ಲಾಕ್‍ಡೌನ್ ಆರ್ಥಿಕ ಅನಾಹುತದಿಂದ ಹೊರಬರಲು ಸಾಧ್ಯವಾಗದ ಪರಿಸ್ಥಿತಿ: ಸಿದ್ದು

5 years ago

ಬೆಂಗಳೂರು: ಜನರ ಜೀವ ಮತ್ತು ಜೀವನದ ಮೇಲೆ ಕೊರೋನ ಮಾಡಿರುವ ಆಘಾತ ಬಹಳ ದೊಡ್ಡದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೋವಿಡ್ ವೈರಸ್ಸು ಸೃಷ್ಟಿಸಿರುವ ಜೈವಿಕ ಆಘಾತದಿಂದ ಜನರು ನಿಧಾನಕ್ಕೆ ಹೊರ ಬರಬಹುದು, ಆದರೆ ಲಾಕ್‍ಡೌನ್ ಸೃಷ್ಟಿಸಿರುವ ಆರ್ಥಿಕ ಅನಾಹುತದಿಂದ ಹೊರಬರಲು ಸಾಧ್ಯವಾಗದ ಪರಿಸ್ಥಿತಿ ಇದೆ ಎಂದಿದ್ದಾರೆ.

ದೇಶದ ವಿವಿಧ ರಾಜ್ಯ ಸರ್ಕಾರಗಳು ತನ್ನ  ಜನರ ಜೊತೆ ನಿಲ್ಲುತ್ತಿವೆ. ಕೇರಳ ರಾಜ್ಯವು ಈ ವರ್ಷ ಸಹ 20 ಸಾವಿರ ಕೋಟಿಗೂ ಹೆಚ್ಚಿನ ಮೊತ್ತದ ಪ್ಯಾಕೇಜ್ ಘೋಷಣೆ ಮಾಡಿದೆ. ತಮಿಳುನಾಡು, ಆಂಧ್ರ, ತೆಲಂಗಾಣ ಸರ್ಕಾರಗಳು ಕಳೆದ ವರ್ಷದಂತೆ ಈ ವರ್ಷವೂ ಸಹ 10 ಸಾವಿರ ಕೋಟಿಗೂ ಅಧಿಕ ಮೊತ್ತದ ಪ್ಯಾಕೇಜ್‍ಗಳನ್ನು ಘೋಷಿಸಿವೆ. ಆದರೆ ಕರ್ನಾಟಕ ಸರ್ಕಾರಕ್ಕೆ ಹೋಟೆಲ್ ಕಾರ್ಮಿಕರು, ದೀಪಾಲಂಕಾರದ ಕೆಲಸಗಾರರು, ಫೋಟೋಗ್ರಾಫರ್‍ಗಳು ಸೇರಿ ಇನ್ನಿತರೆ ನಾನಾ ಜನ ಸಮುದಾಯಗಳು ಪಡುತ್ತಿರುವ ಕಷ್ಟ ಕಣ್ಣಿಗೆ ಬಿದ್ದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಸೇರಿ ರಾಜ್ಯದ ನಾನಾ ಭಾಗಗಳಲ್ಲಿ ಸಾವಿರಾರು ಹೋಟೆಲ್‍ಗಳು ಬಂದ್ ಆಗಿ ಮಾರಾಟಕ್ಕಿವೆ. ಹೋಟೆಲ್, ಕ್ಯಾಂಟೀನ್ ಕಟ್ಟಡಗಳ ಬಾಡಿಗೆ ಕಟ್ಟಲಾಗದೆ ಮಾಲೀಕರು ಪರಿತಪಿಸುತ್ತಿದ್ದಾರೆ. ಬ್ಯಾಂಕ್ ಸಾಲದ ಬಡ್ಡಿ ಬೆಳೆಯುತ್ತಲೆ ಇರುವ ಕಾರಣ ಸಣ್ಣ ಮತ್ತು ಮಧ್ಯಮ ಹೋಟೆಲ್‍ಗಳ ಮಾಲಿಕರು ಮಾತ್ರವಲ್ಲ ದೊಡ್ಡ ಹೋಟೆಲ್‍ಗಳ ಮಾಲಿಕರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೊಂದು ಕಡೆ ಹೋಟೆಲ್ ಕಾರ್ಮಿಕರು ಎರಡು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಇದೆ ಎಂದು ಸಮಸ್ಯೆಯನ್ನು ಬಿಡಿಸಿಟ್ಟಿದ್ದಾರೆ.

ಬೆಂಗಳೂರು ನಗರ ಮತ್ತು ಅಕ್ಕ ಪಕ್ಕದ ನಾಲ್ಕೈದು ಜಿಲ್ಲೆಗಳಲ್ಲೇ 20 ಸಾವಿರಕ್ಕೂ ಅಧಿಕ ಮಂದಿ ಹೋಟೆಲ್ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ. ಇವರ ಕುಟುಂಬ ನಿರ್ವಹಣೆ ಮಾಡಲಾಗದೆ ಸಂಕಷ್ಟದಲ್ಲಿದ್ದಾರೆ. ಈ ಕಾರ್ಮಿಕರ ಮಕ್ಕಳು ಶಿಕ್ಷಣ ತೊರೆಯಬೇಕಾದ ಸ್ಥಿತಿ ಬಂದೊದಗಿದೆ ಎಂದಿದ್ದಾರೆ.

ಇಡಿ ಸೇವಾ ವಲಯವೆ ಸ್ಥಗಿತಗೊಂಡಿರುವುದರಿಂದ ಪ್ರವಾಸೋದ್ಯಮವನ್ನೆ ನೆಚ್ಚಿಕೊಂಡಿದ್ದ ವಸತಿ ಗೃಹಗಳ ಮಾಲೀಕರು ಮತ್ತು ಕೆಲಸಗಾರರೂ ದುಡಿಮೆ ಇಲ್ಲದೆ ಕಂಗಾಲಾಗಿದ್ದಾರೆ ಎಂದು ಹೇಳಿದ್ದಾರೆ.

ಶುಭ ಕಾರ್ಯಗಳು ನಡೆಯದಿರುವುದರಿಂದ, ಧಾರ್ಮಿಕ ಕಾರ್ಯಗಳು, ಹಬ್ಬಗಳ ಆಚರಣೆಗೂ ಅವಕಾಶ ಇಲ್ಲವಾಗಿದ್ದರಿಂದ ಫೋಟೋಗ್ರಾಫರ್ ಗಳು, ಡೆಕೊರೇಟರ್ ಗಳು, ದೀಪದ ಅಲಂಕಾರ ಮಾಡುವ ಕೆಲಸಗಾರರು ಸೇರಿ ಪ್ರತಿಯೊಂದೂ ದುಡಿಯುವ ವರ್ಗದ ಸಹಸ್ರ ಸಹಸ್ರ ಕುಟುಂಬಗಳು ಕಣ್ಣೀರಲ್ಲಿ ಕೈತೊಳೆಯುತ್ತಿವೆ ಎಂದಿದ್ದಾರೆ.

ಇವರೆಲ್ಲರ ಸಂಕಷ್ಟ ಮತ್ತು ನೋವುಗಳು ಸರ್ಕಾರಕ್ಕೆ ಕಾಣಬೇಕಿತ್ತು. ಸರ್ಕಾರ ಕುರುಡಾಗಿರುವುದರಿಂದ ಈ ಶ್ರಮಿಕ ವರ್ಗಗಳೆ ಸ್ವತಃ ಸರ್ಕಾರವನ್ನು ಇನ್ನಿಲ್ಲದಂತೆ ಒತ್ತಾಯಿಸುತ್ತಿದ್ದರೂ ಅವರಿಗೆ ಸೂಕ್ತವಾದ ನೆರವು ಸಿಕ್ಕಿಲ್ಲ ಎಂದು ಹೇಳಿದ್ದಾರೆ.

ಕೊರೋನಾ ಮೊದಲ ಅಲೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರ ಘೋಷಿಸಿದ ಪ್ಯಾಕೇಜ್‍ನಲ್ಲಿ ಅರ್ಧದಷ್ಟು ಕೂಡ ತಲುಪಬೇಕಾದವರಿಗೆ ತಲುಪಲಿಲ್ಲ. ಕಾರ್ಮಿಕ ನಿಧಿ ಹೊರತುಪಡಿಸಿ ಕೇವಲ 800-900 ಕೋಟಿಯಷ್ಟು ಹಣ ನೆಪಮಾತ್ರಕ್ಕೆ ಹಂಚಿಕೆಯಾಗಿದೆ ಎಂದಿದ್ದಾರೆ.

ಎರಡನೇ ಅಲೆ ಸಂದರ್ಭದಲ್ಲೂ ಸರ್ಕಾರ ಘೋಷಿಸಿರುವ 2 ಸಾವಿರ ಕೋಟಿ ರೂ.ಗಳ   ಪ್ಯಾಕೇಜು ರಾಜ್ಯದ ಜನರಿಗೆ ಮಾಡಿರುವ ಅವಮಾನ ಎಂದು ಮತ್ತೊಮ್ಮೆ ಹೇಳಬೇಕಾಗಿದೆ. ಈ 2 ಸಾವಿರ ಕೋಟಿಯಲ್ಲಿ ಕಟ್ಟಡ ಕಾರ್ಮಿಕರಿಗೆ ಘೋಷಿಸಿರುವ ಅವರದೆ ಹಣದ ಪ್ಯಾಕೇಜು ಬಿಟ್ಟರೆ ಉಳಿಯುವುದು ಕೇವಲ 1,500 ಕೋಟಿ ರೂಗಳು ಮಾತ್ರ ಎಂದಿದ್ದಾರೆ.

ಅತಿ ಕಡಿಮೆ ಪ್ಯಾಕೇಜು ಘೋಷಿಸಿದ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ ಮೊದಲಿಗೆ ನಿಂತಿದೆ ಎಂಬ ಆರೋಪದಿಂದ ಹೊರಬರಬೇಕಾದರೆ ರಾಜ್ಯ ಸರ್ಕಾರ ಈಗಲಾದರೂ ಉತ್ತಮ ಪ್ಯಾಕೇಜನ್ನು ಘೋಷಿಸಿ ಅಕ್ಕ ಪಕ್ಕದ ರಾಜ್ಯಗಳ ಮುಂದೆ ಮರ್ಯಾದೆ ಉಳಿಸಿಕೊಳ್ಳಬೇಕಿದೆ. ಆದ್ದರಿಂದ ಎಲ್ಲ ಬಿಪಿಎಲ್ ಕುಟುಂಬಗಳಿಗೆ ತಲಾ 10,000 ರೂಗಳನ್ನು ಘೋಷಿಸಬೇಕು ಎಂದು ಮತ್ತೊಮ್ಮೆ ಒತ್ತಾಯಿಸಿದ್ದಾರೆ.

ಜೊತೆಗೆ ಈ ಕೆಳಕಂಡ ವಲಯಗಳ ಜನರೂ ಸಹ ಉಳಿದವರಂತೆ ತೀವ್ರ ಬಿಕ್ಕಟ್ಟಿನಲ್ಲಿದ್ದಾರೆ. ಆದ್ದರಿಂದ; ಹೋಟೆಲ್, ವಸತಿ ಗೃಹ, ಫೋಟೋಗ್ರಾಫರ್ ಗಳು, ಅಲಂಕಾರಿಕ ವೃತ್ತಿಯಲ್ಲಿ ತೊಡಗಿರುವವರಿಗೆ ತಕ್ಷಣ ಸೂಕ್ತ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದಿದ್ದಾರೆ.

ಹೋಟೆಲ್, ಕ್ಯಾಂಟೀನ್ ಮಾಲೀಕರ ಬ್ಯಾಂಕ್ ಸಾಲ ವಸೂಲಾತಿಯನ್ನು ಮುಂದೂಡಬೇಕು. ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಬೇಕು. ಜೊತೆಗೆ ಎಲ್ಲಾ ಉತ್ಪಾದಕ ಮತ್ತು ಸೇವಾ ವಲಯಗಳ ಜನರು ಮಾಡಿರುವ ಸಾಲದ ಮೇಲಿನ ಬಡ್ಡಿಯನ್ನೂ ಮನ್ನಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಹೋಟೆಲ್, ರೆಸಾರ್ಟ್, ವಸತಿಗೃಹಗಳ ಕೊರೋನಾ ಕಾಲದ ವಿದ್ಯುತ್, ನೀರಿನ ಶುಲ್ಕವನ್ನು ಮನ್ನಾ ಮಾಡುವುದು ಸೇರಿದಂತೆ ಈ ಉದ್ಯಮ ನೆಲಕಚ್ಚದಂತೆ ಅಗತ್ಯ ನೆರವನ್ನು ನೀಡಬೇಕೆಂದು ಆಗ್ರಹಿಸಿದ್ದಾರೆ.

Leave a Reply