ವಿಧಾನಪರಿಷತ್ತಿನಲ್ಲಿ ಬಹುಮತದ ಕೊರತೆ ನೀಗಿಸಿಕೊಳ್ಳಲು ಆಡಳಿತರೂಢ ಕಾಂಗ್ರೆಸ್ ತಂತ್ರ

2 years ago

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯಗೊಂಡ ಬೆನ್ನಲ್ಲೇ ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರಗಳಿಂದ ವಿಧಾನ ಪರಿಷತ್ತಿನ ಆರು ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಗೆ ಭರ್ಜರಿ ರಂಗು ಬಂದಿದೆ.

ಆರು ಕ್ಷೇತ್ರಗಳನ್ನು ಗೆಲ್ಲುವ ಮೂಲಕ ವಿಧಾನಪರಿಷತ್ತಿನಲ್ಲಿ ಬಹುಮತದ ಕೊರತೆಯನ್ನು ನೀಗಿಸಿಕೊಳ್ಳಲು ಆಡಳಿತರೂಢ ಕಾಂಗ್ರೆಸ್ ರಣತಂತ್ರ ರೂಪಿಸಿದರೆ, ಪರಿಷತ್ತಿನಲ್ಲಿ ಪ್ರಾಬಲ್ಯ ಉಳಿಸಿಕೊಳ್ಳಲು ಬಿಜೆಪಿ ಜೆಡಿಎಸ್ ಮೈತ್ರಿ ಕೂಟ ವ್ಯೂಹ ಹೆಣೆದಿದೆ.

ಚುನಾವಣೆಯ ಕಾರ್ಯತಂತ್ರ ಕುರಿತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ಹಿರಿಯ ನಾಯಕರು ಮತ್ತು ಪಕ್ಷದ ಅಭ್ಯರ್ಥಿಗಳೊಂದಿಗೆ ಸುಧೀರ್ಘ ಸಮಾಲೋಚನೆ ನಡೆಸಿದರು.

ಲೋಕಸಭೆ ಚುನಾವಣೆ ಎದುರಿಸಿದ ಮಾದರಿಯಲ್ಲಿಯೇ ಈ ಚುನಾವಣೆಯನ್ನು ಎದುರಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಜೆಡಿಎಸ್ ಬಿಜೆಪಿ ಮೈತ್ರಿಕೂಟವನ್ನು ಕಟ್ಟಿ ಹಾಕಬೇಕು ಎಂಬ ತೀರ್ಮಾನಕ್ಕೆ ಬರಲಾಯಿತು.

ಚುನಾವಣೆ ನಡೆಯುತ್ತಿರುವ ಎಲ್ಲ ಕ್ಷೇತ್ರಗಳಿಗೂ ಜಿಲ್ಲೆಗೊಬ್ಬ ಉಸ್ತುವಾರಿ ಮಂತ್ರಿ ಹಾಗೂ ಸಹ ಉಸ್ತುವಾರಿಯಾಗಿ ಪಕ್ಷದ ಹಿರಿಯ ನಾಯಕರನ್ನು ನೇಮಿಸಲು ನಿರ್ಧರಿಸಿದ್ದು ಸಿಎಂ ಮತ್ತು ಡಿಸಿಎಂ ಚುನಾವಣೆಯ ಮೇಲುಸ್ತುವಾರಿ ವಹಿಸಲಿದ್ದಾರೆ.

ಪದವೀಧರರು ಮತ್ತು ಶಿಕ್ಷಕರಿಗೆ ರಾಜ್ಯ ಸರ್ಕಾರ ನೀಡಿರುವ ಕೊಡುಗೆಗಳು ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಮತಯಾಚಿಸಬೇಕು ಎಂಬ ತೀರ್ಮಾನಕ್ಕೆ ಬಂದಿದ್ದು, ಅಭ್ಯರ್ಥಿಗಳು ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದೆ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಪ್ರಚಾರದಲ್ಲಿ ತೊಡಗಬೇಕು ಎಂದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಕಿವಿಮಾತು ಹೇಳಿದ್ದಾರೆ.

ಬಳಿಕ ಅಭ್ಯರ್ಥಿಗಳಾದ ಕೆ ಕೆ ಮಂಜುನಾಥ್ ಕುಮಾರ್, ಮರಿತಿಬ್ಬೇಗೌಡ, ಆಯನೂರು ಮಂಜುನಾಥ್ ಹಾಗೂ ಡಾ. ಚಂದ್ರಶೇಖರ  ಪಾಟೀಲ್ ಅವರಿಗೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಬಿ ಫಾರಂ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ತಾವು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಈ ಮೈತ್ರಿಕೂಟ ಶಾಶ್ವತವಾಗಿ ಮುಂದುವರೆಯಲಿ ಅಥವಾ ಒಂದು ಪಕ್ಷದಲ್ಲಿ ಮತ್ತೊಂದು ಪಕ್ಷ ವಿಲೀನವಾಗಲಿ ಅದು ಅವರಿಗೆ ಬಿಟ್ಟ ವಿಷಯ. ನಾವು ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವ ಕಡೆ ಗಮನ ಹರಿಸುತ್ತೇವೆ ಎಂದರು.

ಮಂತ್ರಿಗಳು ಶಾಸಕರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಂದ ಹಿಡಿದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರವರೆಗೆ ಎಲ್ಲಾ ಹಂತದ ಕಾರ್ಯಕರ್ತರು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವಂತೆ ತಾಕಿತು ಮಾಡಲಾಗಿದೆ ಎಂದರು.

Leave a Reply