ಬೆಂಗಳೂರು: ಕಿತ್ತೂರು ಕರ್ನಾಟಕದ ಹಲವು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಮಹದಾಯಿ ಯೋಜನೆ ಜಾರಿಗೆ ಇರುವ ಅಡೆತಡೆಗಳನ್ನು ನಿವಾರಿಸಿ ಕಾಮಗಾರಿ ಆರಂಭಿಸಲು ಅನುಮತಿ ದೊರಕಿಸಿಕೊಡಲು ಪ್ರಯತ್ನಿಸುವಂತೆ ಸಿಎಂ ಸಿದ್ದರಾಮಯ್ಯ ರಾಜ್ಯದ ಕೇಂದ್ರ ಸಚಿವರು ಮತ್ತು ನೂತನ ಸಂಸದರಿಗೆ ಮನವಿ ಮಾಡಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಅನುದಾನ ಬಿಡುಗಡೆ ಸೇರಿದಂತೆ ರಾಜ್ಯದ ಹಲವು ಯೋಜನೆಗಳಿಗೆ ಕೇಂದ್ರದ ನೆರವು ದೊರಕಿಸಿ ಕೊಡುವ ನಿಟ್ಟಿನಲ್ಲಿ ಮಾಡಬೇಕಾಗಿರುವ ಕೆಲಸಗಳ ಕುರಿತು ರಾಜ್ಯದ ಸಂಸದರು ಮತ್ತು ಕೇಂದ್ರ ಸಚಿವರೊಂದಿಗೆ ಸಮಾಲೋಚನೆ ನಡೆಸಿದ ಅವರು ಈ ಕುರಿತ ಬೇಡಿಕೆಗಳ ಪಟ್ಟಿಯನ್ನು ಅವರಿಗೆ ಹಸ್ತಾಂತರಿಸಿದರು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮಹದಾಯಿ ಕುಡಿಯುವ ನೀರಿನ ಯೋಜನೆ 2018ರಲ್ಲಿ ಇತ್ಯರ್ಥವಾಗಿದೆ. ನ್ಯಾಯಾಲಯದಲ್ಲಿ ಪ್ರಕರಣ ಇದೆ. ನಿನ್ನೆ ಸಭೆಗೂ ಮುನ್ನ ಕೇಂದ್ರ ಸಚಿವರು ನೀಡಿರುವ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ. ಅದು ತಪ್ಪು ಮಾಹಿತಿ ಎಂದರು.
ವಿವಾದ ಕುರಿತು ನ್ಯಾಯಾಧೀಕರಣದ ತೀರ್ಪು ನೀಡಿದೆ, ಅದು ಅಧಿಸೂಚನೆಯೂ ಆಗಿದೆ. ಅದರ ಆಧಾರದ ಮೇಲೆ ನಾವು ಮಹದಾಯಿ ಯೋಜನೆಗೆ ವಿಸ್ತ್ರ ಯೋಜನಾ ವರದಿ ಸಿದ್ದಪಡಿಸಿ, ಟೆಂಡರ್ ಕರೆದಿದ್ದೇವೆ. ಅದಕ್ಕೆ ಅರಣ್ಯ ಮತ್ತು ಪರಿಸರ ಇಲಾಖೆಯ ಅನುಮತಿ ಮಾತ್ರ ಬಾಕಿ ಇದೆ. ಅದಕ್ಕೆ ನ್ಯಾಯಾಲಯದಲ್ಲಿ ಪ್ರಕರಣ ಇದೆ ಎಂದು ನೆಪ ಹೇಳಬೇಡಿ. ಕೇಂದ್ರದಿಂದ ಅನುಮತಿ ಕೊಡಿಸಿ ಎಂದು ಕೇಂದ್ರ ಸಚಿವರು ಹಾಗೂ ಸಂಸದರದಲ್ಲಿ ಮನವಿ ಮಾಡಿದ್ದೇವೆ ಎಂದರು.
ಭದ್ರಾ ಮೇಲ್ಡಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿದ್ದು, 5300 ಕೋಟಿ ನೀಡುವುದಾಗಿ 2023-24ರ ಆರ್ಥಿಕ ವರ್ಷದಲ್ಲಿ ಘೋಷಣೆ ಮಾಡಿದ್ದರು. ಹಣ ಬಿಡುಗಡೆಯಾಗಿಲ್ಲ. ರಾಜ್ಯದಿಂದ ತಾಂತ್ರಿಕ ಸಮಸ್ಯೆ ಇದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಆ ರೀತಿ ಸಮಸ್ಯೆ ಇದೆ ಎಂದು ಈವರೆಗೂ ನಮಗೆ ಹೇಳಿರಲಿಲ್ಲ ಎಂದರು.
ಅಸಲಿಗೆ ಯಾವುದೇ ಸಮಸ್ಯೆಯೂ ಇಲ್ಲ. ಹಣ ಬಿಡುಗಡೆ ಮಾಡುವಂತೆ ನಾವು ಪತ್ರ ಬರೆದಿದ್ದೇವೆ. ಹಣ ಸಿಗಲಿದೆ ಎಂಬ ಆಶಾಭಾವನೆ ಇದೆ. ಅದೇ ರೀತಿಕೃಷ್ಣ ನ್ಯಾಯಾಧೀಕರಣ ತೀರ್ಪಿನ ಅಧಿಸೂಚನೆಗೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಲು ಆಗ್ರಹಿಸಿದ್ದೇವೆ ಎಂದರು.
ಕಾವೇರಿ ನದಿ ನೀರಿನ ವಿವಾದ ಈಗಾಗಲೇ ನ್ಯಾಯಾಧಿಕರಣದಲ್ಲಿ ಇತ್ಯರ್ಥವಾಗಿದೆ. ತೀರ್ಪಿನಂತೆ ತಮಿಳುನಾಡಿಗೆ ಸಾಮಾನ್ಯ ವರ್ಷದಲ್ಲಿ 179 ಟಿಎಂಸಿ ನೀರು ಹರಿಸಲು ಕರ್ನಾಟಕ ಒಪ್ಪಿಕೊಂಡಿದೆ. ಹೆಚ್ಚುವರಿ ನೀರಿನ ಸಂಗ್ರಹಕ್ಕೆ ನಮ ನೆಲದಲ್ಲಿ ನಮ್ಮ ಹಣದಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟಲು ನಾವು ಯೋಜನೆ ರೂಪಿಸಿದ್ದೇವೆ. ತಮಿಳುನಾಡು ರಾಜಕೀಯ ಕಾರಣಕ್ಕೆ ತಕರಾರು ತೆಗೆದು ಸುಪ್ರೀಕೋರ್ಟ್ ಮೊರೆ ಹೋಗಿದೆ. ಆದರೂ ಯಾವ ನ್ಯಾಯಾಲಯದಲ್ಲೂ ತಡೆಯಾಜ್ಞೆ ಇಲ್ಲ. ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಕಿದೆ ಎಂದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪತ್ರ ಬರೆದು ಕರ್ನಾಟಕದಲ್ಲಿ ವಿತ್ತೀಯ ಕೊರತೆ ಹೆಚ್ಚಾಗಿದೆ ಎಂದು ಹೇಳಿರುವುದರ ಹಿಂದೆ ರಾಜಕೀಯ ಅಡಗಿದೆ. ವಿತ್ತೀಯ ಶೇ.2.1ರಿಂದ ಶೇ.3ಕ್ಕೆ ಹೋಗಿದೆ ಎಂಬುದು ತಪ್ಪು ಮಾಹಿತಿ. ವಿತ್ತೀಯ ಜವಾಬ್ದಾರಿ ಶೇ.3ರಷ್ಟಿರಬೇಕು ಎಂಬ ನಿಯಮ ಇದೆ. ರಾಜ್ಯದಲ್ಲಿ ವಿತ್ತೀಯ ಕೊರತೆ ಶೇ.2.6ರಷ್ಟಿದ್ದು, ಕಾನೂನು ರೀತಿ ಮಿತಿಯಲ್ಲಿದೆ. ಕೇಂದ್ರ ಸರ್ಕಾರ ವಿತ್ತೀಯ ಕೊರತೆ ನಿರ್ವಹಣೆಯಲ್ಲಿ ಕಾನೂನಿನ ಪ್ರಕಾರ ನಡೆದುಕೊಳ್ಳುತ್ತಿದೆಯೇ ಎಂದು ಪ್ರಶ್ನಿಸಿದರು.




