ಸತೀಶ್ ಜಾರಕಿಹೊಳಿ ನನ್ನ ಆತ್ಮೀಯ ಸ್ನೇಹಿತ: ಡಿ ಕೆ ಶಿವಕುಮಾರ್

5 months ago

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ತಮ್ಮ ಹಿತ ಕಾಯಲಿದೆ ಎಂಬ ವಿಶ್ವಾಸ ತಮಗಿದೆ ರಾಜ್ಯದ ಎಲ್ಲಾ ವಿದ್ಯಮಾನಗಳ ಬಗ್ಗೆ ಅರಿವಿರುವ ಹೈಕಮಾಂಡ್ ನಾಯಕರು ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಅಧಿಕಾರ ಹಂಚಿಕೆ ಕುರಿತಾಗಿ ನಡೆಯುತ್ತಿರುವ ಚಟುವಟಿಕೆಗಳ ನಡುವೆ ಪ್ರತಿಕ್ರಿಯೆ ನೀಡಿರುವ ಅವರು, ದೆಹಲಿಯಲ್ಲಿ ರಾಜ್ಯದ ವಿದ್ಯಮಾನಗಳ ಬಗ್ಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ವಿವರ ನೀಡಲಿದ್ದಾರೆ. ಆನಂತರ ಹೈಕಮಾಂಡ್ ನಮ್ಮ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದ್ದು ದೆಹಲಿಗೆ ಬರುವಂತೆ ಕರೆ ನೀಡಲಿದೆ. ತಾವು ಅದಕ್ಕಾಗಿ ಎದುರು ನೋಡುತ್ತಿದ್ದು, ದೆಹಲಿಗೆ ತೆರಳಿದ ನಂತರ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮಾತುಕತೆ ನಡೆಸಲಾಗುವುದು ಎಂದರು.

ಡಿ ಕೆ ಶಿವಕುಮಾರ್ ಅವರು ಸರ್ಕಾರ ರಚನೆಗೆ ಮುಂದಾದರೆ ಬಿಜೆಪಿ ಬೆಂಬಲ ನೀಡಬೇಕು ಎಂದು ಹೇಳಿರುವ ಮಾಜಿ ಸಿಊ ಸದಾನಂದ ಗೌಡ ಅವರ ಆಹ್ವಾನಕ್ಕೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ನಮಗೆ ಅಂತಹ ಸ್ಥಿತಿ ಬರುವುದಿಲ್ಲ. ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ಒಗ್ಗಟ್ಟಾಗಿದ್ದು ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧರಾಗಿದ್ದೇವೆ ಎಂದರು.

ಅಧಿಕಾರ ಹಂಚಿಕೆಯ ವಿಚಾರವಾಗಿ ತಾವು ಏನನ್ನು ಹೇಳುವುದಿಲ್ಲ. ನನ್ನ ಹಿತ ಕಾಯಲಿದೆ ಎಂಬ ವಿಶ್ವಾಸ ತಮಗಿದೆ. ಹೀಗಾಗಿ ಮುಂಬರುವ ವಿಧಾನಸಭೆ ಚುನಾವಣೆಯ ಕಡೆ ಗಮನ ಹರಿಸಿದ್ದೇನೆ ಎಂದರು.

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನನ್ನ ಆತ್ಮೀಯ ಸ್ನೇಹಿತ. ಈ ಹಿಂದೆ ಪಕ್ಷದ ಕಾರ್ಯಾಧ್ಯಕ್ಷರಾಗಿ ಒಟ್ಟಿಗೆ ಕೆಲಸ ಮಾಡಿದ್ದೇವೆ. ಅವರನ್ನು ಭೇಟಿ ಮಾಡಿ ಸರ್ಕಾರ ಮತ್ತು ಪಕ್ಷ ಸಂಘಟನೆಯ ಹಲವಾರು ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು ಹಾಗೂ 2029 ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗಬೇಕು. ಈ ನಿಟ್ಟಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡಲು ತೀರ್ಮಾನಿಸಿದ್ದೇವೆ ಎಂದರು.

ನಮ್ಮಲ್ಲಿ ಆ ಬಣ ಈ ಬಣ ಎಂಬುದು ಇಲ್ಲ ನಾವು ಎಲ್ಲಾ ಕಾಂಗ್ರೆಸ್ ಬಣದವರು. ಪಕ್ಷದ ಎಲ್ಲಾ ಶಾಸಕರು ಒಗ್ಗಟ್ಟಾಗಿದ್ದೇವೆ ಬಿಜೆಪಿ ಮತ್ತು ಜೆಡಿಎಸ್ ನಮ್ಮ ಒಗ್ಗಟ್ಟು ಹೊಡೆಯಲು ಸಾಕಷ್ಟು ಪ್ರಯತ್ನ ನಡೆಸಿದೆ ಆದರೆ ಆ ಪ್ರಯತ್ನಗಳು ಯಾವುದೇ ಕಾರಣಕ್ಕೂ ಯಶಸ್ಸು ಕಾಣುವುದಿಲ್ಲ ಎಂದರು.

Leave a Reply