ದಿನನಿತ್ಯದ ಒತ್ತಡದಿಂದ ಹೊರಬರಲು ಕ್ರೀಡಾಕೂಟ ಸಹಕಾರಿ: ಹೇಮಂತ್

1 year ago

ಶಿವಮೊಗ್ಗ: ಒತ್ತಡದಿಂದ ಹೊರ ಬರಲು ಕ್ರೀಡಾಕೂಟ ಸಹಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ತಿಳಿಸಿದರು.

ಜಿಲ್ಲಾ ಪೋಲಿಸ್ ಇಲಾಖೆ ವತಿಯಿಂದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕವಾಯತ್ ಮೈದಾನದಲ್ಲಿ ವಾರ್ಷಿಕ ಪೋಲಿಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪೋಲಿಸ್ ಇಲಾಖೆ ಒಂದು ಶಿಸ್ತಿನ ಇಲಾಖೆಯಾಗಿದ್ದು, ವಿರಾಮವಿಲ್ಲದೆ ಸದಾಕಾಲವೂ ಒತ್ತಡದ ನಡುವೆ ಕರ್ತವ್ಯವನ್ನು ನಿರ್ವಹಿಸುವ ಪೋಲಿಸ್ ಸಿಬ್ಬಂದಿಗಳಿಗೆ ಈ ರೀತಿ ಕ್ರೀಡಾಕೂಟ ಒತ್ತಡದಿಂದ ಹೊರಬರಲು ಸಹಕಾರಿಯಾಗಿದೆ ಎಂದರು.

ವಾರ್ಷಿಕ ಕ್ರೀಡಾಕೂಟ ಪೋಲಿಸ್ ಇಲಾಖೆಯಲ್ಲಿ ಸಿಬ್ಬಂದಿ ಮತ್ತು ಅಧಿಕಾರಿಗಳ ನಡುವೆ ಉತ್ತಮ ಬಾಂಧವ್ಯ ಬೆಳೆಯಲು ಕಾರಣವಾಗುತ್ತದೆ. ಅಧಿಕಾರಿಗಳು ಮತ್ತು ಸಿಬ್ಬಂದಿ ಪರಸ್ಪರ ಹೊಂದಾಣಿಕೆಯಿಂದ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮುಂದಿನ ದಿನಗಳಲ್ಲಿ ತಮ್ಮ ಕರ್ತವ್ಯದಲ್ಲಿ ಸಮನ್ವಯತೆ ಸಾಧಿಸಲು ಸಾಧ್ಯವಾಗುತ್ತದೆ ಎಂದರು.

ಕ್ರೀಡಾಕೂಟ ಸ್ಪರ್ಧೆಯಲ್ಲ, ಮನೋರಂಜನೆ. ಇದರಲ್ಲಿ ಪ್ರತಿಯೊಬ್ಬರು ಸಂಭ್ರಮ ಮತ್ತು ಉತ್ಸಾಹದಿಂದ ಭಾಗವಹಿಸಿ ಪ್ರತಿಭೆಯನ್ನು ಗುರುತಿಸಿಕೊಳ್ಳಲು ಒಂದು ವೇದಿಕೆಯಾಗಿದೆ. ಎಲ್ಲರೂ ಒತ್ತಡ ರಹಿತವಾಗಿ ಕ್ರೀಡೆಯಲ್ಲಿ ಭಾಗವಹಿಸುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಕ್ರೀಡಾ ಜ್ಯೋತಿಯನ್ನು ನೀಡಿ ಪುರುಷರ 800 ಮೀಟರ್ ಓಟಕ್ಕೆ ಚಾಲನೆ ನೀಡುವ ಮೂಲಕ ಕ್ರೀಡಾಕೂಟವನ್ನು ಆರಂಭಿಸಲಾಯಿತು. ಈ ವೇಳೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಕಾರ್ಯಾಪ್ಪ ಹಾಗೂ ಜಿಲ್ಲಾ ಪೋಲಿಸ್ ಇಲಾಖೆಯ ಸಿಬ್ಬಂದಿ, ಮಹಿಳಾ ಪೋಲಿಸರು ಹಾಜರಿದ್ದರು.

Leave a Reply