ಬೆಂಗಳೂರು: ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರವಾಗಿ ನಿರ್ಣಯ ತೆಗೆದುಕೊಂಡಿದ್ದೇವೆ. ಸಾಮಾಜಿಕ ನ್ಯಾಯ ಸುಮ್ ಸುಮ್ನೆ ಬರೋದಿಲ್ಲ. ಇಂಥಾ ತೀರ್ಮಾನ ಮಾಡಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಒಳಮೀಸಲಾತಿ ಕುರಿತ ಸಚಿವ ಸಂಪುಟ ನಿರ್ಣಯಕ್ಕಾಗಿ ತಮಗೆ ಅಭಿನಂದನೆ ಸಲ್ಲಿಸಿದ ಮಾದಿಗ ಸಮುದಾಯದ ರಾಜ್ಯ ಮುಖಂಡರು, ಒಳಮೀಸಲಾತಿ ಹೋರಾಟಗಾರರು, ಪದಾಧಿಕಾರಿಗಳು ಮತ್ತು ಸಮುದಾಯದ ಜನಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಒಳಮೀಸಲಾತಿಗಾಗಿ ಮಾದಿಗ ಸಮುದಾಯ ದಶಕಗಳಿಂದ ಹೋರಾಟ ನಡೆಸಿದೆ. ಈಗ ಸುಪ್ರೀಂಕೋರ್ಟ್ ಕೂಡ ತೀರ್ಪು ನೀಡಿದೆ. ನಾವು ಜಾರಿ ಮಾಡಲೇಬೇಕಿದೆ. 101 ಪರಿಶಿಷ್ಟ ಜಾತಿಗಳಿವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಮುಖ್ಯ. ಎಲ್ಲರನ್ನೂ ಸಮಾಧಾನ ಮಾಡುವುದು ಸಾಧ್ಯವಿಲ್ಲದಿದ್ದರೂ ಶೇ.90 ರಷ್ಟು ಸಮುದಾಯಗಳಿಗೆ ಸಮಾಧಾನ ಆಗುವ ತೀರ್ಮಾನ ತೆಗೆದುಕೊಳ್ಳಬೇಕಿದೆ. ಇದನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದರು.
ಗೃಹ ಸಚಿವ ಪರಮೇಶ್ವರ್ ಅವರ ನಿವಾಸದಲ್ಲಿ ನಡೆದ ದಲಿತ ಶಾಸಕರ ಸಭೆಯಲ್ಲಿ, “ಒಳ ಮೀಸಲಾತಿಗೆ ತಮ್ಮ ವಿರೋಧ ಇಲ್ಲ” ಎನ್ನುವ ನಿರ್ಣಯ ಮಾಡಿದ್ದಾಗಿದೆ. ಹೀಗಾಗಿ ಎಲ್ಲರೂ ಒಳಮೀಸಲಾತಿ ಪರವಾಗಿದ್ದಾರೆ ಎಂದರು.
ತೆಲಂಗಾಣ ಸರ್ಕಾರ ಈಗಾಗಲೇ ಒಳಮೀಸಲಾತಿ ಜಾರಿ ಸಂಬಂಧ ಒಂದು ಆಯೋಗ ರಚನೆ ಮಾಡಿದ್ದಾಗಿದೆ. ನಾನು ತೆಲಂಗಾಣ ಸಿಎಂ ಜೊತೆಗೂ ಇತ್ತೀಚಿಗೆ ಮೈಸೂರಿನಲ್ಲಿ ಈ ಬಗ್ಗೆ ಚರ್ಚೆ ಮಾಡಿದ್ದೇನೆ. ಹರಿಯಾಣದಲ್ಲೂ ಕ್ಯಾಬಿನೆಟ್ ನಿರ್ಣಯ ಆಗಿದೆ. ಆದರೆ ಆದೇಶ ಆಗಿಲ್ಲ. ನಮ್ಮ ಕ್ಯಾಬಿನೆಟ್ ನಲ್ಲೂ ಹಿಂದೊಮ್ಮೆ ಅನೌಪಚಾರಿಕ ಚರ್ಚೆ ಮಾಡಿದ್ದೆ ಎಂದು ಹೇಳಿದರು.
ನೆನ್ನೆಯ ಕ್ಯಾಬಿನೆಟ್ ನಲ್ಲಿ ಸಚಿವ ಮಹದೇವಪ್ಪ ಒಳಮೀಸಲಾತಿ ವಿಚಾರ ಪ್ರಸ್ತಾಪಿಸಿದರು. ಸಚಿವರಾದ ಪ್ರಿಯಾಂಕ್ ಖರ್ಗೆ, ತಿಮ್ಮಾಪುರ ಅವರು, ಮುನಿಯಪ್ಪ ಅವರು ಎಲ್ಲರೂ ಮಾತನಾಡಿದರು. ಎಲ್ಲರೂ ಒಳ ಮೀಸಲಾತಿಗೆ ಒಪ್ಪಿಕೊಂಡರು. ಯಾರದ್ದೂ ವಿರೋಧ ಇರಲಿಲ್ಲ ಎಂದರು.
ಆದರೆ ಅಗತ್ಯ ಡಾಟಾ ಅಗತ್ಯವಿದೆ ಎನ್ನುವ ಸಂಗತಿ ಕೂಡ ಚರ್ಚೆಗೆ ಬಂದಿದೆ. ಹೀಗಾಗಿ ಆಯೋಗ ರಚನೆ ಮಾಡಿದ್ದೇವೆ. ಆಯೋಗ ಎಲ್ಲ ವರದಿಗಳನ್ನೂ ಅಧ್ಯಯನ ಮಾಡಿ ಅಗತ್ಯ ಅಂಕಿ ಅಂಶ ಸಮೇತ ವರದಿ ನೀಡುತ್ತದೆ. ವರದಿ ಬರುವವರೆಗೂ ಹೊಸದಾಗಿ ಯಾವ ನೇಮಕಾತಿ ನೋಟಿಫಿಕೇಶನ್ ಹೊರಡಿಸುವುದು ಬೇಡ ಎನ್ನುವ ನಿರ್ಣಯ ಆಗಿದೆ. ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ ಎಂದರು.
ಸಮುದಾಯಗಳನ್ನು ಪರಸ್ಪರ ಸುಳ್ಳುಗಳ ಮೂಲಕ ಎತ್ತಿಕಟ್ಟುವ ಬಿಜೆಪಿ ಕೇಂದ್ರದಲ್ಲಿ ಏಕೆ SCP/TSP ಕಾಯ್ದೆ ಜಾರಿ ಮಾಡಿಲ್ಲ? ಬಿಜೆಪಿ ಆಡಳಿತದಲ್ಲಿರುವ ಯಾವ ರಾಜ್ಯಗಳಲ್ಲೂ ನಾವು ಜಾರಿ ಮಾಡಿದ scp/tsp ಕಾಯ್ದೆಯನ್ನು ಅವರೇಕೆ ಮಾಡಲಿಲ್ಲ ಹೇಳಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.
ಬಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು ಮಾತ್ರ. ಬಿಜೆಪಿಯ ಯಾವ ರಾಜ್ಯಗಳಲ್ಲೂ ಜಾರಿ ಮಾಡಿಲ್ಲ. ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಮ್ಮ ರಾಜ್ಯ ಮಾತ್ರ. ಇದು ನನ್ನ ಕಮಿಟ್ ಮೆಂಟ್. ರಾಜಕಾರಣಕ್ಕಾಗಿ ಇದೆಲ್ಲಾ ಮಾಡಿದ್ದಲ್ಲ. ಇದರ ಮುಂದುವರೆದ ಭಾಗವಾಗಿಯೇ ಒಳಮೀಸಲಾತಿ ಜಾರಿಗೆ ಮುಂದಾಗಿದ್ದೇವೆ ಎಂದರು.
ಸಮಾಜದಲ್ಲಿ ಸಮಾನತೆ ಸುಮ್ನೆ ಬರೋದಿಲ್ಲ. ಈ ರೀತಿ ನಿರ್ಣಯಗಳನ್ನು ತಗೋಬೇಕಾತ್ತೆ. ಹೊಸ ಆಯೋಗದ ವರದಿ ನಿಗದಿತ ಸಮಯದೊಳಗೆ ಬರುವ ನಿರೀಕ್ಷೆ ಇದೆ. ವರದಿ ಬಂದ ತಕ್ಷಣ ಒಳ ಮೀಸಲಾತಿ ಜಾರಿ ಮಾಡಲಾಗುವುದು ಎಂದರು.
ಮಾಜಿ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಮಾತನಾಡಿ, ಮಾದಿಗ ಸಮುದಾಯದ ಭಾಗ್ಯದ ಬಾಗಿಲು ತೆರೆದ ಸಿದ್ದರಾಮಯ್ಯ ಅವರ ಪರವಾಗಿ ನಮ್ಮ ಸಮುದಾಯದ ಪ್ರತಿಯೊಬ್ಬರೂ ಇರುತ್ತಾರೆ. ನಾವು ನಿಮ್ಮ ಪರವಾಗಿದ್ದೀವಿ. ಇದರ ಸ್ಯಾಂಪಲ್ ಈ ಉಪ ಚುನಾವಣೆಯಲ್ಲೇ ನಿಮಗೆ ಗೊತ್ತಾಗತ್ತೆ. ಮೂರಕ್ಕೆ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ನಮ್ಮ ಸಮುದಾಯದ ಪ್ರತಿಯೊಬ್ಬರೂ ಕೆಲಸ ಮಾಡುತ್ತಾರೆ. ಚರಿತ್ರೆಯಲ್ಲಿ ಅಜರಾಮರ ಆಗಿ ಉಳಿಯುವ ಗಟ್ಟಿತನವನ್ನು ನೀವು ಪ್ರದರ್ಶಿಸಿದ್ದೀರಿ. ನಿಮಗೆ ಸಾವಿರ ಸಾವಿರ ವಂದನೆಗಳು ಎಂದರು.
ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ಮಾತನಾಡಿ, ಒಳಮೀಸಲಾತಿ ಹೋರಾಟಕ್ಕೆ ನಿನ್ನೆ ಚರಿತ್ರಾರ್ಹ ದಿನ. ಇದು ಸಾಧ್ಯವಾಗಿದ್ದು ಸಿಎಂ ಸಿದ್ದರಾಮಯ್ಯ ಅವರಿಂದ. ನೀವು ಮಾಡದಿದ್ದರೆ ಬಿಜೆಪಿಯವರಾಗಲಿ, ಉಳಿದ ಯಾರೇ ಆಗಲಿ ಈ ಗಟ್ಟಿತನ ತೋರಿಸುತ್ತಿರಲಿಲ್ಲ. ಒಳ ಮೀಸಲಾತಿ ಜಾರಿ ಮಾಡುತ್ತಿರಲಿಲ್ಲ ಎಂದರು.
ರಾಜ್ಯಸಭೆಯ ಮಾಜಿ ಉಪಸಭಾಪತಿ ಡಾ.ಎಲ್.ಹನುಮಂತಯ್ಯ ಮಾತನಾಡಿ, ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಹು ಮಹಾರಾಜ್ ಮತ್ತು ನಾಲ್ವಡಿ ಅರಸರ ಪರಂಪರೆಯವರು. ಅದಕ್ಕೇ ಇದು ಸಾಧ್ಯವಾಗಿದೆ ಎಂದು ಶ್ಲಾಘಿಸಿದರು.




