ಬೆಂಗಳೂರು: ಈ ಬಾರಿ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಮಳೆ ಬಂದಾಗ ಸಮಸ್ಯೆ ತಲೆದೋರಬಹುದಾದ ಕೆಲವು ಪ್ರಮುಖ ಸ್ಥಳಗಳು, ಮೆಟ್ರೋ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಯಿಂದ ಸಂಚಾರ ದಟ್ಟಣೆ ಉಂಟಾಗಬಹುದಾದ ಪ್ರದೇಶಗಳಿಗೆ ಭೇಟಿನೀಡಿ, ಸಮಸ್ಯೆ ಬಗೆಹರಿಸುವ ಸಂಬಂಧ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ, ಸೂಚನೆ, ಆದೇಶವನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಜೂನ್ ತಿಂಗಳಿನಿಂದ ಮುಂಗಾರು ಪ್ರಾರಂಭವಾಗಲಿದೆ. ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಿ ಪ್ರವಾಹ ಉಂಟಾಗಿದೆ ಎಂದು ವರದಿಯಾಗಿರುವ ಹಿನ್ನೆಲೆಯಲ್ಲಿ ಸಿಟಿ ರೌಂಡ್ಸ್ ನಡೆಸಿ ಅಧಿಕಾರಿಗಳಿಗೆ ಕೆಲವು ಸೂಚನೆ ನೀಡಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರೂ ಯಲಹಂಕಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ 20 ಮನೆಗಳಿಗೆ ನೀರು ನುಗ್ಗಿದೆ ಎಂದು ವರದಿಯಾಗಿತ್ತು. ಯಲಹಂಕ ಕೆರೆಗೆ ನೀರು ಹೋಗುವಂತೆ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳು ಬಿಬಿಎಂಪಿ ಗೆ ಅವಕಾಶ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಬಳಿ ನೀರು ಹರಿಯುವ ಕಾಲುವೆಯಲ್ಲಿ ಹೂಳು ತುಂಬಿತ್ತು. ಜಾಸ್ತಿ ಮಳೆ ಸುರಿದಾಗ ಕಾಲುವೆಯಿಂದ ನೀರು ಉಕ್ಕಿ ಮೇಲಕ್ಕೆ ಬರುತ್ತಿತ್ತು. ಪರ್ಯಾಯವಾಗಿ ಇನ್ನೊಂದು ಮೋರಿ ನಿರ್ಮಿಸಲು ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ 860 ಕಿ.ಮೀ ರಾಜಕಾಲುವೆ ಇದೆ. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 491 ಕಿ.ಮೀ ರಾಜಕಾಲುವೆಯನ್ನು ತೆರವು ಮಾಡಲಾಗಿತ್ತು ಎಂದರು.
ಹಿಂದಿನ ಸರ್ಕಾರ ಜನವರಿ 2023 ರಲ್ಲಿ 193 ಕಿ.ಮೀ ತೆರವು ಮಾಡಲು ಕ್ರಮ ತೆಗೆದುಕೊಂಡಿತ್ತು. ಅಧಿಕಾರಕ್ಕೆ ಬಂದ ತಕ್ಷಣವೇ ಈ ಕೆಲಸ ಮಾಡಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. 1,800 ಕೋಟಿ ರೂ. ಇದಕ್ಕೆ ವೆಚ್ಚವಾಗುತ್ತಿದೆ. 174 ಕಿಮೀ ಉಳಿದಿದೆ. ವಿಶ್ವ ಬ್ಯಾಂಕ್ ಸುಮಾರು 2,000 ಕೋಟಿ ರೂಪಾಯಿ ನೀಡಲಿದೆ. 12.15 ಕಿ.ಮೀ ಉದ್ದದ ರಾಜಕಾಲುವೆಗೆ ಸಂಬಂಧಿಸಿದ 12 ಪ್ರಕರಣಗಳು ಸಿವಿಲ್ ನ್ಯಾಯಾಲಯದಲ್ಲಿವೆ. ಸರ್ಕಾರದ ಪರ ವಕೀಲರು ಇದಕ್ಕೆ ಹಾಜರಾಗುತ್ತಿದ್ದು, ಅಗತ್ಯ ಬಿದ್ದರೆ ವಿಶೇಷ ವಕೀಲರನ್ನು ನೇಮಿಸಿ ಪ್ರಕರಣ ಶೀಘ್ರ ಇತ್ಯರ್ಥ ಗೊಳಿಸಲಾಗುವುದು ಎಂದರು.
ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ವಿಳಂಬವಾಗಿರುವ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು, ಚರಂಡಿಗಳು – ಕಾಲುವೆಗಳ ಹೂಳೆತ್ತಬೇಕು, ಒಣಗಿರುವ ಮರದ ಕೊಂಬೆಗಳನ್ನು ಕತ್ತರಿಸಲು ಸೂಚನೆ ನೀಡಲಾಗಿದೆ. ಪಾದಚಾರಿ ಮಾರ್ಗಗಳನ್ನು ಸರಿಪಡಿಸಬೇಕು. ರಾಜಕಾಲುವೆಗೆ ಕಸ ಹಾಕುವುದನ್ನು ತಡೆಗಟ್ಟಲು ಸೂಚನೆ ನೀಡಲಾಗಿದೆ. ಮುಂಗಾರು ಪ್ರಾರಂಭವಾಗುವ ಮುಂಚಿತವಾಗಿ ರಾಜಕಾಲುವೆಗಳ ಹೂಳು ತೆಗೆಯಬೇಕು ಎಂದು ಹೇಳಿದ್ದಾರೆ.
ಬೆಂಗಳೂರು ನಗರದಲ್ಲಿ ವಾರ್ಡ್ ರಸ್ತೆಗಳಲ್ಲಿ 5,500 ಗುಂಡಿಗಳು ಬಿದ್ದಿದ್ದು, ಅವುಗಳನ್ನು ಮುಚ್ಚಬೇಕು, ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಲ್ಲಿ 557 ಗುಂಡಿಗಳಿವೆ. ಈ ತಿಂಗಳಲ್ಲಿ ಎಲ್ಲಾ ಗುಂಡಿಗಳನ್ನು ಮುಚ್ಚಬೇಕು ಎಂದು ಸೂಚಿಸಿದ್ದಾರೆ.
ಸಿಲ್ಕ್ ಬೋರ್ಡ್ ಬಳಿ ಬಿಎಂಆರ್ಸಿಎಲ್ ನವರು ನಿರ್ಮಿಸಿರುವ ರಸ್ತೆಯನ್ನು ಅಗಲೀಕರಿಸಲು ಸೂಚನೆ ನೀಡಲಾಗಿದೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮಡಿವಾಳ ಕೆರೆಯ ಬಳಿ ಇನ್ನೊಂದು ಚರಂಡಿ ನಿರ್ಮಿಸಲು ಸೂಚಿಸಿದ್ದಾರೆ.
ಈಜಿಪುರದಲ್ಲಿ ಬಿಬಿಎಂಪಿ ವತಿಯಿಂದ ಮೇಲ್ಸೇತುವೆ ನಿರ್ಮಾಣ ನೆನೆಗುದಿಗೆ ಬಿದ್ದಿದ್ದು, ಗುತ್ತಿಗೆದಾರರು ವಿಳಂಬ ಮಾಡುತ್ತಿದ್ದಾರೆ. ಇವರ ಗುತ್ತಿಗೆ ರದ್ದು ಮಾಡಿ ಹೊಸಬರಿಗೆ ಕೊಡಲು ಸೂಚನೆ ನೀಡಿದ್ದಾರೆ.
ಮುಂಗಾರು ಮಳೆಗೂ ಮುನ್ನ ಪ್ರವಾಹ ಉಂಟಾಗಬಾರದೆಂಬ ಕಾರಣಕ್ಕೆ ಚುನಾವಣಾ ಆಯೋಗದಿಂದ ಅನುಮತಿ ಪಡೆದು 7-8 ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ರಸ್ತೆ ಹಾಗೂ ಗುಂಡಿಗಳನ್ನು ನಿರ್ವಹಿಸಲು ಒಂದು ಶಾಶ್ವತ ನಿರ್ವಹಣಾ ವ್ಯವಸ್ಥೆ ರೂಪಿಸಲು ಸೂಚನೆ ನೀಡಿದ್ದು, ಗುಂಡಿಗಳು ಬಿದ್ದ ಕೂಡಲೇ ದುರಸ್ತಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಬಿಡಿಎ ನಲ್ಲಿಯೂ ಈ ರೀತಿ ವ್ಯವಸ್ಥೆ ರೂಪಿಸಲು ಸೂಚಿಸಿದ್ದಾರೆ.
ಮಳೆಗಾಲ ನಿರ್ವಹಣೆಗೆ ಎಲ್ಲಾ ರೀತಿಯಲ್ಲಿಯೂ ಸಜ್ಜಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಮಳೆ ಬಂದಾಗ ನೀರು ನುಗ್ಗಿದರೆ ಇಂಜಿನಿಯರ್ ಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ರಾಜಕಾಲುವೆ ಒತ್ತುವರಿಯಾಗಿದ್ದರೆ ಎಷ್ಟೇ ಪ್ರಭಾವಿಗಳಾಗಿದ್ದರೂ ಯಾವುದೇ ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸಲು ಸೂಚಿಸಿದ್ದು, ಬೆಂಗಳೂರಿನಲ್ಲಿ 400 ಕೆರೆಗಳಿದ್ದವು. ಅನೇಕ ಕೆರೆಗಳು ಹೂಳಿನಿಂದ ತುಂಬಿವೆ ಹಾಗೂ ಕೆಲವು ಒತ್ತುವರಿಯಾಗಿವೆ. ಒತ್ತುವರಿ ತೆರವು ಮಾಡಿ ನೀರು ಹರಿಯಲು ಕಾಲುವೆ ನಿರ್ಮಾಣ ಮಾಡಲು ಸೂಚಿಸಿದರು.
ಜೂನ್ ಗೆ ಮುಂಚೆಯೇ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಪ್ರವಾಹ ಸಂಬಂಧಿ ಸ್ಥಳಗಳನ್ನು ಮಾತ್ರ ಪರಿಶೀಲಿಸಲು ಚುನಾವಣಾ ಆಯೋಗ ಅನುಮತಿ ನೀಡಿತ್ತು, ಅದರಂತೆ ಇಂದು ಭೇಟಿನೀಡಿ ಪರಿಶೀಲನೆ ನಡೆಸಿದರು.




