ಜಿಲ್ಲಾ ಮಟ್ಟದ 7ನೇ ಜನತಾ ದರ್ಶನ 213 ಅಹವಾಲು ಸ್ವೀಕಾರ
ಧಾರವಾಡ: ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ 7 ನೇ ಜಿಲ್ಲಾ ಮಟ್ಟದ ಜನ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ಮಹಾನಗರ ಹಾಗೂ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಂಘ, ಸಂಸ್ಥೆ ಹಾಗೂ ಸಾರ್ವಜನಿಕರಿಂದ ಸುಮಾರು 213 ಅಹವಾಲುಗಳನ್ನು ಸ್ವೀಕರಿಸಲಾಯಿತು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಸಾರ್ವಜನಿಕರಿಂದ ಅಹವಾಲು, ಮನವಿಗಳನ್ನು ಸ್ವೀಕರಿಸಿ ಮಾತನಾಡಿದ ಸಂತೋಷ ಲಾಡ್, ಸಲ್ಲಿಕೆ ಆಗಿರುವ ಎಲ್ಲ ಅಹವಾಲುಗಳನ್ನು ಕಾಲಮಿತಿಯಲ್ಲಿ ಪರಿಹರಿಸಲು ಕ್ರಮಕೈಗೊಳ್ಳಲಾಗುತ್ತದೆ. ಆದರೆ ಕೆಲವು ಮನವಿಗಳು ಸರಕಾರದ ನೀತಿ, ನಿರೂಪಣೆಗೆ ಒಳಪಡಬೇಕಾಗುತ್ತದೆ. ಮತ್ತು ಕೆಲವು ಕೋರ್ಟ ವ್ಯಾಜ್ಯಗಳಾಗಿರುತ್ತವೆ. ಇವುಗಳಿಗೆ ಹಿಂಬರಹ ನೀಡಿ, ಕಳಿಸಲಾಗುತ್ತದೆ ಎಂದರು.
ಕೆಲವು ಸಾರ್ವಜನಿಕರು ತಮ್ಮ ವಯಕ್ತಿಕ ಸಮಸ್ಯೆ, ಆಸ್ತಿ ಜಗಳ, ಸಂಬಂಧಿಕರ ಕೇಸ್, ಆಂತರಿಕ ಜಗಳ ಹೀಗೆ ವಿವಿಧ ರೀತಿಯ ಸಮಸ್ಯೆಗಳನ್ನು ಸಲ್ಲಿಸುತ್ತಾರೆ. ಇವುಗಳನ್ನು ಸಹ ಸಹಾನುಭೂತಿಯಿಂದ ಪರಿಶೀಲಿಸಿ, ಸಾಧ್ಯವಾದಷ್ಟು ಅವರ ಸಮಸ್ಯೆಗಳ ಪರಿಹಾರ ದೊರಕಿಸಲು ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡಲಾಗುತ್ತಿದೆ ಎಂದರು.
ಜಿಲ್ಲಾ ಮಟ್ಟದಲ್ಲಿ ಜರುಗಿದ ಕಳೆದ ಆರು ಜನತಾ ದರ್ಶನ ಕಾರ್ಯಕ್ರಮಗಳಲ್ಲಿಯೇ ಸುಮಾರು 1242 ಅಹವಾಲುಗಳನ್ನು ಮತ್ತು ಇಂದಿನ 7ನೇ ಸಭೆಯಲ್ಲಿ 213 ಅಹವಾಲುಗಳು ಸೇರಿ ಇಲ್ಲಿವರೆಗೆ ಒಟ್ಟು 1455 ಅರ್ಜಿಗಳನ್ನು ಸೀಕರಿಸಲಾಗಿದೆ. ಇದರಲ್ಲಿ ಇಂದು ಸಲ್ಲಿಕೆ ಆಗಿರುವ ಅರ್ಜಿಗಳನ್ನು ಹೊರತುಪಡಿಸಿ, ಹಿಂದಿನ ಎಲ್ಲ ಅಹವಾಲು, ಅರ್ಜಿಗಳನ್ನು ನಮ್ಮ ಜಿಲ್ಲಾ ಹಂತದಲ್ಲಿ ಇತ್ಯರ್ಥಗೊಳಿಸಿ, ಅರ್ಜಿದಾರರಿಗೆ ಹಿಂಬರಹ ನೀಡಲಾಗಿದೆ ಎಂದು ತಿಳಿಸಿದರು.
ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಸ್ಥಳಗಳಿಂದ ಆಗಮಿಸಿದ ಸಾರ್ವಜನಿಕರು, ಸಂಘ ಸಂಸ್ಥೆ ಪ್ರತಿನಿಧಿಗಳು ತಮ್ಮ ಸಮಸ್ಯೆಗಳ ಬಗ್ಗೆ ಸಹಾಯ ಸೌಲಭ್ಯಗಳ ಬಗ್ಗೆ ವಿವಿಧ ಇಲಾಖೆಗಳಿಗೆ ಅರ್ಜಿಗಳನ್ನು ಸಲ್ಲಿಸಿದರು.
ಪ್ರಮುಖವಾಗಿ ಕಂದಾಯ ಇಲಾಖೆ-62, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ-28, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಇಲಾಖೆ-37, ಕಾರ್ಮಿಕ-12, ಹೆಸ್ಕಾಂ -9, ಹಿಂದುಳಿದ ವರ್ಗಗಳ ಇಲಾಖೆ-9, ಶಾಲಾ ಶಿಕ್ಷಣ ಇಲಾಖೆ-6, ಸಾರಿಗೆ ಇಲಾಖೆ-6, ಗೃಹ ಇಲಾಖೆ-5, ಸಮಾಜ ಕಲ್ಯಾಣ ಇಲಾಖೆ-5, ಆರೋಗ್ಯ ಇಲಾಖೆ-5, ಸಹಕಾರ ಇಲಾಖೆ-4, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ-4, ಲೋಕೋಪಯೋಗಿ ಇಲಾಖೆ-4, ವಸತಿ ಇಲಾಖೆ-4, ಕೃಷಿ ಇಲಾಖೆ-3, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ-3, ಅರಣ್ಯ ಮತ್ತು ಪರಿಸರ ಇಲಾಖೆ-2, ಆಡಳಿತ ಸುಧಾರಣೆ ಇಲಾಖೆ-1, ಕನ್ನಡ ಮತ್ತು ಸಂಸ್ಕøತಿ ಇಲಾಖೆ-1, ಸಣ್ಣ ನೀರಾವರಿ-1, ಅಲ್ಪಸಂಖ್ಯಾತರ ಇಲಾಖೆ-1, ತೋಟಗಾರಿಕೆ-1 ಅಹವಾಲುಗಳು ಸೇರಿದಂತೆ ಒಟ್ಟು 213 ಅಹವಾಲುಗಳನ್ನು ಸಲ್ಲಿಸಿದ್ದಾರೆ.
ಸೆಪ್ಟೆಂಬರ್ 25, 2023 ರಂದು ಸೃಜನಾ ರಂಗ ಮಂದಿರದಲ್ಲಿ ಜರುಗಿದ ಮೊದಲ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 450 ಅರ್ಜಿಗಳನ್ನು ಸ್ವೀಕರಿಸಿ, ಎಲ್ಲವನ್ನು ವಿಲೇವಾರಿ ಮಾಡಲಾಗಿದೆ.
ನವೆಂಬರ್ 6, 2023 ರಂದು ಸೃಜನಾ ರಂಗ ಮಂದಿರದಲ್ಲಿ ಜರುಗಿದ ಎರಡನೇ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 197 ಅರ್ಜಿಗಳನ್ನು ಸ್ವೀಕರಿಸಿ, ವಿಲೇವಾರಿ ಮಾಡಲಾಗಿದೆ. ಡಿಸೆಂಬರ್ 23, 2023 ರಂದು ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜರುಗಿದ ಮೂರನೇಯ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 177 ಅರ್ಜಿಗಳನ್ನು ಸ್ವೀಕರಿಸಿ, ವಿಲೇವಾರಿ ಮಾಡಲಾಗಿದೆ.
ಜನವರಿ 29, 2024ರಂದು ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಜರುಗಿದ ನಾಲ್ಕನೇ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 112 ಅರ್ಜಿಗಳನ್ನು ಸ್ವೀಕರಿಸಿ, ವಿಲೇವಾರಿ ಮಾಡಲಾಗಿದೆ. ಜೂನ್ 26, 2024 ರಂದು ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಜರುಗಿದ ಐದನೆ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 175 ಅರ್ಜಿಗಳನ್ನು ಸ್ವೀಕರಿಸಿ, ವಿಲೇವಾರಿ ಮಾಡಲಾಗಿದೆ. ಸೆಪ್ಟೆಂಬರ್ 10, 2024 ರಂದು ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿ ಜರುಗಿದ ಆರನೇ ಜನತಾದರ್ಶನ ಕಾರ್ಯಕ್ರಮದಲ್ಲಿ ಒಟ್ಟು 131 ಅರ್ಜಿಗಳನ್ನು ಸ್ವೀಕರಿಸಿ, ವಿಲೇವಾರಿ ಮಾಡಲಾಗಿದೆ.
ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜರುಗಿದ ಏಳನೇಯ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 213 ಅರ್ಜಿಗಳನ್ನು ಸ್ವೀಕರಿಸಿದ್ದಾರೆ.
ಜಿಲ್ಲಾಧಿಕಾರಿ ದಿವ್ಯ ಪ್ರಭು, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ, ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ್ ಸಿಇಓ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಡಿಸಿಪಿ ಮಾನಿಂಗ ನಂದಗಾವಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ವೇದಿಕೆಯಲ್ಲಿದ್ದರು.
ಉಪವಿಭಾಗಾಧಿಕಾರಿ ಶಲಂ ಹುಸೇನ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಿ.ಎಸ್.ಮುಗನೂರಮಠ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸಂತೋಷ ಬಿರಾದರ, ಸ್ಮಾರ್ಟ್ ಸಿಟಿ ಎಂಡಿ ರುದ್ರೇಶ ಗಾಳಿ, ಎಲ್ಲ ತಾಲೂಕುಗಳ ತಹಶಿಲ್ದಾರರು, ತಾ.ಪಂ. ಇಓ ಅವರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಜನತಾ ದರ್ಶನ ಕಾರ್ಯಕ್ರಮದಲ್ಲಿ ಇದ್ದರು.




