ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ನೀರೋ: ಎಚ್.ಡಿ.ಕುಮಾರಸ್ವಾಮಿ

2 years ago

ಬೆಂಗಳೂರು: ರೋಮ್ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದನಂತೆ. ಅದೇ ರೀತಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ನೀರೋ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದೆಲ್ಲೆಡೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಉದ್ಯೋಗ ಅರಸಿ ಜನ ಗುಳೆ ಹೋಗುತ್ತಿದ್ದಾರೆ ಇದಾವುದರ ಪರಿವೇ ಇಲ್ಲದೆ ನೀರೋನಂತೆ ನಮ್ಮ ಮುಖ್ಯಮಂತ್ರಿ ಗ್ಯಾರಂಟಿ ಸಮಾವೇಶದಲ್ಲಿ ನಿರತರಾಗಿದ್ದಾರೆ ಎಂದಿದ್ದಾರೆ.

ನೀವು ಮುಖ್ಯಮಂತ್ರಿ ಅಲ್ಲ.ರಾಜ್ಯದ ಪಾಲಿನ ಝೀರೋ. ನಿಮಗೆ ಜನರ ಚಿಂತೆ ಇಲ್ಲ, ಚುನಾವಣೆ ಚಿಂತೆಯಷ್ಟೇ. ಆ ಚಿಂತೆಯೇ ನಿಮ್ಮ ಪಕ್ಷ, ಸರ್ಕಾರಕ್ಕೆ ಚಿತೆಯಾಗಲಿದೆ. ಇದು ಜನರೇ ನುಡಿಯುತ್ತಿರುವ ಭವಿಷ್ಯ. ಪ್ರಜೆಗಳ ಮಾತು, ಆ ಪರಮೇಶ್ವರನ ಮಾತು ಒಂದೇ, ಸುಳ್ಳಾಗದು ಎಂದು ಹೇಳಿದ್ದಾರೆ.

ರಾಜ್ಯ ಇತಿಹಾಸದಲ್ಲಿ ಕಂಡು ಕೇಳರಿಯದ ಬರವಿದೆ. ಜಲಕ್ಷಾಮ ಬಿಗಡಾಯಿಸಿದೆ. ಹನಿ ನೀರಿಗೂ ತತ್ವಾರ, ಜನ ಜಾನುವಾರುಗಳ ಹಾಹಾಕಾರ. ಪರಿಸ್ಥಿತಿ ಹೀಗಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಕೋಟಿ ಕೋಟಿ ರೂ. ಜನರ ತೆರಿಗೆ ಹಣ ಸುರಿದು ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದ ಗ್ಯಾರಂಟಿ ಸಮಾವೇಶಗಳಿಗೆ, ಜಾಹೀರಾತುಗಳಿಗೆ ಮಾಡಿರುವ ಖರ್ಚು ಕುರಿತು ಶ್ವೇತಪತ್ರ ಹೊರಡಿಸಲು ಆಗ್ರಹಿಸಿದ್ದಾರೆ. ಜಾಹೀರಾತು ಜಾತ್ರೆಗಳಿಗೆ ವರ್ಷದಿಂದ ಎಷ್ಟು ಸಾವಿರ ಕೋಟಿ ರೂ. ಸುರಿದಿದ್ದೀರಿ? ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

ನಾಡಿನ ಜನರ ಮುಂದೆ ಈ ಖರ್ಚಿನ ಲೆಕ್ಕ ಇಡಿ. ಬೇಕಾದರೆ ಗ್ಯಾರಂಟಿ ಪ್ರಚಾರ ಸಮಾವೇಶ ಖರ್ಚು ಬಾಬತ್ತಿನ ಶ್ವೇತಪತ್ರ ಹೊರಡಿಸಿ. ಸರ್ಕಾರದ ಅಸಲಿ ಬಣ್ಣ ಏನೆಂಬುದು ಜನರಿಗೆ ಗೊತ್ತಾಗಲಿ ಎಂದು ಸವಾಲೊಡ್ಡಿದ್ದಾರೆ.

ಒಂದು ವರ್ಷದಿಂದ ನಿಮ್ಮ ಇಡೀ ಸರ್ಕಾರದ ಬದುಕು ಜಾಹೀರಾತು ಮೇಳದಲ್ಲೇ ಮುಗಿದು ಹೋಗಿದೆ. ನಿಮ್ಮ ಹಿಂದೆ ಮುಂದೆ ಸುತ್ತುವ ಪಟಾಲಂನ ಏಜೆನ್ಸಿಗಳ ಮೂಲಕ ಜಾಹೀರಾತು ಜಾತ್ರೆಯನ್ನು ಎಗ್ಗಿಲ್ಲದೆ ಮಾಡುತ್ತಿದ್ದೀರಿ. ಬರದಲ್ಲಿ ಬೆಂದು ಕಣ್ಣೀರು ಹಾಕುತ್ತಿರುವ ಜನರ ಹಣವನ್ನು ಹೀಗೆ ಪ್ರಚಾರಕ್ಕಾಗಿ ಸುರಿಯುತ್ತಿರುವ ನಿಮಗೆ ನಾಚಿಕೆ ಆಗುವುದಿಲ್ಲವೇ? ಎಂದಿದ್ದಾರೆ.

Leave a Reply