ಬೆಂಗಳೂರು: ‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವೀರಾವೇಶದ ಭಾಷಣ ಕೇಳಿ ಖುಷಿಯಾಯಿತು. ಸಂಘ ಪರಿವಾರ ಇಂತಹ ಜೋರು ಮಾತುಗಳನ್ನು ಸಹಿಸವುದಿಲ್ಲ, ಇದೇ ರೀತಿ ಮಾತನಾಡಿಯೇ ಪಾಪ ಬಿ.ಎಸ್ ಯಡಿಯೂರಪ್ಪ ಜೈಲು ಸೇರಿದ್ದು ಎನ್ನುವುದು ನೆನಪಿರಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಬಸವರಾಜ ಬೊಮ್ಮಾಯಿಯಾವರಿಗೆ ಕಿವಿಮಾತು ಹೇಳಿದ್ದಾರೆ.
ನಿನ್ನೆ ದೇವನಹಳ್ಳಿಯಲ್ಲಿ ನಡೆದ ಬಿಜೆಪಿ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಬೊಮ್ಮಾಯಿ ದಮ್ ಇದ್ದರೆ ಬಿಜೆಪಿಯನ್ನು ಸೋಲಿಸಿ ಎಂದು ವಿಪಕ್ಷಗಳಿಗೆ ಸವಾಲೆಸೆದಿದ್ದರು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಧಮ್ ಇದ್ದರೆ ಬಿಜೆಪಿ ಯಾತ್ರೆ ಹಿಮ್ಮೆಟ್ಟಿಸಿ ಎಂದು ಬೊಮ್ಮಾಯಿ ಸವಾಲು ಹಾಕಿದ್ದಾರೆ. ನಾವು ಯಾಕೆ ಹಿಮ್ಮೆಟ್ಟಿಸಲು ಹೋಗ್ಬೇಕು? ಸಮಾವೇಶದಲ್ಲಿ ಖಾಲಿ ಕುರ್ಚಿಗಳನ್ನು ನೋಡಿದರೆ ನಿಮ್ಮ “ಜಾತ್ರೆ”ಯನ್ನು ನಮ್ಮ ಜನರೇ ಹಿಮ್ಮೆಟ್ಟಿಸಿದ್ದಾರೆ ಎಂದು ನಿಮಗೆ ಅನಿಸಲ್ವಾ? ಎಂದು ಕಾಲೆಳೆದಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಯಿ ಅವರೇ ನಮಗೆ ಸವಾಲು ಹಾಕುವ ಧಮ್ ನಿಮಗಿಲ್ಲ ಎನ್ನುವುದು ಸ್ವತಃ ನಿಮಗೂ ಗೊತ್ತು, ನಿಮಗೆ ಧಮ್ ಇದ್ದರೆ ಮೊದಲು ನಿಮ್ಮ ಸಂಪುಟದಲ್ಲಿರುವ ಖಾಲಿ ಸ್ಥಾನಗಳನ್ನು ತುಂಬಿ ಬಿಡಿ. ಕನಿಷ್ಠ ಬಸವನಗೌಡ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಿ. ಆ ಮೇಲೆ ನಿಮ್ಮ ಧಮ್ ನೋಡೋಣ ಎಂದು ಸವಾಲೆಸೆದಿದ್ದಾರೆ.
ನನ್ನ ಆಡಳಿತದ ಕಾಲದ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಕೆಲವು ದಿನಗಳಿಂದ ಬಿಜೆಪಿ ನಾಯಕರು ಹೇಳುತ್ತಲೇ ಇದ್ದಾರೆ. ಮೊನ್ನೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಹೈಕೋರ್ಟ್ ನೋಟೀಸ್ ನೀಡಿದ್ದನ್ನು ನೋಡಿದರೆ ಇವರು ಹೇಳಿದ್ದು ನನಗೋ, ಯಡಿಯೂರಪ್ಪನವರಿಗೋ? ಎಂದು ಗೊಂದಲವಾಗುತ್ತಿದೆ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.
ನನ್ನ ಅಧಿಕಾರವಧಿಯ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಧಮ್ಕಿ ಹಾಕುವ ಬದಲು ಧಮ್ ಇದ್ದರೆ ಮೊದಲು ಆ ಕೆಲಸ ಮಾಡಿ. ನಾನು ಅದನ್ನು ಎದುರಿಸಲು ಸದಾ ಸಿದ್ಧ. ಈ ಬ್ಲಾಕ್ ಮೇಲ್ ತಂತ್ರಗಳನ್ನೆಲ್ಲ ನಿಮ್ಮವರ ಮೇಲೆ ಬಳಸಿಕೊಳ್ಳಿ ಎಂದಿದ್ದಾರೆ.
ನಮ್ಮ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವ ಮೊದಲು ನಿಮ್ಮ ನಾಯಕರುಗಳ ಮೇಲೆ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಸಾಲು ಸಾಲು ಹಗರಣಗಳನ್ನು ಇತ್ಯರ್ಥ ಮಾಡಿಕೊಂಡು ಬನ್ನಿ. ನೀವು ಬೀಸುವ ಕತ್ತಿ ನಿಮ್ಮ ಕುತ್ತಿಗೆಯನ್ನೇ ಕೊಯ್ಯದಿರಲಿ ಎಂದಿದ್ದಾರೆ.
ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕ ಚರ್ಚೆಗೆ ನೀವು ಸಿದ್ಧರಿದ್ದಿರಾ ಬಸವರಾಜ ಬೊಮ್ಮಾಯಿಯವರೇ? ನಮ್ಮ ಪಕ್ಷ ಸಿದ್ಧ ಇದೆ. ನೀವು ಸಿದ್ಧ ಇದ್ದರೆ ಸಾರ್ವಜನಿಕ ಚರ್ಚೆಗೆ ಸ್ಥಳ-ಸಮಯ ನೀವೇ ನಿರ್ಧರಿಸಿ ತಿಳಿಸಿ, ನಾನು ಬರ್ತೇನೆ. ಧಮ್ ಎಂದರೆ ಧಮ್ ಬಿರಿಯಾನಿ ಎಂದು ನೀವು ತಿಳಿದುಕೊಂಡ ಹಾಗಿದೆ ಎಂದಿದ್ದಾರೆ.
ಭ್ರಷ್ಟಾಚಾರವನ್ನೇ ವಿಷಯವನ್ನಾಗಿಟ್ಟು ಚುನಾವಣೆ ಎದುರಿಸುವ ಧಮ್ ನಿಮಗಿದೆಯೇ ಬೊಮ್ಮಾಯಿಯವರೇ? ನಿಮಗೆ ಆ ಧಮ್ ಇಲ್ಲ. ಕೊನೆಗೆ ಹಿಂದು-ಮುಸ್ಲಿಮ್, ಮಂದಿರ ಮಸೀದಿ, ಹಿಜಾಬ್ –ಕೇಸರಿ ಶಾಲುಗಳ ವಿವಾದದಲ್ಲಿಯೆ ನಿಮ್ಮ ಪ್ರಚಾರ ಕೊನೆಗೊಳ್ಳುವುದು. ಬೇರೆ ದಾರಿ ನಿಮಗಿಲ್ಲ ಎಂದಿದ್ದಾರೆ.




