ಬೆಂಗಳೂರು: ದೇಶದ ವಿವಿಧ ಭಾಗಗಳ ಬ್ಯಾಂಕ್ ಖಾತೆಗಳಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೋಟಿ ಕೋಟಿ ಹಣ ಕಳವು ಮಾಡುತ್ತಿದ್ದ ಸೈಬರ್ ವಂಚಕರನ್ನು ಕಾಟನ್ ಸಿಟಿ ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಈ ಕಾರ್ಯಾಚರಣೆ ಮೂಲಕ ಹಲವಾರು ಬ್ಯಾಂಕ್ ವಂಚನೆ ಪ್ರಕರಣ ಭೇದಿಸಿದ ಪೊಲೀಸರು 150 ಕೋಟಿ ರೂಪಾಯಿ ವಂಚನೆಯ ಜಾಲವನ್ನು ಪತ್ತೆಹಚ್ಚಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಸಂಬಂಧ ಹಾಸನ ಜಿಲ್ಲೆಯ ಬೇಲೂರಿನ ಶಾಂತಿನಗರ ನಿವಾಸಿ ಸೈಯದ್ ಅರ್ಫಾತ್ ಪಾಷ ಎಂಬುವನನ್ನು ಬಂಧಿಸಿದ್ದಾರೆ. ಈತನ ಬ್ಯಾಂಕ್ ಖಾತೆಯಲ್ಲಿ 18 ಕೋಟಿ ರೂಪಾಯಿ ಇರುವುದು ಪತ್ತೆಯಾಗಿದೆ.
ಪ್ರಕರಣದ ಮೊದಲ ಆರೋಪಿ ಹೈದರಾಬಾದ್ ಮೂಲದ ಉಬೇದ್ ಹಾಗೂ ಆತನ ಮತ್ತೊಬ್ಬ ಸಹಚರ ತಲೆಮರೆಸಿಕೊಂಡಿದ್ದಾನೆ. ಬಂಧಿತ ಸೈಯ್ಯದ್ ಅರ್ಫಾತ್ ಸಿ.ಸಿ.ಟಿ.ವಿ ಅಳವಡಿಸುವ ಕೆಲಸ ಮಾಡಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ದಾವಣಗೆರೆಯ ನಿಟುವಳ್ಳಿ ನಿವಾಸಿ, ಕಟ್ಟಡ ನಿರ್ಮಾಣ ವಲಯದ ಉದ್ಯಮಿ ಪ್ರಮೋದ್ ಎಚ್.ಎಚ್. ಅವರ ಬ್ಯಾಂಕ್ ಖಾತೆಯಲ್ಲಿದ್ದ 52.60 ಲಕ್ಷ ಹಣವನ್ನು ಆರೋಪಿಗಳು ನೆಟ್ ಬ್ಯಾಂಕಿಂಗ್ ಮೂಲಕ ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದರು. ಖಾತೆಯು ಬ್ಲಾಕ್ ಆಗಿದ್ದನ್ನು ಬ್ಯಾಂಕ್ನಲ್ಲಿ ವಿಚಾರಿಸಿದಾಗ ಆನ್ಲೈನ್ ಮೂಲಕ ವಂಚನೆ ನಡೆದಿರುವುದು ಗೊತ್ತಾಗಿತ್ತು. ಈ ಬಗ್ಗೆ ಪ್ರಮೋದ್ ಅವರು ನೀಡಿದ ದೂರು ಆಧರಿಸಿ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಈ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹಾಸನದ ಸೈಯದ್ ಅರ್ಫಾತ್ ಪಾಷ ಎಂಬುವನನ್ನು ಬಂಧಿಸಿ 150 ಕೋಟಿ ರೂಪಾಯಿ ವಂಚನೆಯ ಜಾಲವನ್ನು ಪತ್ತೆಹಚ್ಚಿದ್ದಾರೆ. ಆರೋಪಿಗಳಾದ ಸೈಯದ್ ಅರ್ಫಾತ್ ಹಾಗೂ ಉಬೇದ್ ವಿರುದ್ಧ ದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ 127 ಪ್ರಕರಣಗಳು ದಾಖಲಾಗಿರುವುದು ತನಿಖೆ ವೇಳೆ ಗೊತ್ತಾಗಿದೆ.
ಜುಲೈ 27 ರಿಂದ ಆಗಸ್ಟ್ 19ರವರೆಗೆ ಆರೋಪಿಗಳು ಬೇರೆಯವರ ಬ್ಯಾಂಕ್ ಖಾತೆಗಳಿಂದ 150 ಕೋಟಿ ಹಣವನ್ನು ತಮ್ಮ ಖಾತೆಗೆ ಆನ್ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚನೆ ಎಸಗಿದ್ದಾರೆ. ಈ ಪೈಕಿ 132 ಕೋಟಿ ಹಣವನ್ನು ವಿತ್ ಡ್ರಾ ಮಾಡಿಕೊಂಡಿದ್ದಾರೆ. ಖಾತೆಯಲ್ಲಿ ಉಳಿದಿದ್ದ 18 ಕೋಟಿ ಹಣವನ್ನು ಪೊಲೀಸರು ಬ್ಯಾಂಕ್ ಮೂಲಕ ಫ್ರೀಜ್ ಮಾಡಿಸಿದ್ದಾರೆ.
18 ಕೋಟಿ ಪೈಕಿ ಕೋರ್ಟ್ ಆದೇಶದಂತೆ ದೂರುದಾರ ಪ್ರಮೋದ್ ಅವರಿಗೆ 52.60 ಲಕ್ಷ ಹಣ ಕೊಡಿಸಲಾಗಿದೆ. ಆರೋಪಿಗಳ ಬಗ್ಗೆ ದೇಶದ ವಿವಿಧ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ. ಉತ್ತರ ಪ್ರದೇಶ, ಜಮ್ಮು ಕಾಶ್ಮೀರ, ಆಂಧ್ರಪ್ರದೇಶ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳ ಸೈಬರ್ ಠಾಣೆಗಳಲ್ಲಿ ಇವರ ವಿರುದ್ಧ ಪ್ರಕರಣಗಳು ದಾಖಲಾಗಿವೆ.




