ಬೆಂಗಳೂರು: ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿನ 7 ವಿವಿಧ ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ಹೆಚ್ಚಿನ ಅಧಿಕಾರ ನೀಡಲು ತೀರ್ಮಾನಿಸಲಾಗಿದೆ. ಇದಕ್ಕೆ ಸಂಬಂಧಿಸಿದ ಕಾನೂನಿಗೆ ತಿದ್ದುಪಡಿ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ಸಂಪುಟ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್, ಮುಂಬರುವ ವಿಧಾನ ಮಂಡಲದ ಅಧಿವೇಶನದಲ್ಲಿ ಈ ತಿದ್ದುಪಡಿ ಮಸೂದೆಸಗಳನ್ನು ಮಂಡಿಸಲಾಗುವುದು ಎಂದರು.
ಕಾನೂನು ತಿದ್ದುಪಡಿ ಮೂಲಕ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ, ಬಸವಕಲ್ಯಾಣ, ಕಾಗಿನೆಲೆ, ಕೂಡಲಸಂಗಮ, ಬನವಾಸಿ, ಸರ್ವಜ್ಞ, ನಾಡಪ್ರಭು ಕೆಂಪೇಗೌಡ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ 7 ಪ್ರಾಧಿಕಾರಗಳ ಕಾರ್ಯಭಾರ ನಿರ್ವಹಣೆಗೆ ಕಂದಾಯ ಸಚಿವರಿಗೆ ಅಧಿಕಾರ ನೀಡಲಾಗುತ್ತಿದೆ ಎಂದರು.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಯರಗಟ್ಟಿ ಏತನೀರಾವರಿ ಯೋಜನೆಗೆ 25 ಕೋಟಿ ರೂ., ರೇಣುಕಾ ಏತನೀರಾವರಿ ಯೋಜನೆಗೆ 20 ಕೋಟಿ ರೂ.ಗಳನ್ನು ನವೀಕರಣ ಕಾಮಗಾರಿಗೆ ಖರ್ಚು ಮಾಡಲು ಅನುಮತಿಸಲಾಗಿದೆ ಎಂದರು.
ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಸಾಲಗುಂಧ ಗ್ರಾಮದಲ್ಲಿ ತುಂಗಭದ್ರಾ ನದಿಯಿಂದ ನೀರನ್ನು ಎತ್ತಿ ತುಂಗಭದ್ರ ಎಡದಂಡೆ ಕಾಲುವೆಯ ಡಿ 32 ಮತ್ತು ಡಿ 36 ವ್ಯಾಪ್ತಿಯ ಬಾಧಿತ ಅಚ್ಚುಕಟ್ಟು ಪ್ರದೇಶಗಳಿಗೆ 178 ಕೊಟಿ ರೂ. ಅಂದಾಜು ಮೊತ್ತದಲ್ಲಿ ಸಾಲಗುಂದ ಏತನೀರಾವರಿ ಯೋಜನೆ ಕೈಗೆತ್ತಿಕೊಳ್ಳಲು ಅನುಮೋದನೆ ನೀಡಲಾಗಿದೆ ಎಂದರು.
ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಮುಳ್ಳೂರು ಗ್ರಾಮದ ಬಳಿ ಸಿಂಧನೂರು ಹಳ್ಳಕ್ಕೆ ಅಡ್ಡಲಾಗಿ ಬ್ರಿಡ್ಜ್ ಮತ್ತು ಬ್ಯಾರೇಜ್ ನಿರ್ಮಿಸಲು 28 ಕೋಟಿ ರೂ.ಗಳನ್ನು ಒದಗಿಸಲಾಗುತ್ತಿದೆ ಎಂದರು.
ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿಗಾಗಿ ಹಂಚಿಕೆಯಾಗಿರುವ 0.512 ಟಿಎಂಸಿ ನೀರನ್ನು ಸಂಗ್ರಹಣಾ ಸ್ಥಳಕ್ಕೆ ಪೂರೈಸಲು ಅರಸೀಕೆರೆ ತಾಲ್ಲೂಕಿನ 10 ಕೆರೆಗಳಿಗೆ ನೀರು ತುಂಬಿಸುವ 148.80 ಕೋಟಿ ರೂ.ಗಳನ್ನು ಒದಗಿಸಲಾಗುತ್ತಿದೆ ಎಂದರು.
ಖಾಸಗಿ ಬಿಲ್ಡರ್ಸ್ ಗಳು ತಾವು ನಿರ್ಮಿಸುವ ಕಟ್ಟಡಗಳಿಂದ ಶೇ.1 ರಷ್ಟು ಸೆಸ್ ಸಂಗ್ರಹಿಸುವ ಕರ್ನಾಟಕ ಅಗ್ನಿಶಾಮಕ ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಕಾಯಿದೆಯ ವ್ಯಾಪ್ತಿಗೆ ಒಳಪಡುವ ಬಿಲ್ಡರ್ಸ್ ಆಸ್ಪತ್ರೆ, ಎತ್ತರದ ಕಟ್ಟಡಗಳು, ಕೈಗಾರಿಕಾ ನಿರ್ಮಾಣಗಳಿಂದ ಆಸ್ತಿ ತೆರಿಗೆಯೊಂದಿಗೆ ಸೆಸ್ ಸಂಗ್ರಹಿಸಲಾಗುವುದು ಎಂದರು.
ಕರ್ನಾಟಕ ಜಾಗತಿಕ ಸಾಮರ್ಥ್ಯ ಕೇಂದ್ರ ನೀತಿ 2024-2029ಕ್ಕೆ ತಿದ್ದುಪಡಿ ಮಾಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ನೀತಿ ದಾಖಲೆಗಳಲ್ಲಿ ಸ್ಪಷ್ಟತೆ ಹಾಗೂ ನಿಖರತೆ ತರಲು ಈ ತಿದ್ದುಪಡಿ ತರಲಾಗುತ್ತಿದೆ. ಭಾಷೆ ಮತ್ತು ವಿವರಣೆಗೆ ಸೀಮಿತವಾಗಿರುವ ಬದಲಾವಣೆಗಳನ್ನು ಪರಿಷ್ಕರಿಸಿ ನಿಖರತೆ ತರುವ ನೀತಿಗೆ ಒಪ್ಪಿಗೆ ನೀಡಲಾಗಿದೆ ಎಂದರು.
ರಾಯಚೂರಿನ ರಾಜೀವ್ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆವರಣದಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪೆರಿಫರಲ್ ಕ್ಯಾನ್ಸರ್ ಚಿಕಿತ್ಸಾ ಘಟಕ ಸ್ಥಾಪಿಸಲಾಗುತ್ತದೆ. ಇದರಿಂದ ಸುತ್ತಮುತ್ತಲಿನ ಜಿಲ್ಲೆಗಳಿಗೆ ಅನುಕೂಲವಾಗುತ್ತದೆ. 20 ಕೋಟಿ ರೂ.ಗಳಲ್ಲಿ ಸಿವಿಲ್ ಕಾಮಗಾರಿ, 30 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ಸಲಕರಣೆಗಳ ಖರೀದಿ ಮಾಡಲಾಗುವುದು ಎಂದರು.
ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗೆ ಅಗತ್ಯ ಇರುವ ಹೆಚ್ಚುವರಿ ವೈದ್ಯಕೀಯ ಉಪಕರಣ, ಪೀಠೋಪಕರಣಗಳ ಖರೀದಿಗೆ 62 ಕೋಟಿ ರೂ. ವೆಚ್ಚದ ಆಡಳಿತಾತಕ ಅನುಮೋದನೆ ನೀಡಲಾಗಿದೆ ಎಂದರು.
ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ 2025ಕ್ಕೆ ಅನುಮೋದನೆ ನೀಡಲಾಗಿದ್ದು, ಮುಂದಿನ ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸುವುದಾಗಿ ತಿಳಿಸಿದರು.
ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ-2025 ಹಾಗೂ ಕರ್ನಾಟಕ ವೈದ್ಯಕೀಯ ನೋಂದಣಿ ವಿಧೇಯಕ-2025 ಅನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸುವುದಾಗಿ ತಿಳಿಸಿದರು.
ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಗೆ ಅಗತ್ಯವಿರುವ ಔಷಧಗಳು, ಉಪಭೋಗ್ಯ ವಸ್ತುಗಳು ಮತ್ತು ರಾಸಾಯನಿಕಗಳನ್ನು 880 ಕೋಟಿ ರೂ. ವೆಚ್ಚದಲ್ಲಿ ಖರೀದಿಸುವ ಪ್ರಸ್ತಾವನೆಗೆ ಅನುಮೋದನೆ ದೊರೆತಿದೆ ಎಂದರು.
ಕಾಂಗ್ರೆಸ್ ನಾಯಕ ರಾಹುಲ್ಗಾಂಧಿಯವರ ಒತ್ತಾಸೆಯ ಮೇರೆಗೆ ಕರ್ನಾಟಕ ಫ್ಲಾಟ್ಫಾರಂ ಆಧಾರಿತ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ವಿಧೇಯಕಕ್ಕೆ ಅನುಮೋದನೆ ನೀಡಿದೆ ಎಂದರು.


