ಬೆಂಗಳೂರಿನಲ್ಲಿ ಕಳವು ಮಾಡಿ ಪರಾರಿಯಾಗುತ್ತಿದ್ದವರ ಬಂಧನ

12 months ago

ಬೆಂಗಳೂರು: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಿಂದ  ಬೆಂಗಳೂರಿಗೆ ಕಾರಿನಲ್ಲಿ ಬಂದು ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಕಳವು ಮಾಡಿ ಗೋವಾಗೆ ಹೋಗಿ ಮೋಜು ಮಸ್ತಿ ಮಾಡುತ್ತಿದ್ದ ಖದೀಮ ಕಳ್ಳರನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.

ಹಗರಿಬೊಮ್ಮನಹಳ್ಳಿಯಲ್ಲಿ ಕೂಲಿಕೆಲಸ ಮಾಡುತ್ತಿದ್ದ ಶಿವಕುಮಾರ್ ಬಾವಿಮನಿ ಅಲಿಯಾಸ್ ಗಿರೀಶ್ (27)ಟೆಂಪೋ ಚಾಲಕ ಶಿವನಾಗಪ್ಪ(28)ಹಾಗೂ ಅಟೆಂಡರ್ ಸುದರ್ಶನ್(24)ಬಂಧಿತ ಆರೋಪಿಗಳಾಗಿದ್ದಾರೆ.ಇವರಿಂದ 18.10 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಿದ್ದಾರೆ.

ಸ್ನೇಹಿತರಾಗಿದ್ದ ಆರೋಪಿಗಳು ಬೆಂಗಳೂರಿಗೆ ಪ್ರವಾಸಕ್ಕೆಂದು ಬಂದು ಯಲಹಂಕ ಉಪನಗರದ ರಾಮಗೊಂಡನಹಳ್ಳಿ ಮುಖ್ಯರಸ್ತೆಯಲ್ಲಿನ ಬೀಗ ಹಾಕಿದ್ದ ಮನೆಗೆ ಕನ್ನ ಹಾಕಿ 45 ಗ್ರಾಂ ಚಿನ್ನಾಭರಣ ಹಾಗೂ 6 ಲಕ್ಷ ನಗದು ದೋಚಿ ಪರಾರಿಯಾಗಿದ್ದರು.

ಈ ಕುರಿತು ದೂರು ಸ್ವೀಕರಿಸಿದ ಪೊಲೀಸರು  ತನಿಖೆ ನಡೆಸಿ,ಹಗರಿಬೊಮ್ಮನಹಳ್ಳಿ ದುರ್ಗಮ್ಮ ದೇವಸ್ಥಾನದ ಬಳಿ ಇಬ್ಬರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಪ್ರಕರಣದಲ್ಲಿ ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಿದ ಮತ್ತೊರ್ವ ಸ್ನೇಹಿತನ ಬಗ್ಗೆ ಮಾಹಿತಿಯನ್ನು ನೀಡಿದ್ದು ಆತನನ್ನು ಬಂಧಿಸಲಾಗಿದೆ.

ಆರೋಪಿಗಳು ಬೆಂಗಳೂರಿಗೆ ಬಂದು ಕನ್ನ ಹಾಕಿ ಹಗರಿಬೊಮ್ಮನಹಳ್ಳಿಯ ಚಿನ್ನದ ಅಂಗಡಿಯಲ್ಲಿ ಅಡವಿಟ್ಟು ಸ್ನೇಹಿತರ ಜೊತೆ ಗೋವಾಕ್ಕೆ ಹೋಗಿ ಮೋಜು-ಮಸ್ತಿ ಮಾಡಿರುವುದಾಗಿ ಬಾಯ್ಬಿಟ್ಟಿದ್ದಾರೆ.

Leave a Reply