ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಬಂಧನ

11 months ago

ಬೆಂಗಳೂರು: ಆರ್ಸಿಬಿ ಐಪಿಲ್ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಆರ್ ಸಿ ಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೋಸಲೆ ಸೇರಿ ನಾಲ್ವರು ಕಾರ್ಯಕ್ರಮ ಆಯೋಜಕರನ್ನು ಸಿಸಿಬಿ ಪೊಲೀಸರು ಹಾಗೂ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಆರ್ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಜೊತೆ ಡಿಎನ್ಎ ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್ ನನ್ನು ಬಂಧಿಸಲಾಗಿದೆ.

ನಾಲ್ವರು ಮುಂಬೈಗೆ ತೆರಳುತ್ತಿದ್ದಾಗ ಖಚಿತವಾದ ಮಾಹಿತಿಯನ್ನು ಆಧರಿಸಿ  ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಅಲ್ಲಿಂದ ಅವರನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕರೆ ತರಲಾಗಿದೆ. ಇಲ್ಲಿ ಖುದ್ದು ಸಿಸಿಬಿ ಡಿಸಿಪಿ ಅಕ್ಷಯ್ ಎಂ. ನೇತೃತ್ವದಲ್ಲಿ  ನಾಲ್ವರ ವಿಚಾರಣೆ ನಡೆಸಲಾಗುತ್ತಿದೆ. 

ಈ ವೇಳೆ ಕಾರ್ಯಕ್ರಮಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದರೂ ಉಚಿತ ಪಾಸ್ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದು ಏಕೆ? ನಿಮಗೆ ಬೇರೆ ಯಾರಾದರೂ ಆ ರೀತಿಯ ಪೋಸ್ಟ್ ಹಾಕಲು ಹೇಳಿದ್ದರೇ? ಸ್ಟೇಡಿಯಂ ಕಾರ್ಯಕ್ರಮ ನಿಗದಿ ಮಾಡಿಕೊಂಡಿದ್ದು ಯಾವಾಗ?ವಿಕ್ಟರಿ ಪರೇಡ್ ಬಗ್ಗೆ ಹೇಗೆ ನಿರ್ಧಾರ ಕೈಗೊಂಡಿರಿ? ಟಿಕೆಟ್ ವಿಚಾರದಲ್ಲಿ ಗೊಂದಲ ಆಗಿದ್ದು ಏಕೆ?ಕಾಲ್ತುಳಿತ ಪ್ರಕರಣದ ಬಗ್ಗೆ ನಿಮಗೆ ಗೊತ್ತಿರುವುದು ಏನು? ಇಷ್ಟೇ ಅಲ್ಲದೆ, ಇನ್ನೂ ಅನೇಕ ಪ್ರಶ್ನೆಗಳನ್ನು ಬಂಧಿತರಿಗೆ ಕೇಳಲಾಗಿದ್ದು, ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂವರೆಗೂ ವಿಕ್ಟರಿ ಪರೇಡ್ ಎಂದು ಪೊಲೀಸರು ಅನುಮತಿ ನಿರಾಕರಿಸಿದ ನಂತರವೂ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿ ನಂತರ ಡಿಲೀಟ್ ಮಾಡಿದ ಆರೋಪ ನಿಖಿಲ್ ಸೋಸಲೆ ಮೇಲಿದೆ. ಅಲ್ಲದೆ, ಸ್ಟೇಡಿಯಂಗೆ ಉಚಿತ ಪಾಸ್ ಸಂಬಂಧ ಸಾಮಾಜಿಕ ಮಾಧ್ಯಮ ಪೋಸ್ಟ್ ಹಾಕಿದ ಆರೋಪವಿದೆ.

ಅನುಮತಿ ಪಡೆಯದಿದ್ದರೂ ಆರ್ಸಿಬಿ ವಿಜಯೋತ್ಸವಕ್ಕೆ ಮುಂದಾಗಿದ್ದ ಕೆಎಸ್ಸಿಎ ಕಾರ್ಯದರ್ಶಿ ಶಂಕರ್, ಖಜಾಂಜಿ ಜಯರಾಮ್ ಮನೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ‌‌. ಅಷ್ಟೊತ್ತಿಗಾಗಲೇ ಬಂಧನ ಭೀತಿಯಿಂದ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ಇವೆಂಟ್‌ ಮ್ಯಾನೇಜ್‌ಮೆಂಟ್‌ ಕಂಪನಿ ಡಿಎನ್‌ಎ ಮಾಲೀಕ ನಾಪತ್ತೆಯಾಗಿದ್ದಾರೆ.

ರಾಜ್ಯದ ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ಅವರ ಮೊಮ್ಮಗ ವೆಂಕಟ್‌ ವರ್ಧನ್‌ ಡಿಎನ್‌ಎ ಕಂಪನಿಯ ಮುಖ್ಯಸ್ಥರಾಗಿದ್ದಾರೆ. ಸಿಎಂ ಸೂಚನೆ ಮೇರೆಗೆ ಪೊಲೀಸರು ಬಂಧನಕ್ಕೆ ಮುಂದಾಗುತ್ತಿದ್ದಂತೆ ವೆಂಕಟ್‌ ವರ್ಧನ್‌ ನಾಪತ್ತೆಯಾಗಿದ್ದಾರೆ.

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ, ಕರ್ನಾಟಕ ರಾಜ್ಯ ಕ್ರಿಕೆಟ್‌ ಮಂಡಳಿ ಮತ್ತು ಕಾರ್ಯಕ್ರಮ ನಿರ್ವಹಣೆ ಮಾಡಿದ್ದ ಡಿಎನ್‌ಎ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ರಿಟ್ ಅರ್ಜಿ ಸಲ್ಲಿಕೆ: ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕೆಎಸ್ ಸಿಎ ಅಡಳಿತ ಮಂಡಳಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದೆ.

ಕೆಎಸ್ ಸಿಎ ಆಡಳಿತ ಮಂಡಳಿ ಅಧ್ಯಕ್ಷ ರಘುರಾಮ್ ಭಟ್, ಕಾರ್ಯದರ್ಶಿ ಎ.ಶಂಕರ್, ಖಜಾಂಚಿ ಇ.ಎಸ್. ಜೈರಾಮ್ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಎಫ್ ಐಆರ್ ರದ್ದು ಮಾಡುವಂತೆ ಕೊರಿ ಕೆಎಸ್ ಸಿಎ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

Leave a Reply