ಬೆಂಗಳೂರು: ಆರ್ ಎಸ್ ಎಸ್ ನಲ್ಲಿ ತರಬೇತಿ ಪಡೆದು ಬಂದಿರುವ B C Nagesh Tiptur ಅವರು ರಾಜ್ಯ ಶಿಕ್ಷಣ ಸಚಿವರಾದಂದಿನಿಂದ ಶಿಕ್ಷಣ ಇಲಾಖೆ ಭ್ರಷ್ಟಾಚಾರದ ಕೊಂಪೆಯಾಗಿರುವ ಕತೆ ಒಂದೊಂದಾಗಿ ಹೊರಬೀಳುತ್ತಿವೆ. ಪಠ್ಯಪುಸ್ತಕಗಳ ವಿವಾದದ ಮರೆಯಲ್ಲಿ ಇಲ್ಲಿ ನಡೆಯುತ್ತಿರುವುದು ಲಂಚಾವತಾರದ ಕುಣಿದಾಟ.ಇದು ಶಿಕ್ಷಣವೋ? ಭಕ್ಷಣೆಯೋ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಪ್ರಾರಂಭದಿಂದಲೇ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ದ ಕೇಳಿ ಬರುತ್ತಿದ್ದ ಭ್ರಷ್ಟಾಚಾರದ ಆರೋಪಗಳಿಗೆ ಈಗ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ಸಂಘಟನೆ ಪುರಾವೆಗಳನ್ನು ನೀಡಿದೆ. ಈ ಸಂಘಟನೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದೆಯಂತೆ ಎಂದಿದ್ದಾರೆ.
ಖಾಸಗಿ ಶಾಲೆಗಳ ಪರವಾನಿಗೆಯಿಂದ ಹಿಡಿದು ನಿವೃತ್ತ ಶಿಕ್ಷಕರ ಪಿಂಚಣಿವರೆಗೆ ಶಿಕ್ಷಣ ಇಲಾಖೆಯಲ್ಲಿ ಲಂಚ ನೀಡದೆ ಯಾವ ಕೆಲಸವೂ ಆಗುತ್ತಿಲ್ಲವಂತೆ. ಲಂಚ ಪಡೆದು ಖಾಸಗಿ ಶಾಲೆಗಳಿಗೆ ಅಕ್ರಮವಾಗಿ ಅನುಮತಿ ನೀಡುವ ಶಿಕ್ಷಣ ಇಲಾಖೆಯೇ, ಮತ್ತೆ ಅಕ್ರಮ ಎಸಗಿದ ಆರೋಪದ ಮೇಲೆ ದುಡ್ಡು ವಸೂಲಿ ಮಾಡುತ್ತಿದೆಯಂತೆ. ಎಂತಹ ಅದ್ಭುತ ಪ್ಲಾನ್ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷೆಯ ಶಿಕ್ಷಣದ ಹಕ್ಕಿನ ಕಾಯ್ದೆಯನ್ನೂ ರಾಜ್ಯ ಶಿಕ್ಷಣ ಇಲಾಖೆ ಹಳ್ಳ ಹಿಡಿಸಿದೆ. 2012ರಲ್ಲಿ ಆರ್ ಟಿ ಇ ಫಲಾನುಭವಿ ವಿದ್ಯಾರ್ಥಿಗಳು 1.20 ಲಕ್ಷ, ಈಗ ಈ ವಿದ್ಯಾರ್ಥಿಗಳ ಸಂಖ್ಯೆ 7 ಸಾವಿರಕ್ಕೆ ಇಳಿದಿದೆ. ಖಾಸಗಿ ಶಾಲೆಗಳಿಗೆ ಸರ್ಕಾರದಿಂದಲೇ ಬೆಂಬಲ ಎಂದಿದ್ದಾರೆ.
ಆರ್ ಟಿ ಇ ಯೋಜನೆಯಡಿ ಖಾಸಗಿ ಶಾಲೆಗಳಿಗೆ ಸರ್ಕಾರ ಸುಮಾರು ರೂ.900 ಕೋಟಿ ಬಾಕಿ ಪಾವತಿಸಬೇಕಂತೆ. ಶಿಕ್ಷಣ ಸಚಿವರು 40% ಕಮಿಷನ್ ಲೆಕ್ಕ ಹಾಕುತ್ತಿರುವಂತೆ ಕಾಣುತ್ತಿದೆ. ಕಮಿಷನ್ ಎಂಬ ಸಾಂಕ್ರಾಮಿಕ ರೋಗ ಶಿಕ್ಷಣ ಇಲಾಖೆಯನ್ನೂ ರೋಗಗ್ರಸ್ತ ಗೊಳಿಸಿದೆ ಎಂದು ಆರೋಪಿಸಿದ್ದಾರೆ.
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಮ್ಮ ಇಲಾಖೆಯ ಲಂಚಾವತಾರದ ಕಡೆಗಿನ ಜನರ ಗಮನ ಬೇರೆಕಡೆ ಸೆಳೆಯಲಿಕ್ಕಾಗಿಯೇ ಪಠ್ಯಪುಸ್ತಕ, ಭಗವದ್ಗೀತೆ, ಮದರಸಾಕ್ಕೆ ಸಂಬಂಧಿಸಿದ ವಿವಾದ ಹುಟ್ಟುಹಾಕುತ್ತಿದ್ದಾರೆ. ಲಂಚಕೋರರಿಗೆ ಮುಖ ಮರೆಸಿಕೊಳ್ಳಲು ಹಿಂದುತ್ವ ಒಂದು ಮುಖವಾಡ ಎಂದಿದ್ದಾರೆ.
ಗುತ್ತಿಗೆದಾರರು BJP Karnataka ಸರ್ಕಾರದ 40% ಕಮಿಷನ್ ಬಗ್ಗೆ ಪ್ರಧಾನಿ Narendra Modi ಅವರಿಗೆ ಬರೆದ ಪತ್ರಗಳಿಗೆ ಉತ್ತರ ಸಿಕ್ಕಿಲ್ಲ. ಈಗ ಖಾಸಗಿ ಶಾಲೆಗಳ ಆಡಳಿತವೂ ಪ್ರಧಾನಿಗೆ ಪತ್ರ ಬರೆದಿದೆಯಂತೆ. ಮುಖ್ಯಮಂತ್ರಿ Basavaraj Bommai ಯವರು ಈ ಎಲ್ಲ ಪತ್ರಗಳ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರ ನಿಗಾವಣೆಯಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ನೀಡಬೇಕೆಂದು ಒತ್ತಾಯಿಸಿದ್ದಾರೆ.




