ಮೈಸೂರು, ಚಾಮರಾಜನಗರ ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಲ್ಲು ಸಿದ್ದರಾಮಯ್ಯ ರಣತಂತ್ರ

2 years ago

ಬೆಂಗಳೂರು: ಪ್ರತಿಷ್ಠಿತ ಲೋಕಸಭೆ ಚುನಾವಣೆಯಲ್ಲಿ ತಮ್ಮ ತವರು ಜಿಲ್ಲೆ, ಮೈಸೂರು ಮತ್ತು ನೆರೆಯ ಚಾಮರಾಜನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲೇಬೇಕು ಎಂದು ಪಟ್ಟು ಹಿಡಿದಿರುವ ಸಿಎಂ ಸಿದ್ದರಾಮಯ್ಯ ಇದಕ್ಕಾಗಿ ಭರ್ಜರಿ ರಣತಂತ್ರ ಹೆಣದಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹೆಗ್ಗಡದೇವನಕೋಟೆ ಬಳಿಯ ರೆಸಾರ್ಟ್ ನಲ್ಲಿ ಬೀಡು ಬಿಟ್ಟಿರುವ ಸಿದ್ದರಾಮಯ್ಯ, ಅಲ್ಲಿಯೇ ಎರಡು ಜಿಲ್ಲೆಗಳ ಪಕ್ಷದ ಎಲ್ಲಾ ಶಾಸಕರು, ನಿಗಮ ಮಂಡಳಿಗಳ ಅಧ್ಯಕ್ಷರು ಮತ್ತು ಪ್ರಮುಖ ನಾಯಕರೊಂಗೆ ಸತತ ಸಮಾಲೋಚನೆ ನಡೆಸಿದರು.

ಎರಡು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ವಿಧಾನಸಭೆ ಕ್ಷೇತ್ರಗಳ ಮತದಾರರ ಪಟ್ಟಿ ಮತ್ತು ಜಾತಿವಾರು ಲೆಕ್ಕಾಚಾರಗಳನ್ನು ಕೈಯಲ್ಲಿ ಹಿಡಿದು ಕುಳಿತಿರುವ ಸಿದ್ದರಾಮಯ್ಯ, ಮತದಾರರನ್ನು ಸೆಳೆಯಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.

ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲೇಬೇಕು. ಇದು ತಮ್ಮ ಪ್ರತಿಷ್ಠೆಯ ವಿಷಯವಾಗಿದೆ. ಹೀಗಾಗಿ ಎಲ್ಲರೂ ತಮ್ಮ ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗೊತ್ತಿ, ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕೆಲಸ ಮಾಡಬೇಕು. ಚುನಾವಣೆ ನಂತರ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದ ಎಲ್ಲರಿಗೂ ಸರ್ಕಾರದ ವತಿಯಿಂದ ಉಡುಗೊರೆ ಸಿಗಲಿದೆ ಎಂಬ ಭರವಸೆ ನೀಡಿದರು. ಅಷ್ಟೇ ಅಲ್ಲ ಒಂದು ವೇಳೆ ಪಕ್ಷಕ್ಕೆ ಸೋಲಾದರೆ ನಿಗಮ ಮಂಡಳಿ ಅಧ್ಯಕ್ಷರೂ ಸೇರಿದಂತೆ ಎಲ್ಲಾ ಅಧಿಕಾರಸ್ಥರ ತಲೆದಂಡ ನಿಶ್ಚಿತ ಎಂದು ಎಚ್ಚರಿಸಿದರು ಎಂದು ವರದಿಯಾಗಿದೆ.

Leave a Reply