ಡಿಸಿಎಂ ಹುದ್ದೆ ವಿಚಾರವಾಗಿ ಯಾರೂ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ

2 years ago

ಬೆಂಗಳೂರು: ಸಮುದಾಯಕ್ಕೆ ಒಂದು ಡಿಸಿಎಂ ಹುದ್ದೆ ಸೃಷ್ಟಿ  ವಿಚಾರವಾಗಿ ಯಾರೂ ಯಾವುದೇ ರೀತಿಯ ಹೇಳಿಕೆ ನೀಡದಂತೆ ತಮ್ಮ ಆಪ್ತ ಬಣದ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಸಹಕಾರ ಸಚಿವ ರಾಜಣ್ಣ ಅವರನ್ನು ತಮ್ಮ ನಿವಾಸಕ್ಕೆ ಕರೆಯಿಸಿಕೊಂಡು ಮಾತನಾಡಿದ ಸಿದ್ದರಾಮಯ್ಯ, ಯಾವುದೇ ಕಾರಣಕ್ಕೂ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಮಾತನಾಡಬಾರದು ಎಂದು ಹೇಳಿರುವುದಾಗಿ ಗೊತ್ತಾಗಿದೆ.

ಈ ವಿಚಾರವಾಗಿ ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಯಬೇಕು. ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ಎಲ್ಲರೂ ಬದ್ದರಿರಬೇಕಾಗುತ್ತದೆ. ಆದರೆ ಈ ವಿಷಯ ಮಾಧ್ಯಮಗಳ ಮೂಲಕ ಚರ್ಚಿಸುವ ಮೂಲಕ ಗೊಂದಲ ಉಂಟುಮಾಡಲಾಗುತ್ತದೆ ದಯವಿಟ್ಟು ಅದಕ್ಕೆ ಅವಕಾಶ ನೀಡಬೇಡಿ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್, ಹೆಚ್ಚುವರಿ ಡಿಸಿಎಂ ಹುದ್ದೆ ಬೇಕು ಎನ್ನುವವರು ಮಾಧ್ಯಮಗಳಲ್ಲಿ ಹೇಳಿಕೆ ನೀಡುವ ಬದಲಾಗಿ ಹೈಕಮಾಂಡ್‌ ಜೊತೆ ಚರ್ಚಿಸಿ ಬೇಡಿಕೆಯನ್ನು ಈಡೇರಿಸಿಕೊಳ್ಳಲಿ ಎಂದರು.

ಪತ್ರಿಕೆಗಳಿಗೆ ಹೇಳಿಕೆ ನೀಡುವವರು ದೆಹಲಿಗೆ ಹೋಗಿ ಹೈಕಮಾಂಡ್‌ ಬಳಿ ಮಾತನಾಡಿ, ತಮಗೆ ಬೇಕಾದ ಪರಿಹಾರ ಪಡೆದುಕೊಂಡು ಬರಲಿ. ಮಾಧ್ಯಮಗಳಿಗೆ ಬಹಿರಂಗ ಹೇಳಿಕೆ ನೀಡುವ ಅವಶ್ಯಕತೆ ಇಲ್ಲ ಎಂದರು.

ಮಾಧ್ಯಮಗಳು, ಪತ್ರಿಕೆಗಳು ಪರಿಹಾರ ನೀಡುವುದಿಲ್ಲ. ಪ್ರಚಾರ ಮಾತ್ರ ನೀಡುತ್ತವೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು ಎನ್ನುವವರೂ ಕೂಡ ಸಮಯ ವ್ಯರ್ಥ ಮಾಡಬಾರದು. ಎಲ್ಲಿಂದ ಪರಿಹಾರ ಪಡೆಯಬೇಕೋ, ಅಲ್ಲಿಂದ ಪಡೆದುಕೊಳ್ಳಲಿ. ಹೇಳಿಕೆ ನೀಡುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದರು.

Leave a Reply