ಎಚ್.ಡಿ.ಕುಮಾರಸ್ವಾಮಿ, ಪ್ರಕರಣದ ಕುರಿತು ತನಿಖೆ ಪಾರದರ್ಶಕವಾಗಿ ನಡೆಯುತ್ತಿಲ್ಲ. ಮುಖ್ಯಮಂತ್ರಿಗಳು ಸಾಕ್ಷಿ ಎಲ್ಲಿ ಎಂದು ಪ್ರಶ್ನಿಸುತ್ತಿದ್ದಾರೆ. ಕಣ್ಣೆದುರಿಗೆ ಸಾಕ್ಷಿ ಇದ್ದರೂ ಕೂಡ ಏನು ಮಾಡುತ್ತಿಲ್ಲ ಎಂದರು.
ಪೆನ್ ಡ್ರೈವ್ ಹಂಚಿಕೆ ಬಗ್ಗೆ ಉಪಮುಖ್ಯಮಂತ್ರಿಗಳು ದೂರವಾಣಿಯಲ್ಲಿ ಮಾತನಾಡಿರುವುದು ಗೊತ್ತಿಲ್ಲವೇ ಇದಕ್ಕಿಂತ ಸಾಕ್ಷಿ ಬೇಕೆ ಎಂದು ಪ್ರಶ್ನಿಸಿದ ಅವರು, ತನಿಖೆ ಹೆಸರಲ್ಲಿ ಅಮಾಯಕರನ್ನು ಹಿಂಸಿಸಲಾಗುತ್ತಿದೆ ಎಂದರು.



