ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಜಾರಿಗೆ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಪ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯಲ್ಲಿ ಜಾರಿಗೆ ತಂದ ಹೊಸ ಯೋಜನೆಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜಿಸುವ ಅರ್ಚಕರು ಹಾಗೂ ದೇವಾಲಯ ನೌಕರರು ಆರೋಗ್ಯ ಸಮಸ್ಯೆಗೆ ಒಳಗಾದಲ್ಲಿ ಅವರಿಗೆ ರಕ್ಷಣೆ ಒದಗಿಸಲು ನಾನು ಇಲಾಖೆ ಜವಾಬ್ದಾರಿ ತೆಗೆದುಕೊಂಡ ಮೇಲೆ ವಿನೂತನ ವಿಮೆ ಯೋಜನೆ ಜಾರಿಗೊಳಿಸಿದ್ದು, ಅರ್ಚಕರು ಹಾಗೂ ಇಲಾಖೆ ನೌಕರರಿಗೆ ವಿಮೆ ಜಾರಿಗೆ ತರಲು ತೀರ್ಮಾನಿಸಿದ್ದೇನೆ ಎಂದರು.
ಯೋಜನೆಯಿಂದ ಮುಜರಾಯಿ ಇಲಾಖೆಯ ಸುಮಾರು 37,000 ಸಿಬ್ಬಂದಿಗೆ ಪ್ರಯೋಜನವಾಗಲಿದೆ. ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಧಾರ್ಮಿಕ ಸಂಸ್ಥೆಗಳಲ್ಲಿ ಈಗಾಗಲೇ 5ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಪಡೆದು ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಹಾಗೂ ಅರ್ಚಕರಿಗೆ 6ನೇ ವೇತನ ಆಯೋಗದ ವೇತನ ಕೊಡುವಂತೆ ಅರ್ಚಕರಿಂದ ಬಹಳ ದಿನಗಳಿಂದ ಬೇಡಿಕೆ ಇತ್ತು. ನಾನು ಇಲಾಖೆ ಜವಾಬ್ದಾರಿ ವಹಿಸಿಕೊಂಡ ನಂತರ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತ್ವರಿತಗತಿಯಲ್ಲಿ ಅರ್ಚರಿಕರಿಗೆ 6ನೇ ವೇತನ ಆಯೋಗದ ವೇತನ ನೀಡಲು ತೀರ್ಮಾನಿಸಿದ್ದೇನೆ ಎಂದರು.
ಈ ಮೂಲಕ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ದಸರಾ ಹಬ್ಬಕ್ಕೆ ಬಂಪರ್ ಕೊಡುಗೆಯನ್ನು ರಾಜ್ಯ ಸರ್ಕಾರ ಘೋಷಿಸಿದಂತಾಗಿದೆ.




