ಬೆಂಗಳೂರು: ಎನ್.ಡಿ.ಆರ್.ಎಫ್ ನಿಯಮಗಳನ್ನು ಕೂಡಲೇ ತಿದ್ದುಪಡಿ ಮಾಡಿ ಪ್ರಕೃತಿ ವಿಕೋಪದಿಂದ ಆಗಿರುವ ಹಾನಿಗೆ ಸಮರ್ಪಕವಾದ ಪರಿಹಾರ ನೀಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯಿಸಿರುವ ಸಿದ್ದರಾಮಯ್ಯ, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಪರಿಹಾರವನ್ನು ಕೇಂದ್ರ ಸರ್ಕಾರ ರಾಜ್ಯಗಳಿಗೆ ಬಿಡುಗಡೆ ಮಾಡುತ್ತದೆ. ಪ್ರತಿ 5 ವರ್ಷಗಳಿಗೆ ಒಮ್ಮೆ ಎನ್ಡಿಆರ್ಎಫ್ ನಿಯಮಗಳನ್ನು ತಿದ್ದುಪಡಿ ಮಾಡಿ, ರೈತರ ಬೆಳೆಗಳಿಗೆ ಇನ್ಫುಟ್ ಸಬ್ಸಿಡಿಯ ಮೊತ್ತ, ಮೀನುಗಾರರ ದೋಣಿಗಳಿಗೆ ಆದ ಹಾನಿ, ಜನ ಜಾನುವಾರಿಗಳಿಗೆ ಉಂಟಾದ ತೊಂದರೆ, ಮನೆ ಹಾನಿ, ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಆದ ನಷ್ಟಗಳಿಗೆ ನೀಡುವ ಪರಿಹಾರದ ಮೊತ್ತವನ್ನು ಪರಿಷ್ಕರಿಸಲಾಗುತ್ತದೆ. ಆದರೆ 2015-20ಕ್ಕೆ ಅನ್ವಯವಾಗುವಂತೆ ರೂಪಿಸಿದ ನಿಯಮಗಳನ್ನು 2015 ರಲ್ಲಿ ಪರಿಷ್ಕರಿಸಲಾಗಿತ್ತು. ಸಹಜವಾಗಿ ಇದು 2020ರಲ್ಲಿ ಮತ್ತೆ ಪರಿಷ್ಕರಿಸಬೇಕಾಗಿತ್ತು. ಇದುವರೆಗೂ ಪರಿಷ್ಕರಣೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಎಲ್ಲ ಉತ್ಪನ್ನಗಳ ಬೆಲೆ ದುಪ್ಪಟ್ಟಾಗಿವೆ. ಹಣದುಬ್ಬರ ದಾಖಲೆ ಮಟ್ಟಕ್ಕೆ ತಲುಪಿದೆ. ಇಷ್ಟಾದರೂ ಕೇಂದ್ರ ಸರ್ಕಾರ ಎನ್ಡಿಆರ್ಎಫ್ ನಿಯಮಗಳನ್ನು ಪರಿಷ್ಕರಿಸಿಲ್ಲ. ಪ್ರಸ್ತುತ ಒಂದು ಎಕರೆ ಮಳೆಯಾಶ್ರಿತ ಪ್ರದೇಶದಲ್ಲಿ ರೈತರು ಬೆಳೆದ ಬೆಳೆ ಶೇ.33ಕ್ಕಿಂತ ಹೆಚ್ಚು ಹಾನಿಯಾದರೆ ಸಿಗುವ ಪರಿಹಾರ ಕೇವಲ 2,720 ರೂಪಾಯಿ ಮಾತ್ರ. ಅದರಲ್ಲೂ ಗರಿಷ್ಠ 2.5 ಹೆಕ್ಟೇರ್ಗೆ 6,800 ರೂಪಾಯಿ ಮಾತ್ರ. ಪ್ರತಿ ಗುಂಟೆ ಗೆ ಕೇವಲ 68 ರೂಪಾಯಿ ಸಿಗುತ್ತದೆ. ಆದರೆ ಒಂದು ಎಕರೆ ರಾಗಿ, ಜೋಳ ಬೆಳೆಯಲು ಕನಿಷ್ಠ 25,000 ರೂಪಾಯಿ ಖರ್ಚು ತಗಲುತ್ತದೆ. ಈ ಮೊತ್ತ ಪರಿಷ್ಕರಣೆಯಾಗಲೇಬೇಕಾಗಿದೆ. ನಾನು ವಿಧಾನಸಭೆಯ ಅಧಿವೇಶನಗಳಲ್ಲಿ ಕನಿಷ್ಠ 25,000 ರೂಪಾಯಿ ಕೊಡಿ ಎಂದು ಒತ್ತಾಯಿಸಿದ್ದೆ ಎಂದು ನೆನಪಿಸಿದ್ದಾರೆ.
ಕೇಂದ್ರ ಸರ್ಕಾರ ಈ ಮೊತ್ತವನ್ನು ಪರಿಷ್ಕರಣೆ ಮಾಡದ ಕಾರಣದಿಂದ ಕಳೆದ 2 ವರ್ಷಗಳಿಂದ ರೈತರಿಗೆ ವಿಪರೀತ ಹಾನಿಯಾಗಿದೆ. ರಾಜ್ಯದಲ್ಲಿ ಕಳೆದ 3 ವರ್ಷಗಳಿಂದ ಸಂಭವಿಸಿರುವ ನಷ್ಟದ ಪ್ರಮಾಣ ಒಂದು ಅಂದಾಜಿನ ಪ್ರಕಾರ 2 ಲಕ್ಷ ಕೋಟಿ ರೂ.ಗಳಷ್ಟಾಗಬಹುದು. ಆದರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಮೊತ್ತ ಕೇವಲ 3,965 ಕೋಟಿ ರೂಪಾಯಿ ಮಾತ್ರ ಎಂದು ವಿವರಿಸಿದ್ದಾರೆ.
ರಾಜ್ಯದಲ್ಲಿ ಮೇ ತಿಂಗಳಿಂದ ನವೆಂಬರ್ ರವರೆಗೆ ಸಂಭವಿಸಿದ ಪ್ರವಾಹದ ಹಾನಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಾರ್ಚ್-2022 ರಲ್ಲಿ ಕೇವಲ 492 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಇದು ನರೇಂದ್ರ ಮೋದಿ ಅವರ ಸರ್ಕಾರದ ವೇಗ ಮತ್ತು ರೈತ ಪರ ಕಾಳಜಿ ಎಂದು ನಾವು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದಿದ್ದಾರೆ.
ಜನರು ಮತ್ತು ವಿರೋಧ ಪಕ್ಷಗಳು ಪರಿಹಾರಕ್ಕಾಗಿ ಒತ್ತಡಗಳನ್ನು ತಂದಾಗ ರಾಜ್ಯ ಸರ್ಕಾರ 2,391 ಕೋಟಿ ರೂಪಾಯಿಗಳಷ್ಟು ಪರಿಹಾರವನ್ನು ರೈತರಿಗೆ ನೀಡಿತು. ಕೇಂದ್ರ ಸರ್ಕಾರ ನೀಡಬೇಕಾದ ಪರಿಹಾರದ ಮೊತ್ತವನ್ನು ರಾಜ್ಯ ಸರ್ಕಾರ ನೀಡಬೇಕಾಯಿತು. ಆ ಮೂಲಕ ಕೇಂದ್ರವು ರಾಜ್ಯವನ್ನು ಇನ್ನಷ್ಟು ಶೋಷಣೆ ಮಾಡಿತು. ಕಳೆದ 3 ವರ್ಷಗಳಿಂದ ರಾಜ್ಯ ಸರ್ಕಾರ 3,890 ಕೋಟಿ ರೂಗಳನ್ನು ರೈತರಿಗೆ, ವಸತಿ ಹಾನಿಯಾದವರಿಗೆ ನೀಡಿದೆ. ಇದಿಷ್ಟೂ ಸೇರಿದಂತೆ ಹೆಚ್ಚುವರಿ ಹಣವನ್ನು ಕೇಂದ್ರ ಸರ್ಕಾರ ನೀಡಬೇಕಾಗಿತ್ತು. ಯಾಕೆಂದರೆ ಪರಿಹಾರ ನೀಡುವುದಕ್ಕೋಸ್ಕರವೆ ಕೇಂದ್ರದ ಬಜೆಟ್ನಲ್ಲಿ ಹಣ ಮೀಸಲಿರಿಸಲಾಗುತ್ತದೆ. ಆದರೆ ಕರ್ನಾಟಕಕ್ಕೆ ಕೊಡಬೇಕಾದಷ್ಟು ಪರಿಹಾರವನ್ನು ನೀಡದೆ ಅನ್ಯಾಯ ಮಾಡಿದೆ ಎಂದಿದ್ದಾರೆ.
ಆದ್ದರಿಂದ ನಾನು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದೇನೆಂದರೆ, ಮೊದಲು ಎನ್ಡಿಆರ್ಎಫ್ ನಿಯಮಗಳಿಗೆ 2020 ರಿಂದಲೆ ಪೂರ್ವಾನ್ವಯವಾಗುವಂತೆ ತಿದ್ದುಪಡಿ ಮಾಡಿ ಬಾಕಿ ಪರಿಹಾರವನ್ನು ಬಿಡುಗಡೆ ಮಾಡಬೇಕು. ರೈತರಿಗೆ ನಷ್ಟವಾದ ಅಷ್ಟೂ ಹಣವನ್ನು ನಷ್ಟವಾದ ಅಷ್ಟೂ ಎಕರೆಗೆ ಪರಿಹಾರ ನೀಡುವ ಹಾಗೆ ತಿದ್ದುಪಡಿ ತರಬೇಕು. ಮನೆ ಕಳೆದುಕೊಂಡವರಿಗೆ, ಮೀನುಗಾರರಿಗೆ ಹಾಗೂ ಇತರೆ ಎಲ್ಲ ಬಾಧಿತರಿಗೆ ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ಪರಿಹಾರ ನೀಡುವಂತಾಗಬೇಕು ಎಂದಿದ್ದಾರೆ.
ಜೊತೆಗೆ, ಹವಾಮಾನ ವೈಪರೀತ್ಯವು ರೈತರನ್ನು ತೀವ್ರವಾಗಿ ಬಾಧಿಸುವ ಸಂಗತಿಯಾದ ಕಾರಣ ಮುಂದಿನ ದಿನಗಳಲ್ಲಿ ಈ ಸಮಸ್ಯೆ ಇನ್ನೂ ಹೆಚ್ಚಾಗುತ್ತದೆ, ರೈತರು ಇನ್ನಷ್ಟು ಹೆಚ್ಚು ಸಂಕಷ್ಟಕ್ಕೆ ಸಿಲುಕುತ್ತಾರೆ ಎಂದು ವಿಜ್ಞಾನಿಗಳು ತಜ್ಞರು ರಾಜ್ಯ ಸರ್ಕಾರಕ್ಕೆ ಹಿಂದಿನ ವರ್ಷ ವರದಿ ನೀಡಿದ್ದಾರೆ. ಸದರಿ ವರದಿಯನ್ನು ಆಧರಿಸಿ ಸರ್ಕಾರ ಸಮಗ್ರವಾದ ಯೋಜನೆಯನ್ನು ರೂಪಿಸಿ ಅನುಷ್ಠಾನಗೊಳಿಸಬೇಕಾಗಿತ್ತು. ಆದರೆ ಭ್ರಷ್ಟಾಚಾರದ ಕೂಪದಲ್ಲಿ ಮುಳುಗೇಳುತ್ತಿರುವ ಸರ್ಕಾರಕ್ಕೆ ಇದನ್ನೆಲ್ಲ ಮಾಡಲು ಪುರುಸೊತ್ತು ಇಲ್ಲವಾಗಿದೆ ಎಂದಿದ್ದಾರೆ.
ಪ್ರವಾಹ, ಬರ ಬಂದು ಜನರು ಸಂಕಷ್ಟದಲ್ಲಿದ್ದಾಗಲೂ ಸರ್ಕಾರ ನಿದ್ರೆಯಲ್ಲಿದ್ದಂತೆ ನಟಿಸಿಕೊಂಡು ಕಾಲ ಕಳೆದಿದೆ. ಜಿಲ್ಲಾ ಉಸ್ತುವಾರಿ ಸಚಿವರುಗಳಲ್ಲಿ ಬಹುಪಾಲು ಜನರು ಜಿಲ್ಲೆಗಳಿಗೆ ಭೇಟಿ ಮಾಡದೆ ನಿರ್ಲಕ್ಷ್ಯ ಮಾಡಿದರು. ಹಾಗಾಗಿ ಸರ್ಕಾರ ಜಡತೆಯಿಂದ, ಮನುಷ್ಯರನ್ನು ದ್ವೇಷದಿಂದ ಒಡೆದು ಹಾಕುವ ಕೆಟ್ಟತನದಿಂದ ಹೊರಬಂದು ಬರ ಪ್ರವಾಹಗಳನ್ನು ವೈಜ್ಞಾನಿಕ ರೀತಿಯಲ್ಲಿ ನಿಭಾಯಿಸುವಂತಹ ವ್ಯವಸ್ಥೆ ರೂಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇತ್ತೀಚೆಗೆ ಅಸಾನಿ ಚಂಡಮಾರುತದಿಂದ ತೊಂದರೆಗಳಿಗೆ ಒಳಗಾದವರಿಗೆ ತುರ್ತಾಗಿ ಪರಿಹಾರ ನೀಡಬೇಕು. ಕಳೆದ ಮೂರು ವರ್ಷಗಳಿಂದ ಹಾನಿಯಾಗಿರುವ ಸಾವಿರಾರು ಮನೆಗಳಿಗೆ ಈಗಲೂ ಸಮರ್ಪಕ ಪರಿಹಾರ ನೀಡಿಲ್ಲ. ಶಾಶ್ವತ ನೆಲೆ ಕಲ್ಪಿಸಿಲ್ಲ. ಈ ವ್ಯವಸ್ಥೆಯನ್ನು ತುರ್ತಾಗಿ ಮಾಡಬೇಕಾಗಿದೆಯೆಂದು ಆಗ್ರಹಿಸಿದ್ದಾರೆ.




