ಸಿದ್ದರಾಮಯ್ಯ ಅವರು ದೊಡ್ಡ ಮನಸ್ಸು ಮಾಡಿ ಅಧಿಕಾರವನ್ನು ಡಿ.ಕೆ.ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು: ಶ್ರೀ ಚಂದ್ರಶೇಖರ ಸ್ವಾಮೀಜಿ

2 years ago

ಮುಖ್ಯಮಂತ್ರಿ ಅಧಿಕಾರ ಹಸ್ತಾಂತರ ಹೈಕಮಾಂಡ್ ನ ನಿರ್ಧಾರ: ಸಿದ್ದರಾಮಯ್ಯ

ಬೆಂಗಳೂರು: ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಅಧಿಕಾರ ಹಸ್ತಾಂತರ ಮತ್ತು ಡಿಸಿಎಂ ಹುದ್ದೆ ಸೃಷ್ಟಿ ವಿಚಾರಗಳು ಮತ್ತೆ ಮುನ್ನೆಲೆಗೆ ಬಂದಿವೆ.

ಎರಡುವರೆ ವರ್ಷಗಳ ಅಧಿಕಾರ ಅವಧಿ ಮುಗಿದ ಕೂಡಲೇ ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡಬೇಕು ಎಂಬ ವಿಚಾರದ ಕುರಿತು ಸ್ವತಃ ಸಿದ್ದರಾಮಯ್ಯ ಮೌನ ಮುರಿದಿದ್ದಾರೆ.

ಮುಖ್ಯಮಂತ್ರಿ ಅಧಿಕಾರ ಹಸ್ತಾಂತರ ಹೈಕಮಾಂಡ್ ನ ನಿರ್ಧಾರ. ನಾವು ಪಕ್ಷದ ವರಿಷ್ಠರು ನೀಡುವ ಸೂಚನೆಯಂತೆ ನಡೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಸರ್ಕಾರದ ವತಿಯಿಂದ ಏರ್ಪಡಿಸಲಾಗಿದ್ದ, ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿಯವರು ಮಾತನಾಡಿ, ಸಿದ್ದರಾಮಯ್ಯನವರು ದೊಡ್ಡ ಮನಸ್ಸು ಮಾಡಿ ಅಧಿಕಾರವನ್ನು ಡಿ.ಕೆ.ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು ಎಂದು ಮನವಿ ಮಾಡಿದರು.

ಸ್ವಾಮೀಜಿಗಳು ಬಹಿರಂಗ ವೇದಿಕೆಯಲ್ಲಿ ಮಾಡಿದ ಈ ಮನವಿ ಆ ಕ್ಷಣದಲ್ಲೇ ಸಂಚಲನ ಸೃಷ್ಟಿಸಿತು. ಇದಕ್ಕೆ ಕಾರ್ಯಕ್ರಮದ ಮುಗಿದ ನಂತರ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.

ಅಧಿಕಾರ ಹಸ್ತಾಂತರ ಸೇರಿದಂತೆ ಯಾವುದೇ ಬೆಳವಣಿಗೆಗಳಾದರೂ ಹೈಕಮಾಂಡ್ ನಿರ್ಧಾರವೇ ಅಂತಿಮ. ಅದನ್ನು ಪಾಲಿಸಬೇಕು. ಕಾಂಗ್ರೆಸ್ ಪ್ರಜಾತಂತ್ರವಾದಿ ಪಕ್ಷವಾಗಿದೆ. ನಾವೆಲ್ಲರೂ ಪಕ್ಷದ ಶಿಸ್ತಿನ ಸಿಪಾಯಿಗಳು. ಪಕ್ಷ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದನ್ನು ಎಲ್ಲರೂ ಪಾಲಿಸುತ್ತೇವೆ ಎಂದರು.

ಪಕ್ಷದ ನಾಯಕತ್ವ ಕೈಗೊಳ್ಳುವ ತೀರ್ಮಾನದ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಹೈಕಮಾಂಡ್ ಅಧಿಕಾರ ಹಸ್ತಾಂತರ ಮಾಡುವಂತೆ ಸೂಚಿಸಿದರೆ ಅದಕ್ಕೆ ತಾವು ಸಿದ್ದ ಎಂದರು.

Leave a Reply